ದಾವಣಗೆರೆ ವಿಶ್ವವಿದ್ಯಾನಿಲಯದ 12ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆಹ್ಲೋಟ್
ದಾವಣಗೆರೆ, ಏ.2- ಶಿಕ್ಷಣವು ವ್ಯಕ್ತಿಯ ಜೀವನದಲ್ಲಿ ಹೊಸ ಆಲೋ ಚನೆಗಳು, ಜ್ಞಾನ ಮತ್ತು ಸಾಧ್ಯತೆಗಳನ್ನು ತುಂಬುವ ನಿರಂತರ ಪ್ರಯಾಣವಾಗಿದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
ದಾವಣಗೆರೆ ವಿಶ್ವವಿದ್ಯಾನಿಲಯ ದಲ್ಲಿ ಬುಧವಾರ ನಡೆದ 12ನೇ ಘಟಿಕೋತ್ಸವ ಸಮಾರಂಭದಲ್ಲಿ ವಿದ್ಯಾ ರ್ಥಿಗಳಿಗೆ ವಿವಿಧ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.
ಶಿಕ್ಷಣವು ನಮಗೆ ಉದ್ಯೋಗದ ಜೊತೆಗೆ ನೈತಿಕತೆ, ಸಹಾನುಭೂತಿ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಒದಗಿಸುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಜ್ಞಾನ ಪಡೆದು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ಇತ್ತೀಚಿನ ತಂತ್ರ ಜ್ಞಾನಗಳು ಮತ್ತು ಆಲೋಚನೆ ಗಳೊಂದಿಗೆ ನೀವು ಯಾವಾಗಲೂ ನಿಮ್ಮನ್ನು ನವೀಕೃತ ವಾಗಿರಿಸಿಕೊಳ್ಳ ಬೇಕು ಎಂದು ಸಲಹೆ ನೀಡಿದರು.
ಸ್ವಾತಂತ್ರ್ಯದ ನಂತರ ದೇಶವು ಎಲ್ಲಾ ಕ್ಷೇತ್ರ ಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ. ಈಗ ದೇಶದ ಆರ್ಥಿಕತೆಯು ಪ್ರಬಲವಾಗಿದ್ದು ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಇದನ್ನು ಮತ್ತಷ್ಟು ಬಲಪಡಿಸಲು ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಮುಂಚೂಣಿಗೆ ತರಲು ನಿಮ್ಮ ಕೊಡುಗೆ ಬಹಳ ಮುಖ್ಯ ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಹೇಳಿದರು.
ತಾಪಮಾನ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ನೀರು, ಅರಣ್ಯ ಮತ್ತು ವಾಯು ಸಂರಕ್ಷಣೆಯ ನಿಟ್ಟಿನಲ್ಲಿ ಕೆಲಸ ಮಾಡುವ ಅವಶ್ಯಕತೆಯಿದೆ. ಶಿಕ್ಷಣದಿಂದ ಪಡೆದ ಜ್ಞಾನದೊಂದಿಗೆ, ಮುಂಬರುವ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿ ಏಕ್ ಭಾರತ್, ಶ್ರೇಷ್ಠ ಭಾರತ ಮತ್ತು ಸ್ವಾವಲಂಬಿ ಭಾರತ ನಿರ್ಮಾಣದಲ್ಲಿ ಭಾಗವಹಿಸಿ ಎಂದು ಕರೆ ನೀಡಿದರು.
ದಾವಣಗೆರೆ ವಿಶ್ವವಿದ್ಯಾಲಯವು ಕಡಿಮೆ ಅವಧಿಯಲ್ಲಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದೆ. ನಿರಂತರ ಮತ್ತು ಸಕಾರಾತ್ಮಕ ಪೂರ್ವಭಾವಿ ಪ್ರಯತ್ನಗಳ ಮೂಲಕ ಅಭಿವೃದ್ಧಿ ಹೊಂದಿದ ಭಾರತಕ್ಕೆ ಮಾನವ ಸಂಪನ್ಮೂಲಗಳನ್ನು ರೂಪಿಸುವಲ್ಲಿ ವಿಶ್ವವಿದ್ಯಾಲಯವು ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ರಾಜ್ಯಪಾಲರು ಇದೇ ಸಂದರ್ಭದಲ್ಲಿ ಶ್ಲ್ಯಾಘಿಸಿದರು.
