ತ್ಯಾವಣಿಗೆಯಲ್ಲಿ ನಾಳೆ ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶ

ದಾವಣಗೆರೆ, ಮಾ.7- ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಮಾಯಕೊಂಡ ವಿಧಾನಸಭಾ ಕ್ಷೇತ್ರದ ತ್ಯಾವಣಿಗೆಯ ನೀರಾವರಿ ಇಲಾಖೆ ಆವರಣದಲ್ಲಿ ನಾಡಿದ್ದು ದಿನಾಂಕ 9 ರ ಗುರುವಾರ ಹಿಂದುಳಿದ ವರ್ಗಗಳ ಜಿಲ್ಲಾ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಬಸವರಾಜ್ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 3 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಿಲ್ಲೆಯ ಸುಮಾರು 8 ರಿಂದ 10 ಸಾವಿರ ಜನರು ಆಗಮಿಸುವ ನಿರೀಕ್ಷೆಯಿದೆ ಎಂದರು.

ಪ್ರತಿ ಜಿಲ್ಲೆಯಲ್ಲಿ ಒಬ್ಬ ಹಿಂದುಳಿದ ವರ್ಗದ ಅಭ್ಯರ್ಥಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಪಕ್ಷದ ವರಿಷ್ಠರ ಮಟ್ಟದಲ್ಲಿ ಚರ್ಚಿಸಲಾಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದೆಯೂ ಹಿಂದುಳಿದ ವರ್ಗದ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿತ್ತು. ಅಂತೆಯೇ, ಈ ಬಾರಿಯೂ ಕೂಡ ಟಿಕೆಟ್ ನೀಡುವ ನಿರೀಕ್ಷೆಯಿದೆ ಎಂದರು.

ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಲೋಕಸಭಾ ಸದಸ್ಯ ಜಿ.ಎಂ ಸಿದ್ದೇಶ್ವರ, ಶಾಸಕರುಗಳಾದ ಎಸ್.ಎ ರವೀಂದ್ರನಾಥ್, ಪ್ರೊ.ಲಿಂಗಣ್ಣ, ಎಸ್.ವಿ ರಾಮಚಂದ್ರ, ಎಂ.ಪಿ ರೇಣುಕಾಚಾರ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್, ಮಾಜಿ ಶಾಸಕರಾದ ಬಿ.ಪಿ ಹರೀಶ್, ಬಸವರಾಜ್ ನಾಯ್ಕ್ ಮತ್ತು ಇತರರು ಭಾಗವಹಿಸುವರು.

ಸುದ್ದಿಗೋಷ್ಠಿಯಲ್ಲಿ ಮಾಯಕೊಂಡ ಮಂಡಲದ ಅಧ್ಯಕ್ಷ ದೇವೇಂದ್ರಪ್ಪ, ಮಹೇಂದ್ರ ಹೆಬ್ಬಾಳು, ಎಂ.ಎನ್ ಮಂಜುನಾಥ್, ಓಂಕಾರಪ್ಪ, ಕೃಷ್ಣಕುಮಾರ್, ಸುರೇಶ್  ಮತ್ತಿತರರು ಉಪಸ್ಥಿತರಿದ್ದರು.

error: Content is protected !!