ದಾವಣಗೆರೆ, ಫೆ.14- ತಾಲ್ಲೂಕಿನ ಮೆಳ್ಳೇಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛಗೊಳಿಸಿದ್ದ ಶಿಕ್ಷಕಿಯನ್ನು ಮಂಗಳವಾರ ಅಮಾನತ್ತು ಮಾಡಲಾಗಿದೆ.
ಶಾಲೆಯ ಮುಖ್ಯ ಶಿಕ್ಷಕಿ ಜೊತೆಗಿದ್ದ ಮನಸ್ತಾಪದ ಕಾರಣಕ್ಕೆ ಶಿಕ್ಷಕಿ ಸಿ.ಕೆ. ಸಾವಿತ್ರಮ್ಮ ಅವರು ಸೋಮವಾರ ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛಗೊಳಿಸಿ, ಅದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.
ಶಾಲಾ ಶಿಕ್ಷಣ ಇಲಾಖೆಯು ನಡೆಸಿದ ಪ್ರಾಥಮಿಕ ತನಿಖೆಯಿಂದ ಇದು ಉದ್ದೇಶಪೂರ್ವಕ ಕೃತ್ಯ ಎಂಬುದು ದೃಢಪಟ್ಟಿದ್ದರಿಂದ ಅವರನ್ನು ಅಮಾನತ್ತು ಮಾಡಲಾಗಿದೆ. ವಿದ್ಯಾರ್ಥಿನಿಯರು ಬಕೆಟ್, ಕಸಪೊರಕೆ ಹಿಡಿದು ಶೌಚಾಲಯ ಸ್ವಚ್ಛಗೊಳಿಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ.
ದಾವಣಗೆರೆ ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಶೇರ್ ಅಲಿ ಹಾಗೂ ಸಿಬ್ಬಂದಿ ಶಾಲೆಗೆ ಭೇಟಿ ನೀಡಿ ಗ್ರಾಮಸ್ಥರು, ಎಸ್ಡಿಎಂಸಿ ಸದಸ್ಯರೊಂದಿಗೆ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದಾಗ, ‘ಶಿಕ್ಷಕಿ ಸಾವಿತ್ರಮ್ಮ ಅವರೇ ಶೌಚಾಲಯ ಸ್ವಚ್ಛಗೊಳಿಸಲು ತಿಳಿಸಿದ್ದರು’ ಎಂದು ವಿದ್ಯಾರ್ಥಿನಿಯರು ಹೇಳಿಕೆ ನೀಡಿದ್ದರು. ನನ್ನ ಮೇಲಿನ ಮನಸ್ತಾಪದಿಂದ ಶಿಕ್ಷಕಿಯೇ ಈ ರೀತಿ ಮಾಡಿದ್ದಾರೆ ಎಂದು ಮುಖ್ಯ ಶಿಕ್ಷಕಿ ಶೋಭಾ ದೂರಿದ್ದಾರೆ.