ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದರೂ ಉತ್ತರ ನೀಡದ ಅಧಿಕಾರಿಗಳು
ಹೊನ್ನಾಳಿ, ಜು, 9 – ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಗೆ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲವೆಂದು ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಮೊನ್ನೆ ಕಚೇರಿಗೆ ಧಿಡೀರ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರಲ್ಲದೇ, ತಡವಾಗಿ ಬಂದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಹೊನ್ನಾಳಿ – ನ್ಯಾಮತಿ ಅವಳಿ ತಾಲ್ಲೂಕಿನಲ್ಲಿ 4,881 ರೈತರಿಗೆ ಅಡಿಕೆ, ಬಾಳೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, 68 ಕೋಟಿ ರೂಪಾಯಿ ಮಂಜೂರು ಮಾಡಲಾಗಿದ್ದು, ಹದಿನೆಂಟು ಸಾವಿರದ ಐನೂರು ಮಾನವ ದಿನಗಳು ಮಂಜೂರಾಗಿವೆ. ಆದರೆ, ಫಲಾನುವಿ ರೈತರು ಪ್ರತಿನಿತ್ಯ ಕಚೇರಿಗೆ ಬಂದರೆ, ಅಲ್ಲಿ ಸಿಬ್ಬಂದಿಗಳೇ ಇರುವುದಿಲ್ಲ. ಇದರಿಂದ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಅಲ್ಲದೇ, ಇಲಾಖೆಯಲ್ಲಿ ಬ್ರೋಕರ್ ಗಳ ಹಾವಳಿ ಹೆಚ್ಚಾಗಿದೆ ಎಂದು ರೈತರು ಶಾಸಕರ ಗಮನಕ್ಕೆ ತಂದರು.
ಕಚೇರಿಯಲ್ಲಿ 11 ಜನ ಸಿಬ್ಬಂದಿಗಳಿದ್ದು ಯಾರೂ ಕೂಡ ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿರಲಿಲ್ಲ. ಇದರಿಂದ ರೈತರಿಗೆ ಸಮಸ್ಯೆ ಉಂಟಾಗುತ್ತಿದ್ದು, ಇನ್ನಾದರೂ ಅಧಿಕಾರಿಗಳು ರೈತರ ಸಮಸ್ಯೆಗೆ ಸರಿಯಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಾಗಿ ಸೂಚನೆ ನೀಡಿದರು.
ಇನ್ನು ಗೋವಿನಕೋವಿ ಸಹಾಯಕ ತೋಟಗಾರಿಕೆ ಅಧಿಕಾರಿ ಬಸವರಾಜಪ್ಪ ಹಾಗೂ ತೋಟಗಾರಿಕೆ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ನರಸಿಂಹಪ್ಪ ಕಚೇರಿಗೆ ಸರಿಯಾಗಿ ಬಾರದ ಹಿನ್ನೆಲೆಯಲ್ಲಿ ಕಾರಣ ಕೇಳಿ ಇಲಾಖೆಯಿಂದ ನೋಟಿಸ್ ನೀಡಿದ್ದರೂ ಕೂಡ ನೋಟಿಸ್ಗೆ ಅವರು ಉತ್ತರ ನೀಡಿರಲಿಲ್ಲ.
ಈ ಬಗ್ಗೆ ಶಾಸಕರ ಗಮನಕ್ಕೆ ಬಂದ ಕೂಡಲೇ ನೋಟಿಸ್ಗೆ ಉತ್ತರ ನೀಡದ ಇಬ್ಬರು ಅಧಿಕಾರಿಗಳನ್ನು ಅಮಾನತ್ತು ಮಾಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೂಚನೆ ನೀಡಿದರು.
ತೋಟಗಾರಿಕೆ ಇಲಾಖೆಯಲ್ಲಿ ರೈತರ ಜಿಯೋ ಟ್ಯಾಗ್, ಜಿಪಿಎಸ್ ವರ್ಕ್ ಅಪ್ ಲೋಡ್ ಮಾಡಲು ವರ್ಕ್ ಟೆಕ್ನೀಷಿಯನ್ ಹಾಗೂ ಕಂಪ್ಯೂಟರ್ ಆಪರೇಟರ್ ಕೊರತೆ ಇದ್ದು, ಈ ಬಗ್ಗೆ ಅಧಿಕಾರಿಗಳು ಶಾಸಕರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಕೂಡಲೇ ಸಿಬ್ಬಂದಿಗಳನ್ನು ನಿಯೋಜನೆ ಮಾಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.