ಮತದಾರರಿಗೆ ಆಮಿಷ: ನೋಟಿಸ್

ದಾವಣಗೆರೆ, ಡಿ.10- ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಗಿಫ್ಟ್‌ ಬಾಕ್ಸ್‌ ಹಾಗೂ ಹಣ ಹಂಚಿಕೆ ಮಾಡಿ ಗೆದ್ದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಾಲ್ವರಿಗೆ ಹೈಕೋರ್ಟ್‌ ನೋಟಿಸ್ ಜಾರಿ ಮಾಡಿದೆ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸುಭಾನ್ ಖಾನ್ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಎಸ್. ಮಲ್ಲಿಕಾರ್ಜುನ್, ಶಾಸಕ ಶಾಮನೂರು ಶಿವಶಂಕರಪ್ಪ, ರಾಜ್ಯ ಮುಖ್ಯ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಅವರಿಗೆ ಡಿಸೆಂಬರ್ 4ರಂದು ನೋಟಿಸ್ ಜಾರಿ ಮಾಡಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಮತದಾರರಿಗೆ ಗಿಫ್ಟ್ ಬಾಕ್ಸ್, ಹಣದ ಹಂಚಿಕೆ ಮಾಡುತ್ತಿರುವ ಬಗ್ಗೆ ಕೆಟಿಜೆ ನಗರ ಮತ್ತು ಗಾಂಧಿನಗರ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದು, ಚುನಾವಣಾ ಅಧಿಕಾರಿಗಳೇ ಇದನ್ನು ಪತ್ತೆ ಹಚ್ಚಿ ದೂರು ದಾಖಲಿಸಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. 

ಈ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರಿಗೆ ದೂರು ಸಲ್ಲಿಸಲಾಗಿತ್ತು.‌ ಅವರೂ ಯಾವುದೇ ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿ ದಾವೆ ಸಲ್ಲಿಸಲಾಗಿತ್ತು ಎಂದು ಮಾಹಿತಿ ನೀಡಿದರು.

ಪ್ರಕರಣ ದಾಖಲಾಗಿದ್ದರೂ ಸರಿಯಾಗಿ ತನಿಖೆ ನಡೆಸದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅವರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ರಾಜ್ಯಪಾಲರಿಗೂ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಅಲ್ಲಾಭಕ್ಷಿ ಹಾಗೂ ಮಹಮ್ಮದ್ ಪರ್ವೇಜ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

error: Content is protected !!