ಕುಸುಮ್ ‘ಸಿ’ ಯೋಜನೆಯಡಿ ಹೆಚ್ಚು ವಿದ್ಯುತ್ ಉತ್ಪಾದನೆ : ಇಂಧನ ಸಚಿವ ಕೆ.ಜೆ. ಜಾರ್ಜ್
ದಾವಣಗೆರೆ, ಫೆ. 18 – ರಾಜ್ಯದ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೈತರಿಗೆ ಈಗಿರುವ 7 ಗಂಟೆಗಿಂತ ಹೆಚ್ಚು ವಿದ್ಯುತ್ ಸಂಪರ್ಕ ಕಲ್ಪಿಸಲು ಸಿದ್ದತೆ ನಡೆಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ತಿಳಿಸಿದರು.
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಇಂದು ಭೇಟಿ ನೀಡಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕುಸುಮ್ ಸಿ ಮೂಲಕ ಹೆಚ್ಚಿನ ವಿದ್ಯುತ್ ಉತ್ಪಾದನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ ರೈತರಿಗೆ ಈಗಿರುವ 7 ಗಂಟೆಗಿಂತ ಹೆಚ್ಚು ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದರು.
ಅದೇ ರೀತಿ ರೈತರು ಹೊಲಗಳಲ್ಲಿ ನಿರ್ಮಿಸಿರುವ ಮನೆಗಳಿಗೂ ಸಹ ನಿರಂತರ ಜ್ಯೋತಿ ಮೂಲಕ ಸಿಂಗಲ್ ಫೇಸ್ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದ್ದು, ಇದನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮೋಟಾರ್ಗೆ ಬಳಸಿಕೊಳ್ಳಬಾರದೆಂದು ಅವರು ಶೀಘ್ರದಲ್ಲೇ 4 ಲಕ್ಷಕ್ಕೂ ಹೆಚ್ಚು ಅಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಪಡೆದಿರುವವರಿಗೆ ಸಕ್ರಮಗೊಳಿಸಲಾಗುವುದು ಎಂದರು.
ಪಾವಗಡ ಬಳಿ ಈಗಾಗಲೇ 10 ಸಾವಿರ ಎಕರೆಯಲ್ಲಿ ಸೋಲಾರ್ ಸಿಸ್ಟಮ್ ಮೂಲಕ ವಿದ್ಯುತ್ ಉತ್ಪಾದಿಸಲಾಗುತ್ತಿದ್ದು, ಇನ್ನು 10 ಸಾವಿರ ಎಕರೆಯಲ್ಲಿ ವಿದ್ಯುತ್ ಉತ್ಪಾದನೆಗೆ ಈಗಾಗಲೇ ಕ್ರಮ ಕೈಗೊಂಡಿದ್ದು ರೈತರು ಸಹ ಮುಂದೆ ಬಂದಿದ್ದಾರೆ ಎಂದು ತಿಳಿಸಿದ ಅವರು ರೈತರಾಗಲೀ, ಸಾರ್ವಜನಿಕರಾಗಲೀ ಅಕ್ರಮ ವಿದ್ಯುತ್ ಬಳಸಿಕೊಳ್ಳಬಾರದೆಂದು ಎಚ್ಚರಿಕೆ ನೀಡಿದರು.
ನಾನು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ, ಯುವ ಕಾಂಗ್ರೆಸ್ ಕಾರ್ಯಕರ್ತನಾಗಿ ಪಕ್ಷದಲ್ಲಿ ಸೇವೆ
ಸಲ್ಲಿಸುತ್ತಾ ಬಂದಿದ್ದು, ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಸಚಿವನಾಗಿ ಅನೇಕ ಖಾತೆಗಳ ಜವಾಬ್ದಾರಿ ಹೊತ್ತಿದ್ದೇನೆ.
ಕಾಂಗ್ರೆಸ್ ಇತಿಹಾಸವೆಂದರೆ ದೇಶದ ಇತಿಹಾಸವಾ ಗಿದ್ದು, ಪಕ್ಷ ನಿಷ್ಠೆಯಿಂದ ಕಾರ್ಯನಿರ್ವಹಿಸುವಂತೆ ಕಾರ್ಯಕರ್ತರಿಗೆ ಸಚಿವ ಜಾರ್ಜ್ ಕರೆ ನೀಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಬಿ. ಮಂಜಪ್ಪ, ಕೆಪಿಸಿಸಿ ಸದಸ್ಯ ಮುದೇಗೌಡ್ರು ಗಿರೀಶ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶ್ರೀಮತಿ ಅನಿತಾಬಾಯಿ ಮಾಲತೇಶ್, ಕೊಡಪಾನ ದಾದಾಪೀರ್ ಮಾತನಾಡಿದರು.
ಈ ಸಂದರ್ಭದಲ್ಲಿ ಮಹಾಪೌರ ಕೆ.ಚಮನ್ ಸಾಬ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್. ಮಲ್ಲಿ ಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಎಸ್. ಪರಮೇಶ್, ಹರಿಹರದ ನಂದಿಗಾವಿ ಶ್ರೀನಿವಾಸ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸುರೇಂದ್ರ, ಸಾಗರ್ ಎಲ್.ಹೆಚ್., ಕಾಂಗ್ರೆಸ್ ಅಧ್ಯಕ್ಷ ಅಯೂಬ್, ಸುಭಾನ್ ಸಾಬ್ ಹಾಗೂ ಇತರರಿದ್ದರು.