ಸೊಳ್ಳೆಗಳ ನಿಯಂತ್ರಣಕ್ಕೆ, ಸ್ವಚ್ಛತೆಗೆ ಆದ್ಯತೆ ನೀಡಿ

ಆರ್.ಸಿ.ಹೆಚ್ ಅಧಿಕಾರಿ ಡಾ.ಮೀನಾಕ್ಷಿ

ದಾವಣಗೆರೆ, ಆ.30- ಸೊಳ್ಳೆ ನಿಯಂತ್ರಣಕ್ಕೆ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಮೀನಾಕ್ಷಿ ಹೇಳಿದರು.

ರೊನಾಲ್ಡ್ ರಾಸ್ ಅವರ ಸವಿನೆನಪಿಗಾಗಿ ಆಚರಿಸುವ ವಿಶ್ವ ಸೊಳ್ಳೆ ದಿನಾಚರಣೆಯನ್ನು ಇತ್ತೀಚೆಗೆ ನಗರದ ಭಾರತ್ ಕಾಲೋನಿಯಲ್ಲಿನ ಆರೋಗ್ಯ ಕೇಂದ್ರದಲ್ಲಿ ಜನಜಾಗೃತಿ ಜಾಥಾ ಮೂಲಕ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ಮನೆಯ ಸುತ್ತಲಿನ ಪರಿಸರದಲ್ಲಿರುವ ಘನತ್ಯಾಜ್ಯ ವಸ್ತುಗಳಲ್ಲಿ ನೀರು ಶೇಖರಣೆ ಆಗದಂತೆ ಜಾಗ್ರತೆ ವಹಿಸುವಂತೆ ತಿಳಿಸಿದರು.

ಈಗಾಗಲೇ ಅತೀ ಹೆಚ್ಚಾಗಿ ಮಳೆಗಾಲ ಪ್ರಾರಂಭವಾಗಿದ್ದು, ಡೆಂಗ್ಯೂ ಜ್ವರ, ಚಿಕನ್‍ಗುನ್ಯಾ ರೋಗಗಳನ್ನು ಹರಡುವ ಸೊಳ್ಳೆಗಳು ಹೆಚ್ಚಾಗಿ ನೀರಿನಲ್ಲಿ ಹುಟ್ಟುವುದರಿಂದ ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿ, ತಮ್ಮ ಮನೆಯ ನೀರಿನ ಎಲ್ಲಾ ಪರಿಕರಗಳನ್ನು  ಕನಿಷ್ಠ ವಾರಕ್ಕೊಮ್ಮೆ ಚೆನ್ನಾಗಿ ತೊಳೆದು ನೀರು ತುಂಬಿ ಭದ್ರವಾಗಿ ಮುಚ್ಚಿಡಬೇಕು ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ.ವೆಂಕಟೇಶ್ ಮಾತನಾಡಿ, ವಿಶ್ವ ಸೊಳ್ಳೆ ದಿನಾಚರಣೆಯನ್ನು ಪ್ರತಿ ವರ್ಷವೂ ಆಚರಿಸಲಾಗುತ್ತಿದ್ದು, ವಿವಿಧ ಜಾತಿಯ ಸೊಳ್ಳೆಗಳ ಬಗ್ಗೆ ಹಾಗೂ ಅವುಗಳ ಉತ್ಪತ್ತಿ ತಾಣಗಳ ಬಗ್ಗೆ, ನಿಯಂತ್ರಣದ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಮುಖ್ಯ ಉದ್ದೇಶ ಇದಾಗಿರುತ್ತದೆ ಎಂದು ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಎಚ್.ಉಮಾಪತಿ ಮಾತನಾಡಿ, ಸೊಳ್ಳೆಗಳ ನಿಯಂತ್ರಣದ ಜೊತೆಗೆ ಈ ವರ್ಷ ಹರಡಿರುವಂತಹ ಕೊರೊನಾ ರೋಗದ ಬಗ್ಗೆಯು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದ ಅವರು, ಮಾಸ್ಕ್ ಧರಿಸುವುದು, ಸ್ಯಾನಿಟೈಜರ್ ಬಳಸುವುದು, ಜನಸಂದಣಿ ಪ್ರದೇಶಗಳಲ್ಲಿ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಅಗಿಂದಾಗ್ಗೆ ಕೈಗಳನ್ನು ತೊಳೆಯಬೇಕು. ಆ ಮೂಲಕ ಎಲ್ಲಾ ಮುಂಜಾಗ್ರತೆ ಕ್ರಮಗಳನ್ನು ವಹಿಸುವುದರಿಂದ ಕೊರೊನಾ ಹೋಗಲಾಡಿಸಬಹುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್‌ಗುನ್ಯಾ, ಮಲೇರಿಯಾ ಕಾಯಿಲೆಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಸೊಳ್ಳೆಗಳ ನಿಯಂತ್ರಣಕ್ಕೆ ಸಾರ್ವಜನಿಕರು ಇನ್ನಷ್ಟು ಜಾಗೃತಿ ವಹಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಡಾ.ಸುನೀತಾ ಕೋಬಾಡೆ ದಗಡು, ತಾಲ್ಲೂಕು ಹಿರಿಯ ಪುರುಷ ಆರೋಗ್ಯ ಸಹಾಯಕ ವೆಂಕಟಾಚಲ ಕುಮಾರ, ಕಿರಿಯ ಪುರುಷ ಆರೋಗ್ಯ ಸಹಾಯಕ ಪ್ರಕಾಶ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಮಹಿಳಾ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು ಎಂದು ತಾಲ್ಲೂಕು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

error: Content is protected !!