ಬೆಂಗಳೂರು, ಮಾ. 3 – ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಬಿದ್ದರೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ವಿಚಾರಣೆಗೊಳ ಪಡಿಸಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರ ಪುತ್ರರಾಗಿರುವ ಜಲಮಂಡಳಿ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರ ಕಚೇರಿ ಮತ್ತು ನಿವಾಸದ ಮೇಲೆ ನಮ್ಮ ಪೊಲೀಸರು ದಾಳಿ ನಡೆಸಿ ಇದುವರೆಗೂ 8.12 ಕೋ ಟಿ ರೂ. ನಗದು ವಶಪಡಿಸಿ ಕೊಂಡಿದ್ದಾರೆ ಎಂದು ಅವ ರು ಮಾಹಿತಿ ನೀಡಿದರು.
ಪ್ರಕರಣಕ್ಕೆ ಸಂಬಂಧಿಸಿ ದಂತೆ ನಾವು ಇದುವರೆಗೂ 5 ಮಂದಿಯನ್ನು ವಶಕ್ಕೆ ಪಡೆ ದಿದ್ದು, ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಲಾ ಗುವುದು ಎಂದು ಪಾಟೀಲರು ವಿವರಣೆ ನೀಡಿದರು.
ಪ್ರಶಾಂತ್ ಅವರ ಖಾಸಗಿ ಕಚೇರಿಗೆ ಲಂಚ ನೀಡಲು ಬಂದಿದ್ದ ಮೂವರು ಆರೋಪಿಗಳು, ಆ ಸಂಸ್ಥೆಯ ಅಕೌಂಟೆಂಟ್ ಹಾಗೂ ಪ್ರಶಾಂತ್ ಮಾಡಾಳ್ ಸೇರಿದಂತೆ ಐದು ಆರೋಪಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಗಳನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿ, ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಮಾಡಾಳ್ ವಿರುದ್ಧ ಎಫ್ಐಆರ್, ಬಂಧನಕ್ಕಾಗಿ ಶೋಧ
ಬೆಂಗಳೂರು, ಮಾ. 3-ಲಂಚ ಪ್ರಕರಣಕ್ಕೆ ಸಂಬಂಧಿ ಸಿದಂತೆ ಚನ್ನಗಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್.ಐ.ಆರ್. ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಬೆಂಗ ಳೂರು ಹಾಗೂ ಚನ್ನಗಿರಿಯಲ್ಲಿರುವ ಅವರ ನಿವಾಸಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ವಿರೂಪಾಕ್ಷಪ್ಪ ಅವರ ಕಚೇರಿ ಮೇಲೆ ನಿನ್ನೆ ಲೋಕಾಯುಕ್ತ ದಾಳಿ ನಡೆಸಿದಾಗ ಅವರ ಪುತ್ರ ಪ್ರಶಾಂತ್ ಕೋಟಿಗಟ್ಟಲೆ ಹಣದ ಸಮೇತ ಸಿಕ್ಕಿ ಬಿದ್ದಿದ್ದರು. ನಂತರ ಅವರನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ. ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಅವರೇ ಮೊದಲ ಆರೋಪಿಯಾಗಿದ್ದಾರೆ. ಮಗ ಪ್ರಶಾಂತ್ ಎರಡನೇ ಆರೋಪಿಯಾಗಿದ್ದಾರೆ. ಕೆ.ಎಸ್.ಡಿ.ಎಲ್. ಅಕೌಂಟೆಂಟ್ ಸುರೇಂದ್ರ, ಪ್ರಶಾಂತ್ ಸಂಬಂಧಿ ಸಿದ್ದೇಶ್, ಆರೋಮ ಕಂಪನಿಯ ಆಲ್ಬರ್ಟ್ ನಿಕೋಲ ಹಾಗೂ ಗಂಗಾಧರ ಇತರೆ ಆರೋಪಿಗಳಾಗಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಅವರ ಬಂಧನಕ್ಕಾಗಿ ಶೋಧ ಕಾರ್ಯ ನಡೆದಿದೆ. ಈ ನಡುವೆ, ಚನ್ನಗಿರಿಯಲ್ಲಿರುವ ಅವರ ನಿವಾಸ ಹಾಗೂ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ ಮಧ್ಯಾಹ್ನ ದಾಳಿ ನಡೆಸಿದ್ದಾರೆ. ನಗದು, ಆಸ್ತಿ ದಾಖಲೆಗಳು ಹಾಗೂ ಆಭರಣಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.
