ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ತರಲು ಬ್ಯಾಂಕ್ ಉದ್ಯೋಗಿಗಳ ಪ್ರತಿಭಟನೆ

ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ತರಲು ಬ್ಯಾಂಕ್ ಉದ್ಯೋಗಿಗಳ ಪ್ರತಿಭಟನೆ

ದಾವಣಗೆರೆ, ಫೆ. 21 – ಬ್ಯಾಂಕುಗಳಲ್ಲಿ ಅಗತ್ಯ ನೇಮಕಾತಿ ಮಾಡಬೇಕು, ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ತರಬೇಕು, ತಾತ್ಕಾಲಿಕ ನೌಕರರನ್ನು ಖಾಯಂಗೊಳಿಸಬೇಕು, ಉದ್ಯೋಗ ಭದ್ರತೆಯನ್ನು ರಕ್ಷಿಸಬೇಕು, ಬ್ಯಾಂಕ್ ಉದ್ಯೋಗಿಗಳ ಮೇಲಾಗುತ್ತಿರುವ ದಾಳಿಯಿಂದ ನೌಕರರನ್ನು ರಕ್ಷಿಸಬೇಕು, ಐಡಿಬಿಐ ಬ್ಯಾಂಕಿನಲ್ಲಿ ಸರ್ಕಾರಿ ಬಂಡವಾಳವನ್ನು ಶೇಕಡಾ 51 ಕ್ಕಿಂತ ಹೆಚ್ಚಿರಬೇಕು, ಬ್ಯಾಂಕಿಂಗ್ ಸೇವೆಗಳನ್ನು ಹೊರಗುತ್ತಿಗೆ ನೀಡಬಾರದು ಹಾಗೂ ಇನ್ನಿತರೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ  ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ಬ್ಯಾಂಕ್ ನೌಕರರು ಹಾಗೂ ಅಧಿಕಾರಿ ಸಮೂಹ ನಗರದ ಮಂಡಿಪೇಟೆ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಇಂದು ಪ್ರತಿಭಟನಾ ಮತ ಪ್ರದರ್ಶನ ನಡೆಸಿದರು.

ಯುಎಫ್‌ಬಿಯು ದಾವಣಗೆರೆ ಜಿಲ್ಲಾ ಸಂಚಾಲಕ ಕೆ‌.ರಾಘವೇಂದ್ರ ನಾಯರಿ ಮಾತನಾಡಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಮುಂಬರುವ ಮಾರ್ಚ್ ತಿಂಗಳ 24 ಮತ್ತು 25 ರಂದು ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಷ್ಕರಕ್ಕೆ ಪೂರ್ವಭಾವಿಯಾಗಿ ಇಂದು ದೇಶದಾದ್ಯಂತ ಬ್ಯಾಂಕ್ ಉದ್ಯೋಗಿಗಳಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಈ ಪ್ರತಿಭಟನಾ ಮತ ಪ್ರದರ್ಶನ ಆಯೋಜಿಸಲಾಗಿದೆ ಎಂದರು.

ಮುಷ್ಕರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿಗಳ ಸಂಘದ ಪ್ರಾದೇಶಿಕ ಕಾರ್ಯದರ್ಶಿ ಆರ್.ಶಂಕರಪ್ಪ, ಚಿತ್ರದುರ್ಗ ಮಹೇಶ್ವರಪ್ಪ, ನಿವೃತ್ತ ಬ್ಯಾಂಕ್ ನೌಕರರ ಸಂಘದ ಹೆಚ್. ಸುಗೀರಪ್ಪ ಭಾಗವಹಿಸಿ ಮುಷ್ಕರ ನಿರತರನ್ನು ಉದ್ದೇಶಿಸಿ ಮಾತನಾಡಿದರು.

ಮುಷ್ಕರದ ನೇತೃತ್ವವನ್ನು ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್‌ನ ಸದಸ್ಯ ಸಂಘಟನೆಗಳ ನಾಯಕರುಗಳಾದ ಆರ್. ಆಂಜನೇಯ, ಹೆಚ್.ಎಸ್.ತಿಪ್ಪೇಸ್ವಾಮಿ, ಪ್ರದೀಪ್ ಪಾಟೀಲ್, ಸುನಿಲ್‌ಕುಮಾರ್ ಎಸ್. ಮ್ಯಾಗೇರಿ, ಎಂ.ಎಸ್‌. ವಾಗೀಶ್, ಕೆ. ಗಂಗಾಧರ್, ದುರ್ಗಪ್ಪ, ಎಂ.ಡಿ. ವಿದ್ಯಾಸಾಗರ್, ಪರಶುರಾಮ, ಕೆ. ಜಯಲಕ್ಷ್ಮಿ, ಎನ್‌.ಜಿ. ಉಷಾ, ನಿಶಾ ಪಿಂಟೋ, ಭಾರತಿ, ಹೆಚ್.ಜೆ. ಆಶಾ, ರೇಣುಕಮ್ಮ, ಜೆ.ಟಿ. ಶಕ್ತಿಪ್ರಸಾದ್, ಗಾಯತ್ರಿ ಮುಂತಾದವರು ಭಾಗವಹಿಸಿದ್ದರು.

error: Content is protected !!