ರಾಜೀ ಸಂಧಾನವು ಎರಡೂ ಪಕ್ಷಗಾರರಿಗೆ ಲಾಭ

ರಾಜೀ ಸಂಧಾನವು ಎರಡೂ ಪಕ್ಷಗಾರರಿಗೆ ಲಾಭ

ಜುಲೈ 8ರಂದು ಲೋಕ ಅದಾಲತ್: ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರಿ

ದಾವಣಗೆರೆ, ಜು. 3-  ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಭಾಗವಹಿಸಿ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ವಿವಾದಗಳನ್ನು ಇತ್ಯರ್ಥಪಡಿಸುವುದರಿಂದ ಎರಡೂ ಪಕ್ಷಗಾರರಿಗೆ  ಲಾಭವಾಗುತ್ತದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.

 ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಇದೇ ದಿನಾಂಕ 8 ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್ ಕುರಿತು ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಇಂದು ಏರ್ಪಾಡಾಗಿದ್ದ ಸಾರ್ವಜನಿಕರಿಗೆ ಮಾಹಿತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.

ಲೋಕ್ ಅದಾಲತ್‍ನಲ್ಲಿ ಹೆಚ್ಚು ಪ್ರಕರಣಗಳು ಇತ್ಯರ್ಥವಾಗುವಂತೆ ನೋಡಿಕೊಳ್ಳಬೇಕು. ಇದಕ್ಕೆ ಎಲ್ಲಾ ವಕೀಲರ ಸಹಕಾರ ಬಹಳ ಮುಖ್ಯವಾಗಿರುತ್ತದೆ. ರಾಜೀ ಸಂಧಾನದ ಮೂಲಕ ಇತ್ಯರ್ಥವಾಗುವ ಎಲ್ಲಾ ಪ್ರಕರಣಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ತೆಗೆದುಕೊಳ್ಳಲಾಗುತ್ತದೆ. ಸಾರ್ವಜನಿಕರು ಇದರ ಲಾಭ ಪಡೆಯುವ ಮೂಲಕ ಯಶಸ್ಸಿಗೆ ಸಹಕರಿಸಬೇಕೆಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಮಾತನಾಡಿ, ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ್ದು, ರಾಜೀಯಾಗಬಲ್ಲ ಹೆಚ್ಚಿನ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು ಮತ್ತು ರಾಜೀ ಪೂರ್ವ ಸಮಾಲೋಚನೆಗಳನ್ನು ನಡೆಸಬಹುದು ಎಂದು ಹೇಳಿದರು.

ಇದೇ ದಿನಾಂಕ 8 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್ ಕುರಿತು ಸಾರ್ವಜನಿಕರಿಗೆ ಮಾಹಿತಿ ಮತ್ತು ಅರಿವು ಮೂಡಿಸಲು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ, ಆಟೋ ರಿಕ್ಷಾಗೆ ಧ್ವನಿ ವರ್ಧಕವನ್ನು ಅಳವಡಿಸಿ ನಗರದೆಲ್ಲೆಡೆ ಪ್ರಚಾರ ಕೈಗೊಳ್ಳಲಾಯಿತು ಹಾಗೂ ಸಾರ್ವಜನಿಕರಿಗೆ ಭಿತ್ತಿ ಪತ್ರಗಳನ್ನು ಹಂಚಲಾಯಿತು.

ಸಾರ್ವಜನಿಕರು ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು. 

ಹೆಚ್ಚಿನ ಮಾಹಿತಿಗಾಗಿ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದಾವಣಗೆರೆ ಇವರ ದೂರವಾಣಿ ಸಂಖ್ಯೆ 08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ ದೂರವಾಣಿ ಸಂಖ್ಯೆ: 08192-296885,
ಹೊನ್ನಾಳಿ ದೂರವಾಣಿ ಸಂಖ್ಯೆ: 08188- 251732, ಚನ್ನಗಿರಿ ದೂರವಾಣಿ ಸಂಖ್ಯೆ 08189-229195 ಮತ್ತು ಜಗಳೂರು ದೂರವಾಣಿ ಸಂಖ್ಯೆ: 08196-227600 ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದರು.

ನ್ಯಾಯಾಧೀಶರಾದ ವಿಜಯಾನಂದ, ಪ್ರವೀಣ್ ಕುಮಾರ್, ಎನ್.ಶ್ರೀಪಾದ್,  ನಿವೇದಿತಾ, ರೇಷ್ಮಾ, ಅಪ್ತಾಬ್, ಸಮೀರ್ ಕೊಳ್ಳಿ, ಪ್ರಶಾಂತ, ಮಲ್ಲಿಕಾರ್ಜುನ, ಸಿದ್ದರಾಜು ಸೇರಿದಂತೆ ಜಿಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರು ಇದ್ದರು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ  ಶಿವಪ್ಪ ಸಲಗೇರಿ, 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ವಿಜಯಾನಂದ, 2ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಶ್ರೀನಿವಾಸ, ಕೌಟುಂಬಿಕ ನ್ಯಾಯಾಧೀಶ  ದಶರಥ,  ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್‌ಕುಮಾರ್, ಸಂಘದ ಪದಾಧಿಕಾರಿಗಳಾದ ಜಿ.ಕೆ.ಬಸವರಾಜ್ ಗೋಪನಾಳು, ಎ.ಎಸ್.ಮಂಜುನಾಥ್, ಎಸ್.ಬಸವರಾಜ್, ಚೌಡಪ್ಪ, ನಾಗರಾಜ್, ಭಾಗ್ಯಲಕ್ಷ್ಮಿ ಮತ್ತಿತರರು  ಉಪಸ್ಥಿತರಿದ್ದರು.

error: Content is protected !!