ದಾವಣಗೆರೆ, ಜು.3- ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಅಧೀಕ್ಷಕ ಡಾ. ಕೆ. ಅರುಣ್ ಅವರ ನಿರ್ದೇಶನದಂತೆ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ.ಬಸರಗಿ ಮಾರ್ಗದರ್ಶನದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲೆಯಾದ್ಯಂತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ, ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ತಿಳಿಸಲಾಯಿತು. ಹಾಗೆಯೇ ಮಾದಕ ವಸ್ತುಗಳ ಕಳ್ಳಸಾಗಾಣಿಕೆ ಮಾಡುವುದು ಕಾನೂನು ವಿರುದ್ಧವಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಂಡು ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಎಚ್ಚರಿಸಿ, ಜಾಗೃತಿ ವಹಿಸಿ ಸದೃಢ ಸಮಾಜ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಬೇಕೆಂದು ತಿಳಿಸಲಾಯಿತು.
ಅಲ್ಲದೇ ಪೊಲೀಸ್ ಉಪ ವಿಭಾಗ ಕಛೇರಿ, ವೃತ್ತ ಕಛೇರಿ ಮತ್ತು ಪೊಲೀಸ್ ಠಾಣಾ ಮಟ್ಟದಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಜಾಗೃತಿ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಪ್ರಿನ್ಸಿಪಾಲರುಗಳು, ಹಾಸ್ಟೆಲ್ ಮುಖ್ಯಸ್ಥರುಗಳನ್ನು ಕರೆಯಿಸಿ, ಸಭೆ ನಡೆಸಿ, ಶಾಲಾ- ಕಾಲೇಜುಗಳಲ್ಲಿ ಹಾಗೂ ಹಾಸ್ಟೆಲ್ಗಳಲ್ಲಿ ಹಾಗೂ ಸದರಿ ಸ್ಥಳಗಳ ಆವರಣಗಳಲ್ಲಿ ಮಾದಕ ವಸ್ತುಗಳ ಸೇವನೆಗೆ ಹಾಗೂ ಸಾಗಾಣಿಕೆಗೆ ಅವಕಾಶ ಆಗದಂತೆ ತೀವ್ರ ನಿಗಾವಹಿಸುವುದು. ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ, ಸೂಕ್ತ ತಿಳುವಳಿಕೆ ನೀಡುವುದು. ಹಾಗೇನಾದರೂ ಕಂಡುಬಂದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಲಾಯಿತು.