ಸ್ವಾತಂತ್ರ್ಯ ಇದೆ ಎಂದು ಸ್ವೇಚ್ಛೆಯಿಂದ ವರ್ತಿಸಬಾರದು

ಸ್ವಾತಂತ್ರ್ಯ ಇದೆ ಎಂದು ಸ್ವೇಚ್ಛೆಯಿಂದ ವರ್ತಿಸಬಾರದು

ಮಹಿಳೆಯರಿಗೆ ಕಾನೂನು ಅರಿವು, ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್

ದಾವಣಗೆರೆ, ಅ. 5- ಮಹಿಳೆಯರು ಆಯಾ ರಾಷ್ಟ್ರ, ರಾಜ್ಯ, ಜಿಲ್ಲೆ, ತಾಲ್ಲೂಕು ಮಟ್ಟದ ಕಾನೂನು ಸೇವಾ ಪ್ರಾಧಿಕಾರದ ನೆರವಿನ ಮೂಲಕ ನ್ಯಾಯ ಪಡೆಯಬೇಕು. ಮಹಿಳೆಯರ ಸುರಕ್ಷತೆಗಾಗಿ ಹಲವು ಕಾನೂನುಗಳನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಜೇಶ್ವರಿ ಹೆಗಡೆ ಹೇಳಿದರು.

ನಗರದ ಕುವೆಂಪು ಕನ್ನಡ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆದ ಮಹಿಳೆಯರಿಗೆ ಕಾನೂನು ಅರಿವು, ಮಹಾನ್ ನಾಯಕರ ಕುರಿತ ವಿಚಾರ ಸಂಕಿರಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರ ಮೇಲೆ ನಿರಂತರವಾಗಿ ಶೋಷಣೆ, ದೌರ್ಜನ್ಯ ನಡೆಯುತ್ತಾ ಬರುತ್ತಿದ್ದು, ಇದನ್ನು ಅರಿತು ವರದಕ್ಷಿಣೆ ನಿಷೇಧ, ಬಾಲ್ಯವಿವಾಹ ನಿಷೇಧ, ಪೋಕ್ಸೋ ಸೇರಿದಂತೆ ಅನೇಕ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ. ಇವುಗಳನ್ನು ಅರಿತುಕೊಂಡರೆ ಮಹಿಳೆಯರಿಗೆ ಶ್ರೀರಕ್ಷೆಯಾಗಲಿವೆ ಎಂದರು.

ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಮಾತನಾಡಿ, ಶ್ರೇಣೀಕೃತ ಸಮಾಜದಲ್ಲಿ ಮಹಿಳೆಯರು, ದಲಿತರು ಒಂದಿಲ್ಲೊಂದು ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಸ್ವಾತಂತ್ರ್ಯಾ ನಂತರ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ನೀಡುವ ಸದುದ್ಧೇಶದಿಂದ ಹಲವಾರು ಕಾನೂನುಗಳು ಜಾರಿಯಾಗಿವೆ ಎಂದು ಹೇಳಿದರು.

ಸ್ವಾತಂತ್ರ್ಯ ಇದೆ ಎಂದು ಸ್ವೇಚ್ಛೆಯಿಂದ ವರ್ತಿಸಬಾರದು. ನಾವು ಮಾಡುವ ಕೆಲಸದಿಂದ ಮತ್ತೊಬ್ಬರಿಗೆ ತೊಂದರೆಯಾದರೆ ಅನುಭವಿಸಿದ ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ಅರ್ಥ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ಕಾನೂನುಗಳಿಲ್ಲದಿದ್ದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಹಿಂದಿನಿಂದಲೂ ದೌರ್ಜನ್ಯಕ್ಕೆ ಒಳಗಾಗುತ್ತಾ ಬಂದಿರುವ ಮಹಿಳೆಯರ ಸುರಕ್ಷತೆಗಾಗಿ ಹಲವಾರು ಕಾನೂನುಗಳು ಜಾರಿಯಾಗಿವೆ ಎಂದು ಹೇಳಿದರು.

ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ. ಕರೆಣ್ಣವರ್ ಮಾತನಾಡಿ, ದೇಶದ ಮಹಾಪುರುಷರ ಆದರ್ಶಗಳನ್ನು ಪಾಲಿಸಿದರೆ ಪ್ರಗತಿ ಸಾಧ್ಯ. ವಿದ್ಯಾರ್ಥಿಗಳೆಲ್ಲರೂ ಭಾರತದ ಸಂವಿಧಾನವನ್ನು ಓದಬೇಕು. ದೇಶ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ, ದೇಶಕ್ಕೆ ನಮ್ಮ ಕೊಡುಗೆ ಏನು ಎಂಬುದರ ಬಗ್ಗೆ ಅವಲೋಕಿಸಬೇಕೆಂದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಜಿಗಳಿ ಹಾಲೇಶ್ ಅಧ್ಯಕ್ಷತೆ ವಹಿಸಿದ್ದರು.

ದಾವಣಗೆರೆ ವಿವಿ ಕುಲಪತಿ ಪ್ರೊ.ಬಿ.ಡಿ. ಕುಂಬಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೆ. ನಾಗರಾಜ್, ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಹೆಚ್. ಮಲ್ಲೇಶ್ ಮತ್ತಿತರರು ಭಾಗವಹಿಸಿದ್ದರು.

error: Content is protected !!