ದಾವಣಗೆರೆ ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿಯಾಗಿ ಪ್ರಿಯಾಂಕ

ದಾವಣಗೆರೆ, ಫೆ.6 – ದಾವಣಗೆರೆ ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿಯಾಗಿ ಡಿ. ಪ್ರಿಯಾಂಕ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. 

ಈ ಸಂದರ್ಭದಲ್ಲಿ ಹಿಂದಿನ ಹಣಕಾಸು ಅಧಿಕಾರಿ ಪ್ರೊ.ಗೋಪಾಲ ಎಂ.ಅಡವಿರಾವ್, ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಶರಣಪ್ಪ ಹಲಸೆ, ಕುಲಸಚಿವ ಪ್ರೊ.ಬಸವರಾಜ ಬಣಕಾರ, ಪರೀಕ್ಷಾಂಗ ಕುಲಸಚಿವರಾದ ಪ್ರೊ.ಎಚ್.ಎಸ್. ಅನಿತಾ ಅವರು ನೂತನ ಹಣಕಾಸು ಅಧಿಕಾರಿಯನ್ನು ಸ್ವಾಗತಿಸಿದರು.

ದಾವಣಗೆರೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ಅಧಿಕಾರ ವಹಿಸಿಕೊಂಡ ನಂತರ ನಡೆದ ಸರಳ ಕಾರ್ಯಕ್ರಮದಲ್ಲಿ ಪ್ರಿಯಾಂಕ ಅವರು ಮಾತನಾಡಿ, ವಿಶ್ವವಿ ದ್ಯಾನಿಲಯದ ಹಳೆಯ ವಿದ್ಯಾರ್ಥಿಯಾಗಿ, ಕಲಿತ ಸಂಸ್ಥೆಯಲ್ಲಿ ಅಧಿಕಾರಿಯಾಗಿ, ಕಲಿಸಿದ ಶಿಕ್ಷಕರ ಜೊತೆಗೂಡಿ ಕೆಲಸ ಮಾಡುವ ಭಾಗ್ಯ ಸಿಕ್ಕಿದೆ. ವಿಶ್ವವಿದ್ಯಾನಿಲಯಕ್ಕೆ ಗೌರವ ತರುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಇದೊಂದು ಅಪೂರ್ವ ಕ್ಷಣ. ಇಂಥ ಅವಕಾಶ ಎಷ್ಟು ಜನರಿಗೆ ಸಿಗುತ್ತೋ ಗೊತ್ತಿಲ್ಲ. ಆದರೆ ನಾನು ಅದನ್ನು ಪಡೆದ ಅದೃಷ್ಟವಂತೆ. ವಿಶ್ವವಿದ್ಯಾನಿಲಯದ ಬೆಳವಣಿಗೆಗಾಗಿ ವಿದ್ಯಾರ್ಥಿನಿಯಾಗಿ ಕಂಡಿದ್ದ ಕನಸನ್ನು ಸಾಧ್ಯವಾದಷ್ಟು ಮಟ್ಟಿಗೆ ಈಡೇರಿಸಲು ಪ್ರಯತ್ನಿಸುತ್ತೇನೆ. ಕಲಿತ ಸಂಸ್ಥೆ ಮತ್ತು ಕಲಿಸಿದ ಗುರುಗಳ ಧ್ಯೇಯಗಳಿಗೆ ಚ್ಯುತಿ ಬಾರದಂತೆ ಎಲ್ಲರಿಗೂ ಪ್ರೇರಣೆಯಾಗಿ, ಸ್ಫೂರ್ತಿಯಾಗಿ ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು.

ಕುಲಪತಿ ಪ್ರೊ.ಶರಣಪ್ಪ ಹಲಸೆ ಮಾತನಾಡಿ, ವಿಶ್ವವಿದ್ಯಾನಿಲಯವು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲು ಆಡಳಿತ ಯಂತ್ರದ ಪಾತ್ರ ಬಹು ಮುಖ್ಯ. ಇದಕ್ಕೆ ಎಲ್ಲರ ಸಹಕಾರ ಅಗತ್ಯ. ನೂತನ ಹಣಕಾಸು ಅಧಿಕಾರಿಯಾಗಿರುವ ಪ್ರಿಯಾಂಕ ಅವರು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವ ವಿಶ್ವಾಸವಿದೆ ಎಂದರು.

    ಈ ಸಂದರ್ಭದಲ್ಲಿ ಕುಲಸಚಿವ ಪ್ರೊ.ಬಸವರಾಜ ಬಣಕಾರ, ಪರೀಕ್ಷಾಂಗ ಕುಲಸಚಿವೆ ಪ್ರೊ.ಎಚ್.ಎಸ್. ಅನಿತಾ, ಹಿಂದಿನ ಹಣಕಾಸು ಅಧಿಕಾರಿ ಪ್ರೊ.ಗೋಪಾಲ ಎಂ.ಅಡವಿರಾವ್, ಸಿಂಡಿಕೇಟ್ ಸದಸ್ಯರು, ವಿವಿಧ ನಿಕಾಯಗಳ ಡೀನ್‍ಗಳು ಉಪಸ್ಥಿತರಿದ್ದರು.

error: Content is protected !!