ರೈತರ ಶ್ರೇಯೋಭಿವೃದ್ಧಿಗೆ ಪ್ರಭಾ ಗೆಲ್ಲಲಿ

ರೈತರ ಶ್ರೇಯೋಭಿವೃದ್ಧಿಗೆ ಪ್ರಭಾ ಗೆಲ್ಲಲಿ

ಹೊನ್ನಾಳಿ ತಾಲ್ಲೂಕು ಸಾಸ್ವೆಹಳ್ಳಿ ಚುನಾವಣಾ ಪ್ರಚಾರದಲ್ಲಿ ಸಚಿವ ಎಸ್ಸೆಸ್ಸೆಂ 

ಹೊನ್ನಾಳಿ, ಏ.30- ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಿದರೆ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಭರವಸೆ ನೀಡಿದರು.

ತಾಲ್ಲೂಕಿನ ಸಾಸ್ವೆಹಳ್ಳಿಯಲ್ಲಿ ಇಂದು ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ   ಮಾತನಾಡಿದ ಅವರು,  ಎಲ್ಲಾ ಕೆರೆಗಳನ್ನೂ ತುಂಬಿಸುವ ಮೂಲಕ ಎಲಾ ಹಳ್ಳಿಗಳಿಗೂ ನೀರು ಪೂರೈಕೆ ಮಾಡುವುದು ನಮ್ಮ ಗುರಿಯಾಗಿದೆ. ಅಡಿಕೆ ತೋಟಗಳು ಸೇರಿ ದಂತೆ ಕೃಷಿ ಭೂಮಿಗೆ ನೀರು ಲಭಿಸುವಂತಾಗಬೇಕು. ಕೆರೆ-ಕಟ್ಟೆಗಳು ತುಂಬಿದರೆ ಅಂತರ್ಜಲ ವೃದ್ಧಿಯಾಗಿ ಎಲ್ಲರಿಗೂ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ನಿರುದ್ಯೋಗ ನಿವಾರಿಸುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತೇವೆ. ಪದವಿ ಪೂರೈಸಿ ಹೊರಬರುವ ಯುವಜನರಿಗೆ ತಕ್ಷಣ ಉದ್ಯೋಗ ಲಭಿಸಿದರೆ ಒಳಿತಾಗುತ್ತದೆ. ಮುಂದಿನ ದಿನಗಳಲ್ಲಿ ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ ಎಂದು ಹೇಳಿದರು.

ಎಸ್‍ಎಸ್ ಹೆಲ್ತ್ ಕೇರ್ ಟ್ರಸ್ಟ್ ಮೂಲಕ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಜನತೆಗೆ ಉಚಿತವಾಗಿ ವೈದ್ಯಕೀಯ ಸವಲತ್ತುಗಳನ್ನು ನೀಡುವ ಮೂಲಕ ಆರೋಗ್ಯ ರಕ್ಷಣೆಗೆ ಶ್ರಮಿಸುತ್ತಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಿ, ಮಹಿಳೆಯರ ಆರೋಗ್ಯ ರಕ್ಷಣೆಗೆ ಮುಂದಾಗಿದ್ದಾರೆ. ಆರೋಗ್ಯ ತಪಾಸಣೆ, ವಿವಿಧ ಪರೀಕ್ಷೆಗಳಿಗೆ ಸಂಕೋಚಗೊಂಡು ಮಹಿಳೆ ಯರು ಸಮಸ್ಯೆಗಳನ್ನು ಅನುಭವಿಸುತ್ತಾರೆ. ಇಂಥ ಶಿಬಿರಗಳಲ್ಲಿ ಸ್ತನ ಕ್ಯಾನ್ಸರ್‍ನಂಥ ಪ್ರಕರಣಗಳನ್ನು ಪ್ರಾರಂಭದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಮೂಲಕ ಡಾ.ಪ್ರಭಾ ಮಲ್ಲಿಕಾರ್ಜುನ್ ಮಹಿಳೆಯರಿಗೆ ಆಶಾಕಿರಣವಾಗಿದ್ದಾರೆ ಎಂದು ವಿವರಿಸಿದರು.

