ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು

ವೈಜ್ಞಾನಿಕ ಸೇತುವೆ ನಿರ್ಮಿಸಲು ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ಸೂಚನೆ

ದಾವಣಗೆರೆ, ಜೂ. 14- ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗದ ಕಾಮಗಾರಿ ನಡೆಯುತ್ತಿದ್ದು, ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಹಾದು ಹೋಗುವ ಮಾರ್ಗದಲ್ಲಿ ವೈಜ್ಞಾನಿಕವಾಗಿ ಸೇತುವೆಗಳನ್ನು ನಿರ್ಮಾಣ ಮಾಡಬೇಕು ಎಂದು ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರು ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳು, ಇಂಜಿನಿಯರ್‍ಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ರೈಲ್ವೆ ಅಧಿಕಾರಿಗಳು, ಇಂಜಿನಿಯರ್‍ಗಳೊಂದಿಗೆ ಚರ್ಚೆ ನಡೆಸಿದ ಅವರು, ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಈ ಹೊಸ ರೈಲು ಮಾರ್ಗದಲ್ಲಿ ಬುಳ್ಳಾಪುರ, ಆನಗೋಡು, ನೀರ್ಥಡಿ, ಚಿನ್ನಸಮುದ್ರ, ಹೆಬ್ಬಾಳು ಗ್ರಾಮಗಳು ಬರುತ್ತವೆ. ಅಲ್ಲದೇ ಜಿಲ್ಲಾ ಮತ್ತು ರಾಜ್ಯ ಹೆದ್ದಾರಿಗಳು ಇದ್ದು, ಭವಿಷ್ಯದಲ್ಲಿ ಜನಸಂಖ್ಯೆ ಮತ್ತು ವಾಹನ ಸಂಖ್ಯೆಗಳ ಪ್ರಮಾಣ ಹೆಚ್ಚಳದ ದೃಷ್ಟಿಕೋನದಲ್ಲಿ ಮುಂದಿನ 50 ವರ್ಷಗಳ ಕಾಲ ಬಾಳಿಕೆ ಬರುವಂತಹ ವೈಜ್ಞಾನಿಕವಾಗಿ ಕೆಳ ಸೇತುವೆ ಅಥವಾ ಮೇಲ್ಸೇತುವೆ ನಿರ್ಮಿಸಬೇಕೆಂದರು.

ಆನಗೋಡು-ಹೊಸಪೇಟೆ ರಾಜ್ಯ ಹೆದ್ದಾರಿಯಲ್ಲಿ ದೊಡ್ಡ ದೊಡ್ಡ ಲಾರಿಗಳು ಸಂಚರಿಸುವುದರಿಂದ 5 ಮೀಟರ್ ಎತ್ತರದಲ್ಲಿ ಸೇತುವೆ ನಿರ್ಮಿಸಿದರೆ ಸಂಚರಿಸಲು ತೊಂದರೆ ಆಗುತ್ತದೆ. ಹೀಗಾಗಿ 7 ಮೀಟರ್ ಎತ್ತರದಲ್ಲಿ ಸೇತುವೆ ನಿರ್ಮಿಸಬೇಕು. ಅವೈಜ್ಞಾನಿಕವಾಗಿ ಸೇತುವೆ ನಿರ್ಮಿಸಿ ಮತ್ತೆ ಕಿತ್ತು ಕೋಟ್ಯಂತರ ರೂಪಾಯಿ ವ್ಯರ್ಥ ಆಗಬಾರದು. ಇದರಿಂದ ಪ್ರತಿನಿತ್ಯ ಜನರು ಅಧಿಕಾರಿಗಳಿಗೆ ಹಿಡಿಶಾಪ ಹಾಕುವುದಕ್ಕೆ ಅವಕಾಶ ಮಾಡಿಕೊಡಂದರೆ ವೈಜ್ಞಾನಿಕ ಕಾಮಗಾರಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಇತ್ತೀಚೆಗೆ ಅವೈಜ್ಞಾನಿಕ ಸೇತುವೆಗಳನ್ನು ಕಿತ್ತು ಪುನಃ ನಿರ್ಮಿಸಿ, ಕೋಟ್ಯಂತರ ರೂಪಾಯಿ ವ್ಯರ್ಥ ಮಾಡಿದ ಉದಾಹರಣೆಗಳು ನಮ್ಮ ಕಣ್ಣು ಮುಂದಿವೆ. ಒಂದು ಬಾರಿ ಮಾಡಿದ ಕಾಮಗಾರಿಗಳು ಶಾಶ್ವತವಾಗಿ ಉಳಿಯಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರ ಹಣ ಪೋಲಾಗದಂತೆ ಎಚ್ಚರ ವಹಿಸಬೇಕು. ಕಾಟಾಚಾರಕ್ಕೆ ಕಾಮಗಾರಿ ನಡೆಸದೇ ಗುಣಮಟ್ಟದ ಕಾಮಗಾರಿ ನಡೆಸಬೇಕು. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕೆಂದು ಸೂಚಿಸಿದರು.

