ಕೋವಿಡ್ ನಿಗಾ, ವಿಶೇಷ ವಾರ್ಡ್‌ಗೆ ಸೂಚನೆ

ಕೋವಿಡ್ ನಿಗಾ, ವಿಶೇಷ ವಾರ್ಡ್‌ಗೆ ಸೂಚನೆ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್‍ ಕೃಷ್ಣ

ದಾವಣಗೆರೆ, ಜ. 5 – ಕೊರೊನಾದ ಜೆಎನ್1 ತಳಿ ಹಿನ್ನೆಲೆಯಲ್ಲಿ ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಹಾಸಿಗೆ ಮತ್ತು ಆಕ್ಸಿಜನ್ ಘಟಕಗಳನ್ನು ಸಿದ್ದಪಡಿಸಿಟ್ಟುಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ  ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಸೂಚನೆ ನೀಡಿದರು. 

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಈ ಸೂಚನೆ ನೀಡಿದರು. 

ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ 1019 ಜನರಿಗೆ ಕೋವಿಡ್ ಪರೀಕ್ಷೆ ನಡೆಸಿದ್ದು ಅದರಲ್ಲಿ 22 ಜನರಿಗೆ ಕೋವಿಡ್ ಕಂಡು ಬಂದಿದ್ದು ಜೆಎನ್1 ಯಾವುದೇ ತಳಿ ಇರುವುದಿಲ್ಲ. ಇಬ್ಬರು ಮಾತ್ರ ಇತರೆ ಕಾಯಿಲೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದಂತೆ ಎಲ್ಲರೂ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾರಿಗೂ ತೀವ್ರತರವಾದ ಲಕ್ಷಣಗಳಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಷಣ್ಮುಖಪ್ಪ ಮಾಹಿತಿ ನೀಡಿದರು. 

ಈ ವೇಳೆ ಚಿಗಟೇರಿ ಆಸ್ಪತ್ರೆಯಲ್ಲಿಯೂ ಪ್ರತ್ಯೇಕ ಕೋವಿಡ್ ವಾರ್ಡ್ ಕಾಯ್ದಿರಿಸುವಂತೆ ಮತ್ತು ಪಿಎಂ ಕೇರ್ಸ್‍ನಡಿ ಪೂರೈಸಲಾದ ವೆಂಟಿಲೇಟರ್‍ಗಳನ್ನು ಸಿದ್ದಪಡಿಸಿಟ್ಟುಕೊಳ್ಳುವಂತೆ ಗುಂಜನ್ ಕೃಷ್ಣ ಸೂಚನೆ ನೀಡಿದರು. 

ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇದ್ದ ವೈದ್ಯರ ಹುದ್ದೆಗಳನ್ನು ನೇರ ಸಂದರ್ಶನದಲ್ಲಿ ಭರ್ತಿ ಮಾಡಲಾಗಿದೆ. ತಜ್ಞ ವೈದ್ಯರು ನೇರ ಸಂದರ್ಶನಕ್ಕೆ ಹಾಜರಾಗದ ಕಾರಣ ಈ ಹುದ್ದೆಗಳು ಖಾಲಿ ಇವೆ. ತಾಯಿ ಮತ್ತು ಮಗುವಿನ ಮರಣ ಪ್ರಮಾಣ ಕಡಿಮೆ ಮಾಡಲು ಹೆರಿಗೆ ಆಸ್ಪತ್ರೆಯ ನಿಗಾ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸಲು ಆರೋಗ್ಯ ಅಭಿಯಾನದಡಿ ನಿವೃತ್ತ ತಜ್ಞ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಡಿಹೆಚ್‍ಓ ಸಭೆಗೆ ತಿಳಿಸಿದರು. ತಾಯಿ ಮತ್ತು ಮಗುವಿನ ಮರಣ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಬೇಕು, ಮರಣ ಹೊಂದಿದ ಪ್ರಕರಣಗಳನ್ನು ಕಡ್ಡಾಯವಾಗಿ ಆಡಿಟ್ ಮಾಡಿಸಬೇಕೆಂದು ಕಾರ್ಯದರ್ಶಿಯವರು ಸೂಚನೆ ನೀಡಿದರು. 

ಸಕಾಲದಲ್ಲಿ ಹಲವು ಸೇವೆಗಳನ್ನು ನೀಡಲಾಗುತ್ತಿದೆ. ಆದರೆ ಗ್ರಾಮ ಪಂಚಾಯಿತಿಯಲ್ಲಿ ಚರಂಡಿ ದುರಸ್ತಿ, ಬೀದಿ ದೀಪ ದುರಸ್ತಿ ಬಗ್ಗೆ ಬರುವ ಅರ್ಜಿಗಳನ್ನು ಸಕಾಲದಲ್ಲಿ ದಾಖಲಿಸುತ್ತಿಲ್ಲ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಹೇಳಿದರು.

ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸಲು ಸೂಚನೆ ನೀಡಲು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯವರಿಗೆ ತಿಳಿಸಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. 

error: Content is protected !!