ನುಡಿದಂತೆ ನಡೆದಿದ್ದೇವೆ, ಸರ್ಕಾರದ ಪರವಾಗಿರಿ: ಎಸ್ಸೆಸ್

ನುಡಿದಂತೆ ನಡೆದಿದ್ದೇವೆ, ಸರ್ಕಾರದ ಪರವಾಗಿರಿ: ಎಸ್ಸೆಸ್

ಕುಕ್ಕುವಾಡದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಜನತೆಗೆ ಶಾಸಕರ ಕರೆ

ದಾವಣಗೆರೆ, ಫೆ.2- ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಲಾಗಿದ್ದ ಉಚಿತ ಪ್ರಯಾಣದ ಶಕ್ತಿ, 200 ಯುನಿಟ್‍ವರೆಗೆ ಉಚಿತ ಕರೆಂಟ್ ಗೃಹಜ್ಯೋತಿ, ಮನೆ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ನೀಡುವ ಗೃಹಲಕ್ಷ್ಮಿ, 10 ಕೆ.ಜಿ.ಅಕ್ಕಿ ನೀಡುವ ಅನ್ನಭಾಗ್ಯ, ಪದವೀಧರ, ಡಿಪ್ಲೋಮಾ ಉತ್ತೀರ್ಣರಾದವರಿಗೆ ಎರಡು ವರ್ಷಗಳ ವರೆಗೆ ನಿರುದ್ಯೋಗ ಭತ್ಯೆ ನೀಡುವ ಗ್ಯಾರಂಟಿ ಯೋಜನೆಗಳನ್ನು ಚಾಚೂ ತಪ್ಪದೇ ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದೆ. ಇದು ಜನಪರ ಸರ್ಕಾರವಾಗಿದ್ದು, ಜನರೂ ಸಹ ಸರ್ಕಾರದ ಪರವಾಗಿರಬೇಕೆಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ  ತಿಳಿಸಿದರು. 

ಅವರು ಶುಕ್ರವಾರ ತಾಲ್ಲೂಕಿನ ಕುಕ್ಕುವಾಡ ಗ್ರಾಮದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಗ್ರಾಮ ಮಟ್ಟದ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಸರ್ಕಾರ ಜನರಿಗೆ ನೀಡಿದ ಆಶ್ವಾಸನೆ ಯಂತೆ ನಿಗದಿತ ಸಮಯದಲ್ಲಿಯೇ ಯೋಜನೆ ಗಳನ್ನು ಜಾರಿಗೆ ತಂದು ಜನರಿಗೆ ಅನುಕೂಲ ಕಲ್ಪಿಸಿದೆ. ಗ್ಯಾರಂಟಿ ಯೋಜನೆಗಳಿಂದ ಕುಟುಂಬದಲ್ಲಿ ಆರ್ಥಿಕ ಬಲ ಬಂದಿದ್ದು, ಜೀವನ ಮಟ್ಟ ಸುಧಾರಣೆ ಹಾಗೂ ನಿರ್ವಹಣೆಯೂ ಸುಲಭವಾಗಿದೆ. ಬಡವರು, ಮಧ್ಯಮ ವರ್ಗದವರಿಗೆ ಗ್ಯಾರಂಟಿ ಯೋಜನೆ ಗಳಿಂದ ಬಹಳ ಅನುಕೂಲವಾಗಿದೆ ಎಂದರು. 

ಕೆಲವೊಂದು ತಾಂತ್ರಿಕ ಕಾರಣಗಳಿಂದ ಗೃಹಲಕ್ಷ್ಮಿ ಯೋಜನೆಯ ರೂ.2000 ಮತ್ತು ಅನ್ನಭಾಗ್ಯ ಯೋಜನೆಯಡಿ ಐದು ಕೆ.ಜಿ.ಅಕ್ಕಿ ಬದಲಿಗೆ ನೀಡಲಾಗುವ ಹಣವು ಆಧಾರ್ ಜೋಡಣೆ, ಪಡಿತರ ಚೀಟಿಯ ತಿದ್ದುಪಡಿ, ಆಧಾರ್ ತಿದ್ದುಪಡಿಯ ಕಾರಣದಿಂದ ಬಾರದೇ ಇರಬಹುದು. ಅಧಿಕಾರಿಗಳು ಇರುವ ಎಲ್ಲಾ ಅಡೆತಡೆಗಳನ್ನು ನಿವಾರಣೆ ಮಾಡಿ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲಿದ್ದಾರೆ. ಯಾವುದೇ ಆತಂಕ ಬೇಡ ಎಂದು ತಿಳಿಸಿದರು. 

ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಮಾತನಾಡಿ, ಸರ್ಕಾರ ಜನರ ಕಲ್ಯಾಣಕ್ಕಾಗಿ ಅದರಲ್ಲಿಯೂ ಮಹಿಳೆಯರ ಕಲ್ಯಾಣಕ್ಕಾಗಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಯಶಸ್ವಿಯಾಗಿ ಅನುಷ್ಟಾನ ಮಾಡಲಾಗಿದೆ. ಈ ಐದು ಗ್ಯಾರಂಟಿ ಯೋಜನೆಗಳ ಉಪಯೋಗ ಪಡೆಯದೇ ಇರುವವರ ಸಂಖ್ಯೆ ತೀರಾ ವಿರಳ ಎಂದರು.

ಫಲಾನುಭವಿ ಪುಷ್ಪ ಮಾತನಾಡಿ, ಶಕ್ತಿ ಯೋಜನೆಯಿಂದ ನನಗೆ ಬಹಳ ಅನುಕೂಲವಾಗಿದೆ. ಉಚಿತ ಪ್ರಯಾಣದಿಂದ ಮನೆಯಲ್ಲಿ ಪತಿ, ಮಾವ, ಅತ್ತೆಗೆ ಬಸ್ ಚಾರ್ಜ್‍ಗೆ ಹಣ ಕೊಡು ಎಂದು ಕೇಳುವಂತಿಲ್ಲ. ನಮಗೆ ಬೇಕಾದ ಪ್ರೇಕ್ಷಣೀಯ ಸ್ಥಳವನ್ನು ನೋಡಿಕೊಂಡು ಬರಲು ಮಹಿಳೆಯರಿಗಂತೂ ತುಂಬಾ ಅನುಕೂಲವಾಗಿದೆ ಎಂದು ತಮ್ಮ ಸಂತಸ ಹಂಚಿಕೊಂಡರು. ಫಲಾನುಭವಿಗಳಾದ  ರೇಖಾ ಹಾಗೂ ಸುನಂದ ಮಾತನಾಡಿ, ಸರ್ಕಾರದ ಯೋಜನೆಗಳಿಂದ ತುಂಬಾ ಅನುಕೂಲವಾಗಿರುವುದಾಗಿ ವಿವರಿಸಿದರು.

 ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ದುರ್ಗಶ್ರೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ತಹಶೀಲ್ದಾರ್ ಅಶ್ವತ್ಥ್‌, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀನಿವಾಸ್, ತಾ.ಪಂ.ಸಹಾಯಕ ನಿರ್ದೇಶಕ ಅಭಿಜಿತ್, ಸಿಡಿಪಿಓ ಅಭಿಕುಮಾರ್, ಪಿಡಿಓ ಲಕ್ಷ್ಮಿದೇವಿ ಇತರರು ಉಪಸ್ಥಿತರಿದ್ದರು.

error: Content is protected !!