ಕರ್ನಾಟಕ ಸಂಭ್ರಮ – 50ರ ಅಂಗವಾಗಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವರ್ಷಪೂರ್ತಿ ತಿಂಗಳಿಗೊಂದರಂತೆ ನಗರದ ಕುವೆಂಪು ಕನ್ನಡ ಭವನದಲ್ಲಿ `ವಿಶೇಷ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಲರವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗೌರವ ಕಾರ್ಯದರ್ಶಿ ಬಿ.ದಿಳ್ಯಪ್ಪ ತಿಳಿಸಿದರು.
ಇಂದು ಸಂಜೆ 5.30 ಘಂಟೆಗೆ ನವೆಂಬರ್ ತಿಂಗಳ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಸಾಹಿತಿ ಪ್ರೊ. ಎಸ್.ಬಿ.ರಂಗನಾಥ್ ಕಾರ್ಯಕ್ರಮ ಉದ್ಘಾಟಿಸುವರು. ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹರಿಹರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಎಸ್.ಎಂ.ಗೌರಮ್ಮ ಕರ್ನಾಟಕ ವೈಭವ ಕುರಿತಾಗಿ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಪ್ತಗಿರಿ ವಿದ್ಯಾಲಯದ ಮ್ಯಾನೇಜಿಂಗ್ ಟ್ರಸ್ಟಿ ಸಿ. ಶ್ರೀರಾಮಮೂರ್ತಿ ಆಗಮಿಸುವರು. ಸಪ್ತಗಿರಿ ವಿದ್ಯಾಲಯದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಇರುತ್ತದೆ.
ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಟಿ.ಶಿವಶಂಕರ್, ಶಿವಂಗಿ ಶಣ್ಮರಿ, ಕೆ.ರೂಪ್ಲಾ ನಾಯಕ್ ಹಾಗೂ ಮೌಲಾನಾ ಆಜಾದ್ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಾಂಸ್ಕೃತಿಕ ಸಂಘ ಇವರುಗಳನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದು ಜಿಲ್ಲಾ ಕಸಾಪ ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ವಿವರಿಸಿದ್ದಾರೆ.