ಹರಪನಹಳ್ಳಿ, ಮೇ 19- ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಅವರು ಕುಟುಂಬ ಸಮೇತರಾಗಿ ರಾಜ್ಯದ ಪ್ರಸಿದ್ಧ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಚುನಾವಣೆ ಪೂರ್ವದಲ್ಲಿ ಕ್ಷೇತ್ರದಾದ್ಯಂತ ಮತ ಯಾಚನೆಯಲ್ಲಿ ತೊಡಗಿಕೊಂಡಿದ್ದ ಎಂ.ಪಿ. ಲತಾ ಮಲ್ಲಿಕಾರ್ಜುನ್ ಅವರು ಶಾಸಕಿಯಾಗಿ ಆಯ್ಕೆಯಾದ ಬಳಿಕ ಪತಿ ಮಲ್ಲಿಕಾರ್ಜುನ್, ಪುತ್ರ ಗೌತಮ್ ಪ್ರಭು ಅವ ರೊಟ್ಟಿಗೆ ವಿವಿಧ ಮಠಗಳಿಗೆ ಭೇಟಿ ನೀಡಿದ್ದಾರೆ.
ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಮೈಸೂರಿನ ಸುತ್ತೂರು ಸಂಸ್ಥಾನದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರ ಮಠಗಳಿಗೆ ತೆರಳಿ ಸ್ವಾಮೀಜಿಗಳಿಗೆ ಫಲ-ಪುಷ್ಪ ಕೊಟ್ಟು ಗೆಲುವಿನ ಸಂತಸ ಹಂಚಿಕೊಂಡರು.
ಈ ವೇಳೆ ಎಂ.ಪಿ. ಲತಾ ಮಲ್ಲಿಕಾರ್ಜುನ್ ಮಾತನಾಡಿ, ವಿವಿಧ ಮಠಾಧೀಶರ ಆಶೀರ್ವಾದ ಪಡೆದು ಕ್ಷೇತ್ರದ ಹಿತ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಅವರಿಂದ ಸಲಹೆ, ಮಾರ್ಗದರ್ಶನ ಪಡೆಯುತ್ತಿರುವೆ ಎಂದು ತಿಳಿಸಿದರು.