ಜಿಲ್ಲೆಯ ಶಾಸಕರಿಗೆ ಉಸ್ತುವಾರಿ ನೀಡಲು ಕರವೇ ಆಗ್ರಹ

ದಾವಣಗೆರೆ, ಜು.30- ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಜಿಲ್ಲೆಯ ಶಾಸಕರಲ್ಲೊಬ್ಬರನ್ನು ನೇಮಕ ಮಾಡುವಂತೆ ಕರವೇ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

ಬಿಜೆಪಿ ಶಾಸಕರುಗಳಾದ ಎಸ್.ಎ. ರವೀಂದ್ರ ನಾಥ್, ಎಸ್‌.ವಿ. ರಾಮಚಂದ್ರ, ರೇಣುಕಾಚಾರ್ಯ, ಲಿಂಗಣ್ಣ, ಮಾಡಾಳ್ ವಿರೂಪಾಕ್ಷಪ್ಪ ಅವರುಗಳಲ್ಲಿ ಒಬ್ಬರನ್ನು ಸಚಿವರನ್ನಾಗಿ ಮಾಡಬೇಕು. ಈ ಹಿಂದೆ ಜಿಲ್ಲಾ ಉಸ್ತುವಾರಿಯನ್ನಾಗಿ ಭೈರತಿ ಬಸವರಾಜು ಅವರನ್ನು ಮಾಡಿದ್ದು, ಜಿಲ್ಲೆಯ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿಲ್ಲ. ಕಾರಣ ಜಿಲ್ಲೆಯ ಶಾಸಕರನ್ನೇ ಉಸ್ತುವಾರಿಯನ್ನಾಗಿ ಮಾಡಬೇಕು. ಇದರಿಂದ ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ  ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದ ನೆಲ-ಜಲ, ಭಾಷೆ, ಸಂಸ್ಕೃತಿ, ಸಂಸ್ಕಾರ ಮತ್ತು ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಸರೋಜಿನ ಮಹಿಷಿ ವರದಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಬೇಕು ಎಂದು ಕರವೇ ಆಗ್ರಹಿಸಿದೆ.

error: Content is protected !!