ಕರ್ನಾಟಕ ದಲಿತ ಚಳವಳಿಗೆ 50 ವರ್ಷಗಳ ಸಂಭ್ರಮೋತ್ಸವ

ಕರ್ನಾಟಕ ದಲಿತ ಚಳವಳಿಗೆ  50 ವರ್ಷಗಳ ಸಂಭ್ರಮೋತ್ಸವ

ಹರಿಹರ, ಜು. 29 – ಬೆಂಗಳೂರಿನಲ್ಲಿ ಆಗಸ್ಟ್ 7 ರಂದು ಪ್ರೊ.ಬಿ. ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕದ ದಲಿತ ಚಳವಳಿಗೆ 50 ವರ್ಷಗಳ ಸಂಭ್ರಮೋತ್ಸವ ನಿಮಿತ್ತ ಆಯೋಜಿಸಿರುವ ಬೆಂಗಳೂರು ಚಲೋ ಕಾರ್ಯಕ್ರಮದ ಪೋಸ್ಟರನ್ನು ಸೋಮವಾರ ನಗರದಲ್ಲಿ ಮಾಜಿ ಶಾಸಕ ಎಸ್. ರಾಮಪ್ಪ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಮಪ್ಪ, ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಬಲವರ್ಧನೆಗಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ, ಬೇಡಿಕೆಗಳು ನ್ಯಾಯ ಸಮ್ಮತವಾಗಿದ್ದು, ಸರ್ಕಾರ ಈ ಬೇಡಿಕೆಗಳನ್ನು ಈಡೇರಿಸುವ ಭರವಸೆ ಇದೆ, ನಿಮ್ಮ ಹೋರಾಟಕ್ಕೆ ಜಯ ಸಿಗಲಿ ಎಂದು ಹಾರೈಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ) ಹರಿಹರ ತಾಲ್ಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಮಾತನಾಡಿ, ಕದಸಂಸ ಸ್ಥಾಪಕ ಪ್ರೊ.ಬಿ. ಕೃಷ್ಣಪ್ಪರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ, ಕಾಂತ ರಾಜ್ ಆಯೋಗದ ವರದಿ ಜಾರಿ, ಎಸ್‍ಸಿಪಿ, ಟಿಎಸ್‍ಪಿ ಯೋಜನೆ ಅನುದಾನದಲ್ಲಿ ಬಡವರ ವಸತಿ ಯೋಜನೆಗೆ ತಲಾ ರೂ.10 ಲಕ್ಷ ಸಹಾಯಧನ ಮಂಜೂರು.

ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿಕೆ, ನಮೂನೆ 57ರಡಿ ಅರ್ಜಿ ಸಲ್ಲಿಸಲು ಉಳಿದ ಸಾಗುವಳಿದಾ ರರಿಗೆ ಅವಕಾಶ ನೀಡಬೇಕು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದಡಿ ಪ್ರತಿ ವಿಧಾನ ಸಭಾ ಕ್ಷೇತ್ರವಾರು ಸೌಲಭ್ಯಗಳನ್ನು ಪಡೆಯುವ ಫಲಾನುಭವಿಗಳ ಸಂಖ್ಯೆ ಹೆಚ್ಚಿಸಬೇಕು.

ಹಾಸ್ಟೆಲ್ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು ರೂ.3 ಸಾವಿರಕ್ಕೆ ಏರಿಕೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಗಳ ಸಂಘದ ವ್ಯಾಪ್ತಿಯ ವಸತಿ ಶಾಲಾ, ಕಾಲೇಜುಗಳಿಗೆ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಹೊರ ಸಂಪನ್ಮೂಲದಡಿ ಕೆಲಸ ಮಾಡುತ್ತಿರುವ ನೌಕಕರ ಸೇವೆ ಖಾಯಂ.

ಸಮಾಜ ಕಲ್ಯಾಣ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಸರ್ಕಾರವೇ ನ್ಯಾಯ ಸಮ್ಮತವಾಗಿ ರೂ. 24 ಸಾವಿರ ವೇತನ ನೀಡಬೇಕೆಂಬ ಬೇಡಿಕೆಗಳನ್ನು ಈ ಸಂದರ್ಭದಲ್ಲಿ ಸರ್ಕಾರದ ಮುಂದೆ ಇಡಲಾಗಿದ್ದು. ಈ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿ ಯವರಿಗೆ ಮನವಿ ಸಲ್ಲಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಚೌಡಪ್ಪ ಸಿ. ಭಾನುವಳ್ಳಿ, ಕಡ್ಲೆಗೊಂದಿ ತಿಮ್ಮಣ್ಣ, ಬೆಳ್ಳೂಡಿ ಆನಂದ್, ಪ್ರದೀಪ್, ದುರುಗೇಶ್ ಕೆ. ಬೇವಿನಹಳ್ಳಿ, ಪೃಥ್ವಿ, ಅರುಣ್, ಸಚಿನ್ ಇದ್ದರು.

error: Content is protected !!