ಮೆರವಣಿಗೆ ಮೂಲಕ ತೆರಳಿ ಬಿಜೆಪಿ ಅಭ್ಯರ್ಥಿ ಬಸವರಾಜನಾಯ್ಕ್ ನಾಮಪತ್ರ ಸಲ್ಲಿಕೆ
ದಾವಣಗೆರೆ, ಏ.18- ಮಾಯಕೊಂಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ನಾಯ್ಕ ಮಂಗಳವಾರ ನಗರದ ಗಾಂಧಿ ವೃತ್ತದಿಂದ ತೆರೆದ ವಾಹನದಲ್ಲಿ ಕಾರ್ಯಕರ್ತರ ಜೊತೆ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ನಾನು ಉತ್ತಮ ಕೆಲಸ ಮಾಡಿರುವುದರಿಂದ ರಾಜ್ಯ ನಾಯಕರು, ರಾಷ್ಟ್ರ ನಾಯಕರು ನನ್ನನ್ನು ಗುರುತಿಸಿ ಟಿಕೆಟ್ ನೀಡಿದ್ದಾರೆ. ಈ ಬಾರಿ ಮಾಯಕೊಂಡದಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ ಎಂದು ಹೇಳಿದರು.
ಸಂಸದ ಜಿ. ಎಂ. ಸಿದ್ದೇಶ್ವರ, ಶಾಸಕ ಎಸ್. ಎ. ರವೀಂದ್ರನಾಥ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ. ಶಿವಯೋಗಿಸ್ವಾಮಿ, ಮಂಡಲದ ಅಧ್ಯಕ್ಷ ದೇವೇಂದ್ರಪ್ಪ ಸೇರಿದಂತೆ ಎಲ್ಲಾ ನಾಯಕರು ಬೆಂಬಲವಾಗಿ ನಿಂತಿದ್ದಾರೆ. ಯಾವುದೇ ಕಾರಣಕ್ಕೂ ಬಿಜೆಪಿಗೆ ಹಿನ್ನಡೆ ಆಗುವುದಿಲ್ಲ. ಐದು ಬಾರಿ ಬಿಜೆಪಿ ಪಕ್ಷ ಮಾಯಕೊಂಡದಲ್ಲಿ ಜಯ ಗಳಿಸಿದೆ. ಆರನೇ ಬಾರಿಯೂ ಕಮಲ ಅರಳುವಂತೆ ಮಾಡಲು ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ ಎಂದು ತಿಳಿಸಿದರು.
ಬಂಡಾಯವೆದ್ದಿರುವ 11 ಜನರ ಪೈಕಿ ನಾಲ್ವರ ಜೊತೆ ಮಾತನಾಡಿದ್ದೇನೆ. ಟಿಕೆಟ್ ಕೈತಪ್ಪಿದ್ದರಿಂದ ಸಹಜವಾಗಿಯೇ ಅಸಮಾಧಾನಗೊಂಡಿದ್ದಾರೆ. ನಾವೆಲ್ಲರೂ ಸಹೋದರರಂತೆ. ಇನ್ನೆರಡು ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ. ಅವರೆಲ್ಲಾ ನಾಮಪತ್ರ ಸಲ್ಲಿಕೆ ಮಾಡಬಹುದು. ಆದರೆ ವಾಪಸ್ ತೆಗೆದುಕೊಳ್ಳಲು ಸಮಯಾವಕಾಶ ಇದೆ. ಮನವೊಲಿಸುವ ಕಾರ್ಯ ನಡೆಯುತ್ತಿದೆ ಎಂದರು.
ಸಂಸದ ಜಿ. ಎಂ. ಸಿದ್ದೇಶ್ವರ ಮಾತನಾಡಿ, ಮಾಯಕೊಂಡ ವಿಶಿಷ್ಟ ಕ್ಷೇತ್ರ. ಈ ಹಿಂದೆ ಶಾಸಕರಾಗಿ ಬಸವರಾಜ್ ನಾಯ್ಕ್ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿ ಪಕ್ಷವು ಟಿಕೆಟ್ ಕೊಟ್ಟಿದೆ. ಎಲ್ಲರೂ ಕಮಲ ಅರಳುವಂತೆ ಮಾಡಿ ಎಂದರು.
ಶಾಸಕ ಪ್ರೊ. ಎನ್. ಲಿಂಗಣ್ಣ, ಮಾಯಕೊಂಡ ಬಿಜೆಪಿ ಮಂಡಲ ಅಧ್ಯಕ್ಷ ದೇವೇಂದ್ರಪ್ಪ ಮತ್ತಿತರರು ಹಾಜರಿದ್ದರು.