ಅಂಬೇಡ್ಕರ್ ಭವನಕ್ಕೆ ಶೀಘ್ರ ಶಂಕುಸ್ಥಾಪನೆ

ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಸದ ಸಿದ್ದೇಶ್ವರ

ದಾವಣಗೆರೆ, ಏ. 14 – ನಗರದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮೇ ಅಂತ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಹಾಗೂ ನಗರ ಪಾಲಿಕೆಗಳ ಸಂಯುಕ್ತಾ ಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.

ಬಡ ಕುಟುಂಬದಲ್ಲಿ ಜನಿಸಿದ್ದ ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿಯಾದರು, ಮಾತೃತ್ವದ ರಜೆಯನ್ನು ಮೊದಲ ಬಾರಿ ಕಲ್ಪಿಸಿದರು, ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆಯಿಂದ 8 ಗಂಟೆಗೆ ಇಳಿಸಿದರು. ಹಿಂದೂ ಸಂಹಿತೆಯ ಅನ್ವಯ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ನೀಡಲು ಸಾಧ್ಯವಾಗದೇ ಇದ್ದಾಗ 1951ರಲ್ಲಿ ಕಾನೂನು ಸಚಿವ ಹುದ್ದೆಗೆ ರಾಜೀನಾಮೆ ನೀಡಲೂ ಹಿಂಜರಿಯಲಿಲ್ಲ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಸ್.ಎ. ರವೀಂದ್ರನಾಥ್, ಬಹುತ್ವವನ್ನು ಬಿಂಬಿಸುವ ವಿಶ್ವದಲ್ಲೇ ಉತ್ತಮವಾದ ಸಂವಿಧಾನವನ್ನು ಅಂಬೇಡ್ಕರ್ ಒದಗಿಸಿದ್ದಾರೆ. ಇಂತಹ ಸಂವಿಧಾನವನ್ನು ಅರಗಿಸಿಕೊಂಡು ಜನರಿಗೆ ಒಳ್ಳೆಯ ಕೆಲಸ ಮಾಡಬೇಕು ಎಂದರು.

ಜನತಾ ಪಕ್ಷದ ಸರ್ಕಾರ ಇದ್ದಾಗ ಮೈತ್ರಿ ಧರ್ಮ ಪಾಲಿಸದ ಕಾರಣ ಬಾಬು ಜಗಜೀವನರಾಂ ಅವರು ಪ್ರಧಾನ ಮಂತ್ರಿ ಆಗಲು ಸಾಧ್ಯವಾಗಲಿಲ್ಲ. 1980ರಲ್ಲಿ ಜನತಾ ಪಕ್ಷ ಬಾಬು ಜಗಜೀವರಾಂ ಅವರನ್ನು ಪ್ರಧಾನ ಮಂತ್ರಿಯಾಗಿ ಬಿಂಬಿಸಿ ಚುನಾವಣಾ ಪ್ರಚಾರ ಮಾಡಿತ್ತು. ಆದರೆ, ಜಗಜೀವನರಾಂ ಅವರ ಸಮುದಾಯದ ಜನರೇ ಅವರಿಗೆ ಮತ ಹಾಕದೇ ಕಾಂಗ್ರೆಸ್‌ಗೆ ಮತ ಹಾಕಿದರು ಎಂದು ಹೇಳಿದರು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಅಭಿವೃದ್ಧಿಯ ಫಲವನ್ನು ಎಲ್ಲರಿಗೂ ಸಮನಾಗಿ ತಲುಪಿಸಬೇಕಿದೆ. ಮಕ್ಕಳಿಗೆ ಸಂವಿಧಾನದ ಆಶಯಗಳನ್ನು ತಿಳಿಸಬೇಕು ಎಂದು ಹೇಳಿದರು.

ಬಾಬು ಜಗಜೀವನರಾಂ ಕುರಿತು ದಾವಣಗೆರೆ ವಿ.ವಿ.ಯ ಡಾ. ಬಾಬು ಜಗಜೀವನರಾಂ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಹೆಚ್. ವಿಶ್ವನಾಥ್ ಹಾಗೂ ಅಂಬೇಡ್ಕರ್ ಕುರಿತು ನಿವೃತ್ತ ಉಪನ್ಯಾಸಕ ಪ್ರೊ. ಟಿ. ರಾಜಪ್ಪ ಉಪನ್ಯಾಸ ನೀಡಿದರು.

ಈ ವೇಳೆ ಹೆಗ್ಗೆರೆ ರಂಗಪ್ಪ ಹಾಗೂ ಐರಣಿ ಚಂದ್ರು ಅವರಿಂದ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ವೇದಿಕೆಯ ಮೇಲೆ ಜಿ.ಪಂ. ಅಧ್ಯಕ್ಷೆ ಕೆ.ವಿ. ಶಾಂತಕುಮಾರಿ, ಶಾಸಕ ಹಾಗೂ ಲಿಡ್ಕರ್ ನಿಗಮದ ಅಧ್ಯಕ್ಷ ಪ್ರೊ. ಎನ್‌. ಲಿಂಗಣ್ಣ, ಪಾಲಿಕೆ ಮೇಯರ್ ಎಸ್.ಟಿ. ವೀರೇಶ್, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಎನ್. ಲೋಕೇಶ್ವರಪ್ಪ, ಜಿ.ಪಂ. ಸದಸ್ಯರಾದ ಬಸವಂತಪ್ಪ, ತೇಜಸ್ವಿ ಪಟೇಲ್, ಎಸ್ಪಿ ಹನುಮಂತರಾಜ, ಎಡಿಸಿ ಪೂಜಾರ್ ವೀರಮಲ್ಲಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ರೇಷ್ಮ ಜಿ. ಕೌಸರ್ ಮತ್ತಿತರರು ಉಪಸ್ಥಿತರಿದ್ದರು.

ಗಂಗಾಧರ ನಿಟ್ಟೂರು ನಿರೂಪಿಸಿದರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮತ್ತಿತರರು ಉಪಸ್ಥಿತರಿದ್ದರು.

error: Content is protected !!