ಡೆತ್ ಆಡಿಟ್ ಸಮಿತಿ ಮರು ರಚನೆಗೆ ಡಿಸಿ ಸೂಚನೆ

ದಾವಣಗೆರೆ, ಏ.24- ಜಿಲ್ಲೆಯಲ್ಲಿ ಸಂಭವಿಸುವ ಕೋವಿಡ್ ಅಥವಾ ನಾನ್ ಕೋವಿಡ್ ಸಾವುಗಳ ಕುರಿತು ವಿಶ್ಲೇಷಣೆ ನಡೆಸಲು ಈ ಹಿಂದೆ ರಚಿಸಲಾಗಿದ್ದ ಡೆತ್ ಆಡಿಟ್ ಸಮಿತಿಯನ್ನು ತಕ್ಷಣವೇ ಮರು ರಚಿಸಿ, ಇಂದಿನಿಂದಲೇ ಸಂಭವಿಸುವ ಯಾವುದೇ ಸಾವಿನ ವರದಿಯನ್ನು ನೀಡಬೇಕೆಂದು ಡಿಹೆಚ್‍ಓ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ  ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚಿಸಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ವೈದ್ಯಾಧಿಕಾರಿಗಳು, ವೈದ್ಯರು ಮತ್ತು ಎರಡು ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ತುರ್ತು ಸಭೆ ನಡೆಸಿದರು.

ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡಿಸಿ ಆದಿಯಾಗಿ ಎಲ್ಲರೂ ಒಂದು ತಂಡದಲ್ಲಿ ಶ್ರದ್ದೆಯಿಂದ ಕಾರ್ಯ ನಿರ್ವಹಿಸಬೇಕು ಎಂದ ಅವರು, ವಿವಿಧ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದರು.

ತಜ್ಞರ ಸಮಿತಿ ಸಭೆ:   ವೈದ್ಯಕೀಯ ತಜ್ಞರ ಸಮಿತಿಯ ಸದಸ್ಯರು ಪ್ರತಿ ಎರಡು ದಿನಗಳಿಗೆ ಒಮ್ಮೆ ಸಭೆಯನ್ನು ನಡೆಸಿ, ಆಸ್ಪತ್ರೆಯ ಸಕ್ರಿಯ ಪ್ರಕರಣಗಳು, ಆಕ್ಸಿಜನ್ ಬೆಡ್‍ಗಳಲ್ಲಿ ಎಷ್ಟು ಜನ ರೋಗಿಗಳು ಯಾವ ಸ್ಥಿತಿಯಲ್ಲಿದ್ದಾರೆ, ಯಾರಿಗೆ ಏನು ಅವಶ್ಯಕತೆ ಇದೆ ಹಾಗೂ ಮುಂದಿನ ಹತ್ತು ದಿನಗಳ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಿದ್ದಪಡಿಸಿ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಫ್ಲೈಯಿಂಗ್ ಸ್ಕ್ವಾಡ್ ರಚನೆ : ಜಿಲ್ಲಾಸ್ಪತ್ರೆ ಉಗ್ರಾಣ ಹಾಗೂ ಇತರೆ ಕೋವಿಡ್ ನಿರ್ವಹಿಸುತ್ತಿರುವ ಆಸ್ಪತ್ರೆಗಳ ಫಾರ್ಮಸಿಗಳಲ್ಲಿ ಔಷಧಗಳ ಲಭ್ಯತೆ ಹಾಗೂ ಔಷಧಗಳ ಬಳಕೆ, ಹೆಚ್ಚಿನ ಬಳಕೆ ಮತ್ತು ದುರ್ಬಳಕೆ ಕುರಿತು ಉಸ್ತುವಾರಿ ನೋಡಿಕೊಳ್ಳಲು ಫ್ಲೈಯಿಂಗ್ ಸ್ಕ್ವಾಡ್ ರಚಿಸಲಾಗುವುದು. ಈ ಫ್ಲೈಯಿಂಗ್ ಸ್ಕ್ವಾಡ್ ಪೊಲೀಸರ ಸಹಾಯ ಪಡೆದುಕೊಂಡು ಉಗ್ರಾಣ, ಫಾರ್ಮಸಿಗಳಿಗೆ ಭೇಟಿ ನೀಡಿ ಕೋವಿಡ್‍ಗೆ ಸಂಬಂಧಿ ಸಿದ ಯಾವುದೇ ಔಷಧಿ, ಲಸಿಕೆ ಕುರಿತು ಪರಿಶೀಲಿಸಿ ಔಷಧ ಲಭ್ಯತೆ ಮತ್ತು ಬಳಕೆ ಬಗ್ಗೆ ವಿವರವಾದ ವರದಿ ನೀಡಬೇಕೆಂದರು.