ಶಾಸಕ ಡಿ.ಜಿ. ಶಾಂತನಗೌಡ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಅಭೂತಪೂರ್ವ ಯಶಸ್ಸಿ ನಿಂದಾಗಿ ಬಿಜೆಪಿಗೆ ನಡುಕ ಶುರುವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಗೆಲುವು ಶತಸ್ಸಿದ್ಧವಾಗಿದೆ. ಮುಜುಗರದಿಂದ ಪಾರಾಗಲು ಬಿಜೆಪಿಯವರು ಇಲ್ಲ-ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯ ಸರಕಾರ ಆರ್ಥಿಕವಾಗಿ ಸುಭದ್ರವಾಗಿದೆ. ಕುಡಿಯುವ ನೀರು ಪೂರೈಕೆಗೆ ಹೊನ್ನಾಳಿ ಕ್ಷೇತ್ರಕ್ಕೆ ಮೂರು ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ನೀತಿ ಸಂಹಿತೆಯ ಕಾರಣದಿಂದಾಗಿ ಇನ್ನೂ ಎರಡು ತಿಂಗಳುಗಳ ಕಾಲ ಬೇರೆ ಅಭಿವೃದ್ಧಿ ಕಾಮಗಾರಿಗಳನ್ನು ಚಾಲನೆ ಮಾಡುವಂತಿಲ್ಲ. ಆದ್ದರಿಂದ, ಮುಂದಿನ ದಿನಗಳಲ್ಲಿ ಹೊನ್ನಾಳಿ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಪುನರಾರಂಭಗೊಳ್ಳಲಿದೆ ಎಂದು ತಿಳಿಸಿದರು.

ಚನ್ನಗಿರಿಯಲ್ಲಿ 2017ರ ಫೆಬ್ರವರಿಯಲ್ಲಿ ನಡೆದ ತರಳಬಾಳು ಹುಣ್ಣಿಮೆ ಸಮಾರಂಭದಲ್ಲಿ ಸಿರಿಗೆರೆ ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿದ್ದರು. ಆ ಮೇರೆಗೆ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ 680 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದರು. ಆದರೆ, ನಂತರ ಬಂದ ಸರಕಾರ ಯೋಜನೆ ನಮ್ಮದೇ ಎಂದು ಬಿಂಬಿಸಿದವು. ಇದೀಗ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಶೇ.99ರಷ್ಟು ಪೂರ್ಣಗೊಂಡಿದ್ದು, ಮುಂದಿನ ದಿನಗಳಲ್ಲಿ ಡಾ.ಸ್ವಾಮೀಜಿ ಸಾನಿಧ್ಯದಲ್ಲಿ, ಡಾ.ಪ್ರಭಾ ಮಲ್ಲಿಕಾರ್ಜುನ್ – ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಇತರ ನಾಯಕರ ಸಮ್ಮುಖದಲ್ಲಿ ಯೋಜನೆ ಲೋಕಾರ್ಪಣೆ ಸಮಾರಂಭ ನಡೆಸುತ್ತೇವೆ ಎಂದು ಹೇಳಿದರು.

ಮಾಜಿ ಶಾಸಕ ಡಾ.ಡಿ.ಬಿ. ಗಂಗಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಮುಖಂಡರಾದ ಬಿ. ಸಿದ್ಧಪ್ಪ, ಎ.ಆರ್. ಚಂದ್ರಶೇಖರಪ್ಪ, ಎಚ್.ಎ. ಗದ್ದಿಗೇಶ್, ಎಸ್.ಎಚ್. ಕೃಷ್ಣಮೂರ್ತಿ, ಆರ್. ನಾಗಪ್ಪ ಇತರರು ಮಾತನಾಡಿದರು. ಕಾಂಗ್ರೆಸ್ ಮುಖಂಡರು ಇದ್ದರು.

error: Content is protected !!