ಪ್ರಶಾಂತ್ 14 ದಿನ ಕಸ್ಟಡಿಗೆ
ಬೆಂಗಳೂರು, ಮಾ. 3 – ಲಂಚದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಬಂಧಿಸಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಹಾಗೂ ಇತರ ನಾಲ್ವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ಪ್ರಶಾಂತ್ ಅವರ ನಿವಾಸ, ಬನಶಂಕರಿಯಲ್ಲಿರುವ ಕೆಎಸ್ಡಿಎಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ನಿವಾಸ ಸೇರಿದಂತೆ ನಗರದಲ್ಲಿ ಮೂರು ಕಡೆ ಹಾಗೂ ಚನ್ನಗಿರಿಯಲ್ಲಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆಸಿದ್ದರು.
ದಾಳಿ ಸಂದರ್ಭದಲ್ಲಿ ಪ್ರಶಾಂತ್ ಅವರ ನಿವಾಸದಲ್ಲಿ 6 ಕೋಟಿ ರೂ. ನಗದು ಪತ್ತೆಯಾಗಿತ್ತು. ಈ ಘಟನೆಯ ನಂತರ ಪ್ರಶಾಂತ್, ಆವರ ಅಕೌಂಟೆಂಟ್ ಹಾಗೂ ಲಂಚ ನೀಡಲು ಪ್ರಶಾಂತ್ ಕಚೇರಿಗೆ ಆಗಮಿಸಿದ್ದ ಮೂವರನ್ನು ಬಂಧಿಸಲಾಗಿತ್ತು.
ಬಂಧಿತ ಐವರು ಆರೋಪಿಗಳನ್ನು ಇಂದು ಬೆಳಿಗ್ಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ರಾಜೀನಾಮೆ ಅಂಗೀಕಾರ
ಬೆಂಗಳೂರು, ಮಾ. 3 – ಲೋಕಾಯುಕ್ತ ದಾಳಿ ಯಲ್ಲಿ ಖುದ್ದು ಪುತ್ರನೇ ಸಿಕ್ಕಿಬಿದ್ದಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎ ಸ್ಡಿಎಲ್) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಿನ್ನೆ ನಡೆದ ಲೋಕಾಯುಕ್ತ ದಾಳಿಗೂ ನನಗೂ ಸಂಬಂಧವಿಲ್ಲ. ಇದು ನನ್ನ ಕುಟುಂಬದ ವಿರುದ್ಧದ ಷಡ್ಯಂತ್ರ. ಆದರೂ ನನ್ನ ಮೇಲೆ ಆಪಾದನೆ ಬಂದಿರು ವುದರಿಂದ ನೈತಿಕ ಹೊಣೆ ಹೊತ್ತು ಕೆಎಸ್ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ರಾಜೀನಾಮೆ ಪತ್ರದಲ್ಲಿ ಮಾಡಾಳ್ ಉಲ್ಲೇಖಿಸಿದ್ದಾರೆ.
ಕಾನೂನಿಗೆ ತಲೆಬಾಗಿ ರಾಜೀನಾಮೆ ನೀಡಿರುವುದಾಗಿ ಹೇಳಿರುವ ಮಾಡಾಳ್ ಅವರು, ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.
ಮಾಡಾಳ್ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂಗೀಕರಿಸಿದ್ದಾರೆ.
ಘಟನೆ ಕುರಿತಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೋ ಅವರೆಲ್ಲರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕಾರ್ಯಾಚರಣೆ ನಡೆಸಿದ ವೇಳೆ ಟೆಂಡರ್ಗೆ ಸಂಬಂಧಪಟ್ಟಂತೆ ಲಂಚ ನೀಡಲು ಬಂದಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಕಾನೂನಿನ ಪ್ರಕಾರ ಲಂಚ ನೀಡುವುದು ಕೂಡ ಅಪರಾಧವಾಗಿದೆ ಎಂದು ಅವರು ವಿವರಿಸಿದರು.
ದೂರುದಾರ ನೀಡಿದ ದೂರಿನ ಮೇರೆಗೆ ಕಾರ್ಯಚರಣೆ ನಡೆಸಿ ಪ್ರಶಾಂತ್ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ ಲೋಕಾಯುಕ್ತ ಪೊಲೀಸರ ಕಾರ್ಯಚರಣೆಯನ್ನು ಅವರು ಇದೇ ಸಂದರ್ಭದಲ್ಲಿ ಮುಕ್ತಕಂಠದಿಂದ ಶ್ಲಾಘಿಸಿದರು.
ಲೋಕಾಯುಕ್ತ ಸಂಸ್ಥೆಗೆ ಮತ್ತಷ್ಟು ಸಿಬ್ಬಂದಿಗಳ ಅವಶ್ಯಕತೆ ಇದ್ದು, ಮುಂದಿನ ದಿನಗಳಲ್ಲಿ ಸಿಬ್ಬಂದಿ ನೇಮಕಾತಿ ಮಾಡಿಕೊಂಡು ಸಂಸ್ಥೆಯನ್ನು ಮತ್ತಷ್ಟು ಸದೃಢಗೊಳಿಸಿ ಭ್ರಷ್ಟರ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ವಿವರಿಸಿದರು.