ಕೆಪಿಎಂಇ ಅಡಿಯಲ್ಲಿ ಕಳೆದ ಬಾರಿ ರಚಿಸಲಾಗಿದ್ದ ತಂಡಗಳನ್ನು ಪುನರ್‌ ರಚಿಸಲಾಗುವುದು. ಈ ತಂಡಗಳು ಮೆಡಿಕಲ್ ಶಾಪ್‍ಗಳ ವರದಿ ಮತ್ತು ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ರೆಮಿಡಿಸಿವಿರ್ ಸೇರಿದಂತೆ ಇತರೆ ಲಸಿಕೆ ಮಾರಾಟ ಮಾಡುತ್ತಿದ್ದರೆ ಅಂತಹ ಆಸ್ಪತ್ರೆಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಆರ್‍ಟಿಪಿಸಿಆರ್ ಲ್ಯಾಬ್ ನಿರ್ವಹಣೆಗೆ ನೋಡಲ್ ಅಧಿಕಾರಿ : ಪ್ರತಿ ದಿನ ಎಷ್ಟು ಪರೀಕ್ಷೆಗಳು ನಡೆಯುತ್ತಿವೆ ಹಾಗೂ ಸಂಪೂರ್ಣ ಲ್ಯಾಬ್‍ನ ಕಾರ್ಯವೈಖರಿಯನ್ನು ವಿಶ್ಲೇಷಿಸಿ ಕ್ರಮ ವಹಿಸಲು ಡಾ.ಗಂಗಾಧರ್ ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗುವುದು ಎಂದರು.

ಪ್ರಸ್ತುತ ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕದ ಪರೀಕ್ಷೆಗಳು ಸಾಕಷ್ಟು ಆಗುತ್ತಿದ್ದರೂ ಡಾಟಾ ಎಂಟ್ರಿಯಲ್ಲಿ ಅದು ಸರಿಯಾಗಿ ಅಪ್‍ಡೇಟ್ ಮಾಡದೇ ಇರುವ ಕಾರಣ ರಾಜ್ಯ ವರದಿಯಲ್ಲಿ ಕಡಿಮೆ ತೋರಿಸುತ್ತಿದೆ. ಆದ ಕಾರಣ ಟಿಹೆಚ್‍ಓ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಡಾಟಾ ಎಂಟ್ರಿ ಸಮರ್ಪಕವಾಗಿ ಮಾಡಿಸಲು ಕ್ರಮ ಕೈಗೊಳ್ಳಬೇಕು. ಸಿಜಿ ಆಸ್ಪತ್ರೆಯಲ್ಲಿ ಪ್ರಸ್ತುತ 2000 ಪೂಲಿಂಗ್ ಪರೀಕ್ಷೆ ಮಾಡಿಸುವ ಸಾಮರ್ಥ್ಯ ಇದೆ. ಸಕ್ರಿಯ ಪ್ರಕರಣದ 10 ಪಟ್ಟು ಟೆಸ್ಟ್ ಆಗಬೇಕಿದ್ದು, ಈ ಬಗ್ಗೆ ಕ್ರಮ ವಹಿಸಲಾಗುತ್ತಿದೆ. ಹಾಗೂ ಆಸ್ಪತ್ರೆಗೆ ಅಗತ್ಯವಿರುವ ಎಲ್ಲ ಅಗತ್ಯ ಔಷಧಿಗಳು ಮತ್ತು ಸುರಕ್ಷತಾ ಪರಿಕರಗಳ ಖರೀದಿಗೆ ಕ್ರಮ ವಹಿಸಲಾಗಿದೆ ಎಂದರು.

ಇಂದು ಕೋವಿಡ್ ಲಸಿಕೆಯ ಗುರಿ 13,000 ಸಾವಿರ ಇದ್ದು 7,000 ಲಸಿಕೆ ಸರಬರಾಜಾಗಿದ್ದು ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ನಗರ ಹಾಗೂ ಎಲ್ಲ ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ವ್ಯವಸ್ಥೆ ಮಾಡಲಾಗಿದೆ. ಜೊತೆಗೆ 3 ಆಂಬ್ಯುಲೆನ್ಸ್ ಖರೀದಿ ಹಾಗೂ ಶವ ಸಾಗಣೆ ವಾಹನ ಸಿದ್ದಪಡಿಸಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ವಯಂಪ್ರೇರಿತ ವೈದ್ಯರಿಗೆ ಸ್ವಾಗತ : ಕೋವಿಡ್ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಕೋವಿಡ್‍ಗೆ ಸ್ವಯಂಪ್ರೇರಿತವಾಗಿ ಸೇವೆ ಸಲ್ಲಿಸಲು ಇಚ್ಚಿಸುವ ವೈದ್ಯರನ್ನು ಜಿಲ್ಲಾಡಳಿತ ಸ್ವಾಗತಿಸುತ್ತದೆ ಎಂದು ತಿಳಿಸಿದರು.

ಸಿಜಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಎಂಐಸಿಯು ನ್ನು ಸ್ಥಾಪಿಸಿ ಕಾರ್ಯ ನಿರ್ವಹಿಸುತ್ತಿದ್ದು, ರೂಂ ನಂ.65 ಮತ್ತು 66 ರಲ್ಲಿ ಸ್ಟೆಪ್ ಡೌನ್ ಎಂಐಸಿಯು ಸ್ಥಾಪಿಸಲು ಎಲ್ಲ ರೀತಿಯ ಕ್ರಮ ವಹಿಸಲಾಗುತ್ತಿದೆ. ಅಗತ್ಯ ಸಿಬ್ಬಂದಿ ನೇಮಕ ಅಥವಾ ನಿಯೋಜನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಬಾಪೂಜಿ ಮತ್ತು ಎಸ್‍ಎಸ್ ಮೆಡಿಕಲ್ ಕಾಲೇಜುಗಳಿಂದ ತಲಾ ಒಬ್ಬರು ಮೈಕ್ರೋಬಯಾಲಜಿಸ್ಟ್‍ಗಳನ್ನು ತಾತ್ಕಾಲಿಕವಾಗಿ 2 ಅಥವಾ 3 ತಿಂಗಳ ಕಾಲ ಸಿಜಿ ಆಸ್ಪತ್ರೆಗೆ ನಿಯೋಜಿಸುವಂತೆ ಕಾಲೇಜುಗಳ ಮುಖ್ಯಸ್ಥರುಗಳಿಗೆ ಡಿಸಿ ಮನವಿ ಮಾಡಿದರು.

ಎಸ್‍ಎಸ್ ಆಸ್ಪತ್ರೆಯ ಡಾ.ಕಾಳಪ್ಪನವರ್ ಮಾತನಾಡಿ, ರೋಗಿಗಳಿಗೆ ಲಿಕ್ವಿಡ್ ಆಕ್ಸಿಜನ್ ಉತ್ತಮವಾಗಿದ್ದು, ಇದರ ಲಭ್ಯತೆ ಹೆಚ್ಚಿಸಬೇಕೆಂದರು. ಬಾಪೂಜಿ ಆಸ್ಪತ್ರೆಯ ಡಾ.ರವಿ ಮಾತನಾಡಿ, ಲಿಕ್ವಿಡ್ ಆಕ್ಸಿಜನ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮ ವಹಿಸುವುದು ಸೂಕ್ತ ಎಂದರು.

ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್ ಪಾಲಿಕೆ ಆಯುಕ್ತ ಸ್ಮಾರ್ಟ್ ಸಿಟಿ ಎಂಡಿ ರವೀಂದ್ರ ಮಲ್ಲಾಪುರ, ವಿಶ್ವನಾಥ ಮುದಜ್ಜಿ, ಜಿ.ಪಂ ಉಪ ಕಾರ್ಯದರ್ಶಿ ಆನಂದ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಎಸ್‍ಎಲ್‍ಓ ರೇಷ್ಮಾ ಹಾನಗಲ್, ಡಿಹೆಚ್‍ಓ ಡಾ.ನಾಗರಾಜ್, ಡಿಎಸ್‍ಓ ಡಾ.ರಾಘವನ್, ಡಿಎಸ್ ಡಾ.ಜಯಪ್ರಕಾಶ್, ಆರ್‍ಸಿಹೆಚ್‍ಓ ಡಾ.ಮೀನಾಕ್ಷಿ, ಜಿಲ್ಲಾ ಮಲೇರಿಯಾಧಿಕಾರಿ ಡಾ.ನಟರಾಜ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್, ಡಾ.ರೇಣುಕಾರಾಧ್ಯ, ಡಾ.ಮುರಳೀಧರ ಸೇರಿದಂತೆ ತಾಲ್ಲೂಕು ವೈದ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು

error: Content is protected !!