ದೇಶದ ಪ್ರಗತಿಗೆ ಶಿಕ್ಷಕರೇ ಕಾರಣ

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ 

ದಾವಣಗೆರೆ, ಸೆ. 5- ದೇಶದ ಪ್ರಗತಿಗೆ ಶಿಕ್ಷಕರೇ ಕಾರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಪ್ರತಿಪಾದಿಸಿದರು.

ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯ ಹಾಗೂ ಅರಿವುಗಳನ್ನು ಬೆಳೆಸುವ ಶಕ್ತಿ ಶಿಕ್ಷಕರಲ್ಲಿದೆ. ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜಮುಖಿ ಯಾಗಿ ಕೆಲಸ ಮಾಡಬೇಕು. ಆ ಮೂಲಕ ತಮ್ಮ ಕಾರ್ಯವನ್ನು ಬಹಳಷ್ಟು ಶ್ರದ್ಧೆಯಿಂದ ನಿರ್ವಹಿಸಬೇಕು ಎಂದರು.

ಹಿಂದೆ ಗುರು, ಮುಂದೆ ಗುರಿ ಇರಬೇಕು. ಆಗ ಮಾತ್ರ ಜೀವನದಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯ. ವ್ಯಕ್ತಿಯ ವ್ಯಕ್ತಿತ್ವ ರೂಪಿಸುವಲ್ಲಿ ಗುರುವಿನ ಪಾತ್ರ ಹೆಚ್ಚಾಗಿದೆ. ಮಗುವಿಗೆ ಮೊದಲ ಪಾಠಶಾಲೆ ಮನೆ ಹಾಗೂ  ತಾಯಿಯೇ ಮೊದಲ ಗುರು ಎಂದು ಹೇಳಿದರು.

ಡಾ.ಸರ್ವಪಳ್ಳಿ ರಾಧಾಕೃಷ್ಣನ್  ಒಬ್ಬ ಶಿಕ್ಷಕರಾಗಿ, ಶಿಕ್ಷಣ ತಜ್ಞರಾಗಿ ನಾಡಿಗೆ ನೀಡಿದ  ಕೊಡುಗೆ ಅಪಾರವಾದದ್ದು. ಹಲವಾರು ಹುದ್ದೆ ಗಳನ್ನು ಅಲಂಕರಿಸುವ ಮೂಲಕ ರಾಷ್ಟ್ರ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ದೇಶದ ಘನತೆ ಹೆಚ್ಚಿಸಿದ್ದಾರೆ ಎಂದು ಬಣ್ಣಿಸಿದರು. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರ ಅನಾವರಣಗೊಳಿಸಿದ ಸಂಸದ ಜಿ.ಎಂ.ಸಿದ್ದೇಶ್ವರ್,  ಶಿಕ್ಷಕರು ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು. ಮೈಸೂರಿನಂತೆ ದಾವಣಗೆರೆ ಜಿಲ್ಲೆಯೂ ಸಹ ಶಿಕ್ಷಣ ಕ್ಷೇತ್ರಕ್ಕೆ ಹೆಸರುವಾಸಿಯಾಗಬೇಕು.  ಈ ನಿಟ್ಟಿನಲ್ಲಿ ಶಿಕ್ಷಕರು ಶ್ರದ್ದೆಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.

error: Content is protected !!