ಸಮಾವೇಶದ ವೇದಿಕೆ ನಿರ್ಮಾಣಕ್ಕೆ ಹಂದರ ಪೂಜೆ ನೆರವೇರಿಸಿದ ಸಂಸದ ಸಿದ್ದೇಶ್ವರ
ದಾವಣಗೆರೆ, ಹಾವೇರಿ ಲೋಕಸಭಾ ಅಭ್ಯರ್ಥಿಗಳ ಪರ ಮತಯಾಚನೆ
ದಾವಣಗೆರೆ, ಏ. 24 – ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏ. 28ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ನಗರದ ಹೈಸ್ಕೂಲ್ ಮೈದಾನ ದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ದಾವಣಗೆರೆ ಹಾಗೂ ಹಾವೇರಿ ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.
ನಗರದ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಸಮಾವೇಶಕ್ಕೆ ಹಂದರ ಪೂಜೆ ನೆರವೇರಿಸಿ ನಂತರ ಮಾತನಾಡಿದ ಸಂಸದ ಜಿ.ಎಂ. ಸಿದ್ದೇಶ್ವರ, ದಾವಣಗೆರೆ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ಸಮಾವೇಶ ನಡೆಯಲಿದೆ ಎಂದರು.
ಈ ಬಾರಿ ಕಾರ್ಯಕರ್ತರು ಹೆಚ್ಚಿನ ಉತ್ಸಾಹ ದಲ್ಲಿದ್ದು, ಅತಿ ಹೆಚ್ಚು ಮತಗಳಿಂದ ದಾವಣಗೆರೆ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಎಸ್ಸೆಸ್ಸೆಂಗೇ ಕೊಡಿ ಚೊಂಬು
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಚೊಂಬು ಕೊಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ ಸಂಸದ ಜಿ.ಎಂ. ಸಿದ್ದೇಶ್ವರ, ಚೊಂಬು ಅವರಿಗೇ ಕೊಡಿ ಎಂದಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆ, ಪಾಸ್ಪೋರ್ಟ್ ಕಚೇರಿ, ಇಎಸ್ಐ ಆಸ್ಪತ್ರೆಗೆ 25 ಕೋಟಿ ರೂ., ದಿವ್ಯಾಂಗರಿಗೆ ಆಸ್ಪತ್ರೆ, ರೈಲ್ವೆ ನಿಲ್ದಾಣ ನಿರ್ಮಾಣ, ರೈಲ್ವೆ ಡಬ್ಲಿಂಗ್ – ವಿದ್ಯುದೀಕರಣ, ಆರು ಪಥದ ಹೆದ್ದಾರಿ ಎಲ್ಲವನ್ನೂ ಅವರೇ ಮಾಡಿದ್ದಾರಾ? ಎಂದೂ ಸಿದ್ದೇಶ್ವರ ಪ್ರಶ್ನಿಸಿದರು.
ಮೊದಲು ಶಸ್ತ್ರಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಸ್ತ್ರಗಳನ್ನು ರಫ್ತು ಮಾಡಲಾಗುತ್ತಿದೆ. ದೇಶ ಆರ್ಥಿಕತೆಯಲ್ಲಿ ಮೂರನೇ ಸ್ಥಾನಕ್ಕೆ ಬಂದಿದ್ದು, 2047ಕ್ಕೆ ಮೊದಲ ಸ್ಥಾನಕ್ಕೆ ಬರುವ ಗುರಿ ಇದೆ ಎಂದೂ ಅವರು ಹೇಳಿದರು.
ಅಂದಿನ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಬಿ.ವೈ. ವಿಜಯೇಂದ್ರ, ಹಾವೇರಿ ಅಭ್ಯರ್ಥಿಯೂ ಆಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರೆ ನಾಯಕರು ಭಾಗವಹಿಸಲಿದ್ದಾರೆ ಎಂದವರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎನ್. ರಾಜಶೇಖರ್, ಸಮಾವೇಶದಲ್ಲಿ ವೃತ್ತಿಪರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಸುಮಾರು 1.25 ಲಕ್ಷ ಜನ ಕುಳಿತುಕೊಳ್ಳಲು ಇಲ್ಲಿ ವ್ಯವಸ್ಥೆ ಮಾಡಲಾಗುವುದು. 2 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಯಶವಂತರಾವ್ ಜಾಧವ್, ಡಾ. ಎ.ಹೆಚ್. ಶಿವಯೋಗಿಸ್ವಾಮಿ, ವೈ. ಮಲ್ಲೇಶ್, ಜಿ.ಎಸ್. ಅನಿತ್, ಎಸ್.ಟಿ. ವೀರೇಶ್, ಪ್ರಸನ್ನ ಕುಮಾರ್, ಶಿವನಳ್ಳಿ ರಮೇಶ್, ಶಿವಪ್ರಕಾಶ್, ಕೆ.ಎಂ. ವೀರೇಶ್, ಶಿವನಗೌಡ ಪಾಟೀಲ್, ಭಾಗ್ಯ ಪಿಸಾಳೆ, ಚೇತನ ಶಿವಕುಮಾರ್, ಸವಿತಾ ರವಿಕುಮಾರ್, ಕೊಳೇನಹಳ್ಳಿ ಸತೀಶ್, ಜಿ.ಎಸ್. ಶ್ಯಾಮ್, ಸಿದ್ದೇಶ್ ಮತ್ತಿತರರು ಉಪಸ್ಥಿತರಿದ್ದರು.