ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಪ್ರತಿಭಟನೆ
ದಾವಣಗೆರೆ, ಜ.3- ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದ ಪ್ರಾರ್ಥನಾ ಸ್ಥಳಗಳ ಮೇಲಿನ ದೌರ್ಜನ್ಯ ಖಂಡಿಸಿ, ನಗರ ಪಾಲಿಕೆ ಆವರಣದಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನಲ್ಲಿ ಕೆಲ ವ್ಯಕ್ತಿಗಳು ಚರ್ಚ್ ಒಳಗೆ ನುಗ್ಗಿ ಪ್ರಾರ್ಥನೆ ಮಾಡುತ್ತಿದ್ದವರ ಮೇಲೆ ದೈಹಿಕವಾಗಿ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕ್ರೈಸ್ತ ಸಮುದಾಯದವರ ಪವಿತ್ರ ದೇವರಾದ ಏಸು ಕ್ರಿಸ್ತರ ಪ್ರತಿಮೆಗಳನ್ನು ಭಗ್ನಗೊಳಿಸು ತ್ತಿರುವ ದುಷ್ಕರ್ಮಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ, ಕಾನೂನಾತ್ಮಕ ನ್ಯಾಯ ಒದಗಿಸಬೇಕು. ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪವಿತ್ರ ಚರ್ಚ್ಗಳಿಗೆ ಬೀಗ ಹಾಕಿ ದೌರ್ಜನ್ಯ ವೆಸಗಿರುವ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್ ಮುಖಂಡ ಡಿ. ಬಸವರಾಜ್ ಆಗ್ರಹಿಸಿದರು.
ಕ್ರೈಸ್ತ ಸಮುದಾಯದವರ ಪವಿತ್ರ ಚರ್ಚ್ಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯಗಳನ್ನು ತಡೆಯಬೇಕು ಹಾಗೂ ಚರ್ಚ್ಗಳಿಗೆ ಸೂಕ್ತ ಭದ್ರತೆಯನ್ನು ಕಲ್ಪಿಸಿಕೊಡ ಬೇಕು. ಕ್ರೈಸ್ತ ಸಮುದಾಯದವರ ಪವಿತ್ರ ದೇವರಾದ ಏಸು ಕ್ರಿಸ್ತರ ಪ್ರತಿಮೆಗಳನ್ನು ಭಗ್ನಗೊಳಿಸುತ್ತಿರುವ ದುಷ್ಕರ್ಮಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ, ಕಾನೂನಾತ್ಮಕ ನ್ಯಾಯ ಒದಗಿಸಬೇಕು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಕೆ.ಜಿ.ಶಿವಕುಮಾರ್, ಅಯೂಬ್ ಪೈಲ್ವಾನ್, ವಿಪಕ್ಷ ನಾಯಕ ಎ. ನಾಗರಾಜ್, ಪಾಲಿಕೆ ಸದಸ್ಯರಾದ ಜಿ.ಎಸ್. ಮಂಜುನಾಥ್, ಸೈಯದ್ ಚಾರ್ಲಿ, ಅಬ್ದುಲ್ ಲತೀಫ್, ಸುಧಾ ಇಟ್ಟಿಗುಡಿ ಮಂಜುನಾಥ್, ಆಶಾ ಉಮೇಶ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಕೆ.ಎಲ್. ಹರೀಶ್ ಬಸಾಪುರ, ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಜಾನ್ ಮುಖಂಡರಾದ ಕೋಳಿ ಇಬ್ರಾಹಿಂ, ಕೊಡಪಾನ ದಾದಾಪೀರ್, ಮೊಟ್ಟೆ ದಾದಾಪೀರ್, ಅಬ್ದುಲ್ ಜಬ್ಬಾರ್, ರಾಕೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.