ಕೆರೆಗಳ ಹೂಳೆತ್ತುವ, ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಆಗ್ರಹ

ದಾವಣಗೆರೆ, ಮಾ. 10- ಮಳೆಗಾಲ ಪ್ರಾರಂಭದ ವೇಳೆಗೆ ಕೆರೆಗಳ ಹೂಳೆತ್ತುವ, ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕೆಂದು ನೆಲ, ಜಲ ಹಾಗೂ ಪರಿಸರ ಸಂರಕ್ಷಣಾ ಆಂದೋಲನದ ಬಲ್ಲೂರು ರವಿಕುಮಾರ್ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಗಾಲದ ಹೊತ್ತಿಗೆ ಕೆರೆಗಳ ಹೂಳೆತ್ತುವುದರಿಂದ ಅಂತರ್ಜಲ ಪ್ರಮಾಣ ಹೆಚ್ಚಾಗುವುದಲ್ಲದೇ ನೀರಿನ ಸಂಗ್ರಹಣಾ ಸಾಮರ್ಥ್ಯ ಹೆಚ್ಚಾಗುತ್ತದೆ. ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ರಾಜ್ಯದ ಮಹಾನಗರ ಪಾಲಿಕೆ, ಪುರಸಭೆ, ನಗರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಕೆರೆಗಳ ಹೂಳೆತ್ತುವ ಮೂಲಕ ಶೇ. 40 ರಷ್ಟು ನೀರು ದೊರೆಯುತ್ತದೆ. ನೀರಿನ ಸಮಸ್ಯೆ ಉಂಟಾ ಗುವುದಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಮನಕ್ಕೆ ತರಲಾಗಿದೆ ಎಂದರು.

ಕಳೆದ ಒಂದು ವರ್ಷದಿಂದ ನಡೆಸುತ್ತಿರುವ ಹೋರಾಟದ ಫಲವಾಗಿ ದಾವಣಗೆರೆ ಜಿಲ್ಲೆಯ 538 ಕೆರೆಗಳಲ್ಲಿ ಒಟ್ಟು 47 ಕೆರೆಗಳ ಹೂಳೆತ್ತಲು ಕಾರ್ಯಾದೇಶ ನೀಡಲಾಗಿದೆ ಎಂದು ತಿಳಿಸಿದರು.

ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಎರಡು ಕೆರೆಗಳ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಲಾಗಿದೆ. ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಎರಡು ಕೆರೆಗಳ ನಿರ್ಮಾಣ ಮಾಡಲು ಒಪ್ಪಿಕೊಂಡಿದ್ದಾರೆ. ಕಡ್ಡಾಯವಾಗಿ ಕೆರೆಗಳ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ ಶಾಸಕರ ಮನೆಗಳ ಮಂದೆ ಹೋರಾಟ, ಘೇರಾವ್ ಹಾಕಲಾಗುತ್ತದೆ ಎಂದು ಎಚ್ಚರಿಸಿದರು.

ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್ ಕಚೇರಿಯಲ್ಲಿ ಮತ್ತು ಅಧಿಕಾರಿಗಳ ಮನೆಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಬೇಕು. ಆದ್ದರಿಂದ ನೀರಿನ ಉಳಿತಾಯ ಆಗಲಿದೆ ಎಂದು ತಿಳಿಸಿದರು. ಒಕ್ಕೂಟದ ಅಂಜಿನಪ್ಪ ಪೂಜಾರ್, ಮಾಯಕೊಂಡದ ಅಶೋಕ್, ಮೀಯಾಪುರ ತಿರುಮಲೇಶ್, ಪ್ರವೀಣ್, ಕರಿಬಸಪ್ಪ ಮತ್ತಿತರು ಸುದ್ದಿಗೋಷ್ಠಿಯಲ್ಲಿದ್ದರು. 

error: Content is protected !!