ಈ ಹೊಸ ರೈಲ್ವೆ ಮಾರ್ಗ ದಲ್ಲಿ ಜಮೀನುಗಳು ಬರಲಿದ್ದು, ಅಲ್ಲಲ್ಲಿ ಸಂಪರ್ಕ ಕಲ್ಪಿಸುವ ರಸ್ತೆಗಳೂ ಇವೆ. ಅಲ್ಲೂ ಕೂಡ ರೈತರು ಜಮೀನುಗಳಿಗೆ ಹೋಗಿ ಬರಲು ಯಾವುದೇ ರೀತಿಯ ತೊಂದರೆ ಆಗದಂತೆ ಸೇತುವೆಗಳನ್ನು ನಿರ್ಮಿಸಬೇಕು. ಈ ಭಾಗಗಳಲ್ಲಿ ಸೇತುವೆ ನಿರ್ಮಿಸಲು ಎಸ್ಟಿಮೇಟ್ ಇರದಿದ್ದರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಅಲ್ಲಿ ಸೇತುವೆ ನಿರ್ಮಾಣಕ್ಕೆ ಸೇರ್ಪಡೆ ಮಾಡಲು ಕ್ರಮ ತೆಗೆದುಕೊಳ್ಳಬೇಕು. ಭೂಸ್ವಾಧೀನ ಸಮಸ್ಯೆಯಿದ್ದರೆ, ಜಿಲ್ಲಾಧಿಕಾರಿಗಳು ತ್ವರಿತ ಬಗೆಹರಿಸುವ ಕೆಲಸ ಮಾಡಬೇಕೆಂದರು.

ಪಕ್ಕದ ಚಿತ್ರದುರ್ಗ ಜಿಲ್ಲೆಯಲ್ಲಿ ರೈಲ್ವೆ ಮಾರ್ಗದ ಕಾಮಗಾರಿ ಮಂದಗತಿಯಲ್ಲಿ ನಡೆಯು ತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿ ಕಾಮಗಾರಿ ತ್ವರಿತವಾಗಿ ಗತಿಯಲ್ಲಿ ನಡೆಯುತ್ತಿರುವಂತೆ, ಅಲ್ಲೂ ಕೂಡ ತ್ವರಿತ ಗತಿಯ ಕಾಮಗಾರಿಗೆ ಸಂಬಂಧಪಟ್ಟ ಅಧಿ ಕಾರಿಗಳೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳ ಬೇಕೆಂದು ರೈಲ್ವೆ ಅಧಿಕಾರಿಗಳಿಗೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಲೋಕೇಶ್, ಉಪವಿಭಾಗಾಧಿಕಾರಿ ಶ್ರೀಮತಿ ಎನ್. ದುರ್ಗಾಶ್ರೀ, ರೈಲ್ವೆ ಅಧಿಕಾರಿಗಳು ಇದ್ದರು.

error: Content is protected !!