ಹೊನ್ನಾಳಿ, ಮಾ.13- ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನ 1800 ಕೋಟಿ ರೂ.ಗೂ ಅಧಿಕ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಲು ಸಿಎಂ ಬಸವರಾಜ ಬೊಮ್ಮಾಯಿ ಇದೇ ದಿನಾಂಕ 17 ರಂದು ಆಗಮಿಸಲಿದ್ದಾರೆ ಎಂದು ಉಪ ವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ತಿಳಿಸಿದರು.
ಭಾನುವಾರ ನಗರದ ತಾ.ಪಂ. ಸಾಮರ್ಥ್ಯ ಸೌಧದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.
ಹೊನ್ನಾಳಿ ನಗರದ ಖಾಸಗಿ ಬಸ್ ನಿಲ್ದಾ ಣದ ಎದುರಿಗಿರುವ ಖಾಸಗಿ ಲೇಔಟ್ನಲ್ಲಿ ಮಾ. 17 ರಂದು ಕಾರ್ಯಕ್ರಮ ನಡೆಯಲಿದ್ದು, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸೇರಿದಂತೆ ಹತ್ತಕ್ಕೂ ಹೆಚ್ಚು ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು. 1800 ಕೋಟಿ ರೂಪಾಯಿ ವೆಚ್ಚದಲ್ಲಿ 975 ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮಾಡಲಿದ್ದು ಆಯಾ ಇಲಾಖೆಯ ಅಧಿಕಾರಿಗಳು ಶಿಲಾನ್ಯಾಸಗಳಿಗೆ ಸಿದ್ಧಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳು ವುದರ ಜೊತೆಗೆ ಆಯಾ ಇಲಾಖೆಗಳ ಆಯಾ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಬೇಕೆಂದ ಅವರು, ಕಾರ್ಯಕ್ರಮದಲ್ಲಿ ಅಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿಯನ್ನು ತರುವಂತೆ ಸೂಚಿಸಿದರು.
ಇಓ ರಾಮಾಭೋವಿ ಮಾತನಾಡಿ, ಪಿಡಿಓಗಳು ತಮ್ಮ ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳ ಸಮಗ್ರ ಮಾಹಿತಿಯ ಜೊತೆಗೆ ಅರ್ಹ ಫಲಾನುಭವಿಗಳು ಹಾಗೂ 2116 ಮನೆಗಳ ಫಲಾನುಭವಿಗಳನ್ನು ಕರೆ ತರುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ತಿರುಪತಿ, ಸಮಾಜ ಕಲ್ಯಾಣ ಇಲಾಖೆ ಉಮಾ ತಿಮ್ಮನಗೌಡ, ದೇವರಾಜ್ ಅರಸ್ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮೃತ್ಯುಂಜಯ, ತುಂಗಾ ಮೇಲ್ದಂಡೆ ಯೋಜನೆ ಅಧಿಕಾರಿ ಮಂಜುನಾಥ್, ಬೆಸ್ಕಾಂ ಅಧಿಕಾರಿಗಳು ಶ್ರೀನಿವಾಸ್ ನಾಯ್ಕ, ಪುರಸಭೆ ಮುಖ್ಯಾಧಿಕಾರಿ ವೀರಭದ್ರಯ್ಯ ಸೇರಿದಂತೆ ಮತ್ತಿತರರಿದ್ದರು.