ಮಳೆ: ಜಿಲ್ಲೆಯಲ್ಲಿ ವಿಪತ್ತು ನಿರ್ವಹಣಾ ತಂಡ ಸನ್ನದ್ಧ

ಮಳೆ: ಜಿಲ್ಲೆಯಲ್ಲಿ ವಿಪತ್ತು ನಿರ್ವಹಣಾ ತಂಡ ಸನ್ನದ್ಧ

ಕಂದಾಯ ಸಚಿವರ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ಮುಂದಿನ ಮೂರ್ನಾಲ್ಕು ದಿನ ಕಟ್ಟೆಚ್ಚರ ವಹಿಸಿ, ಪ್ರಕೃತಿ ವಿಕೋಪದಿಂದಾಗುವ ಅನಾಹುತ ತಡೆಯಲು ತಕ್ಷಣ ಕ್ರಮವಹಿಸಲು ಜಿಲ್ಲಾಧಿಕಾರಿ ಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚನೆ

ದಾವಣಗೆರೆ, ಜೂ. 19- ಜಿಲ್ಲೆಯಲ್ಲಿ ತುಂಗಭದ್ರಾ ನದಿ ಅಪಾಯದ ಮಟ್ಟದಲ್ಲಿ ಸದ್ಯಕ್ಕೆ ಹರಿಯುತ್ತಿಲ್ಲ. ಈಗಾಗಲೇ ಎಲ್ಲಾ ಗ್ರಾಮ ಪಂಚಾಯಿತಿವಾರು ಟಾಸ್ಕ್ ಪೋರ್ಸ್ ಸಮಿತಿ ಸಕ್ರಿಯಗೊಳಿಸಿದ್ದು, ನದಿಯಲ್ಲಿ ಹರಿಯುತ್ತಿರುವ ನೀರಿನ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿ ಸುವ ಕೆಲಸ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹೇಳಿದ್ದಾರೆ.

ಅವರು ಶುಕ್ರವಾರ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಮಲೆನಾಡು, ಕರಾವಳಿ, ಪಶ್ಚಿಮಘಟ್ಟಗಳಲ್ಲಿ ಸುರಿಯುತ್ತಿರುವ ಮಳೆ ಯಿಂದ ಬಾಧಿತವಾದ ಜಿಲ್ಲೆಗಳ ಜಿಲ್ಲಾಧಿಕಾರಿ ಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಪಾಲ್ಗೊಂಡು ಜಿಲ್ಲೆಯಲ್ಲಿನ ಮಳೆಯ ಕುರಿತು ಮಾಹಿತಿ ನೀಡಿದರು.

ನದಿಗೆ ಲಕ್ಷಕ್ಕಿಂತ ಅಧಿಕ ಕ್ಯೂಸೆಕ್ಸ್  ನೀರು ಬಂದಾಗ ಕೆಲವು ಕಡೆ ಮಾತ್ರ ಸಮಸ್ಯೆಯಾಗಲಿದೆ. ಅಂತಹ ಕಡೆ 44 ಕುಟುಂಬಗಳನ್ನು ಗುರುತಿಸ ಲಾಗಿದೆ ಮತ್ತು ವಿಪತ್ತು ನಿರ್ವಹಣಾ ತಂಡವನ್ನೂ ಸಹ ಸನ್ನದ್ದವಾಗಿಡಲಾಗಿದೆ ಎಂದು ತಿಳಿಸಿದರು. 

ಇದಕ್ಕೂ ಮುನ್ನ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು,  ದಾವಣಗೆರೆ ಜಿಲ್ಲೆ ಯಲ್ಲಿ ತುಂಗಭದ್ರಾ ನದಿ ಇದ್ದು ಮಲೆನಾಡಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯ ಮತ್ತು ಭದ್ರಾ ಜಲಾಶಯದಿಂದ ನೀರು ಬಿಟ್ಟಾಗ ಹೊನ್ನಾಳಿ, ಹರಿಹರದ ಕೆಲವು ಭಾಗಗಳಲ್ಲಿ ಪ್ರವಾಹ ಉಂಟಾಗಬಹುದು. ಪ್ರಸ್ತುತ ತುಂಗಾ ನದಿಯಿಂದ ಮಾತ್ರ 80 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ತುಂಗಭದ್ರಾ ಜಲಾಶಯಕ್ಕೆ 1 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಹೇಳಿದರು.

ರಸ್ತೆ ದುರಸ್ತಿ, ಶಾಲೆ, ಅಂಗನವಾಡಿಗಳ ದುರಸ್ಥಿಗಾಗಿ ಪ್ರಕೃತಿ ವಿಕೋಪ ನಿಧಿಯಡಿ ಅನುದಾನವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗುತ್ತಿದೆ. ಎಲ್ಲೆಲ್ಲಿ ರಸ್ತೆ ಗುಂಡಿ ಬಿದ್ದಿವೆ, ಅಂತಹ ಕಡೆ ಒಂದು ಅಡಿ ಆಳ ತೆಗೆದು ಅದಕ್ಕೆ ಜಲ್ಲಿಕಲ್ಲುಗಳು ಮತ್ತು ಸಿಮೆಂಟ್ ವೆಟ್ ಮಿಕ್ಸಿಂಗ್ ಹಾಕಿ ತಾತ್ಕಾಲಿಕವಾಗಿ ಸರಿಪಡಿಸಬೇಕು. ಶಾಲಾ, ಅಂಗನವಾಡಿಗಳಿದ್ದಲ್ಲಿ ಸೋರದಂತೆ ಹೊದಿಕೆ ಹಾಕಲು ಕ್ರಮ ವಹಿಸಲು ಸೂಚಿಸಿ ತುರ್ತು ಕಾಮಗಾರಿಗಳನ್ನು ಕೈಗೊಂಡು ಮುಂದಿನ 15 ದಿನಗಳಲ್ಲಿ ಬಿಲ್ ಪಾವತಿಸಲು ಸೂಚನೆ ನೀಡಿದರು. 

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರತ್ಯೇಕವಾಗಿ ಪ್ರವಾಸ ಕೈಗೊಳ್ಳುವ ಮೂಲಕ ರಸ್ತೆ ದುರಸ್ತಿ, ಶಾಲೆ, ಅಂಗನವಾಡಿ, ವಿದ್ಯುತ್ ಸಂಪರ್ಕ ಕಡಿತ ದುರಸ್ತಿಯನ್ನು ಸ್ಥಳದಲ್ಲಿದ್ದು ಮಾಡಿಸಬೇಕು, ಪ್ರತಿಯೊಂದು ಕಾಮಗಾರಿಗಳ ವೀಕ್ಷಣೆ ಮಾಡಿದ ನಂತರವೇ ಅದರ ಬಿಲ್ ಪಾವತಿ ಮಾಡಲು ತಿಳಿಸಿದರು. 

 ವಿಡಿಯೋ ಕಾನ್ಫರೆನ್ಸ್‍ನಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಉಪವಿಭಾಗಾಧಿಕಾರಿ ಅಭಿಷೇಕ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. 

error: Content is protected !!