ಶಿಸ್ತು, ಶಿಷ್ಟಾಚಾರಕ್ಕೆ ರಾಜ್ಯಪಾಲರ ಮೆಚ್ಚುಗೆ
ಕಳೆದ ವರ್ಷ ವಿದ್ಯಾರ್ಥಿಗಳಲ್ಲಿ ಉತ್ಸಾಹ ಹೆಚ್ಚಾಗಿತ್ತು. ಹಾಗಾಗಿ ಅವರು ಕಾರ್ಯಕ್ರಮದ ಮಧ್ಯದಲ್ಲಿಯೇ ಎದ್ದು ಹೋದರು. ಈ ಬಾರಿಯೂ ವಿದ್ಯಾರ್ಥಿಗಳಲ್ಲಿ ಉತ್ಸಾಹ ಇದೆ. ಆದರೆ, ಮಧ್ಯದಲ್ಲಿ ಎದ್ದು ಹೋಗದೇ ಶಿಸ್ತು ಪ್ರದರ್ಶಿಸಿ ದ್ದಾರೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಕಳೆದ ಬಾರಿಯ ಘಟಿಕೋತ್ಸವದ ವೇಳೆ ಪದವಿ ಸ್ವೀಕರಿಸಿದ ಅನೇಕ ವಿದ್ಯಾರ್ಥಿಗಳು ಅರ್ಧದಲ್ಲಿಯೇ ಎದ್ದು ಹೋಗಿ ಅಭಾಸವುಂಟಾಗಿತ್ತು. ಇದನ್ನು ನೆನಪಿಸಿಕೊಂಡ ರಾಜ್ಯಪಾಲರು, ಈ ಬಾರಿಯ ಶಿಸ್ತು, ಶಿಷ್ಟಾಚಾರಕ್ಕೆ ಭೇಷ್ ಎಂದರು. ಅಲ್ಲದೇ, ಯಾವುದೇ ಕಾರ್ಯಕ್ರಮವಾದರೂ ಕೊನೆಯವರೆಗೆ ಇದ್ದು ಕಾರ್ಯಕ್ರಮದ ಯಶಸ್ಸಿಗೆ ಕಾರಣರಾಗಬೇಕು ಎಂದು ಕಿವಿ ಮಾತು ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ಸಚಿವ ಸುಧಾಕರ್ ಸಹ ಕಳೆದ ಬಾರಿ ಘಟನೆ ನೆನಪಿಸಿಕೊಳ್ಳುತ್ತಾ, ಕುಲಪತಿಗಳು ಕಳೆದ ವರ್ಷದ ಘಟನೆಯಿಂದ ಎಚ್ಚೆತ್ತುಕೊಂಡು ಶಿಸ್ತಿನ ಸಮಾರಂಭ ಆಯೋಜಿಸಿದ್ದಾರೆ ಎಂದರು.
14,048 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ದಾವಣಗೆರೆ: ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ 14,048 ವಿದ್ಯಾರ್ಥಿಗಳಿಗೆ ರಾಜ್ಯಪಾಲರು ಪದವಿ ಪ್ರದಾನ ಮಾಡಿದರು.
46 ವಿದ್ಯಾರ್ಥಿಗಳಿಗೆ ರಾಜ್ಯಪಾಲರು 87 ಚಿನ್ನದ ಪದಕಗಳನ್ನು ಧಾರಣೆ ಮಾಡಿದರು. 57 ವಿದ್ಯಾರ್ಥಿಗಳು ಪಿಎಚ್.ಡಿ. ಪದವಿ ಸ್ವೀಕರಿಸಿದರು. ಈ ಬಾರಿ ಒಟ್ಟು 8837 ಮಹಿಳೆಯರು ಮತ್ತು 5211 ಪುರುಷ ವಿದ್ಯಾರ್ಥಿಗಳು ಪದವಿ ಪಡೆದರು.
ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಐ.ಕೆ.ರಿಯಾ ಒಟ್ಟು 6 ಚಿನ್ನದ ಪದಕಗಳೊಂದಿಗೆ ಅತಿ ಹೆಚ್ಚು ಚಿನ್ನ ಗಳಿಸಿದ ಗೌರವಕ್ಕೆ ಪಾತ್ರರಾದರು.
ಆಟೋ ಚಾಲಕನ ಮಗಳು ಆರ್.ಟಿ.ಶಾಶ್ವತ (ಅರ್ಥಶಾಸ್ತ್ರ), ಅರ್ಚಕರ ಮಗಳು ಗೌರಿ ಮಣ್ಣೂರ (ಗಣಿತಶಾಸ್ತ್ರ), ಪತ್ರಿಕೆ ವಿತರಕ ಆರ್.ಲಕ್ಷ್ಮಣ (ಪತ್ರಿಕೋದ್ಯಮ) ಅವರು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದು ವಿಶೇಷವಾಗಿತ್ತು. ರೈತರು, ಕಾರ್ಮಿಕರು, ಶಿಕ್ಷಕರು, ಚಾಲಕರ ಮಕ್ಕಳೂ ಸಹ ಚಿನ್ನ ಗಳಿಸಿದರು.
ಘಟಿಕೋತ್ಸವದಲ್ಲಿ ಡಾ.ಎಂ.ಸಿ. ಸುಧಾಕರ್ ಮಾತನಾಡಿ, ವಿಶ್ವವಿದ್ಯಾಲಯಗಳ ಸಮಸ್ಯೆ ಮತ್ತು ಪರಿಹಾರ ಅಧ್ಯಯನಕ್ಕಾಗಿ ಸರ್ಕಾರ ದಿಂದ ಉಪಸಮಿತಿ ರಚಿಸಲಾಗಿದೆ. ಸಮಿತಿಯು ಸದ್ಯದಲ್ಲಿಯೇ ವರದಿ ಸಲ್ಲಿಸಲಿದ್ದು, ಸಂಪುಟ ಸಭೆಯಲ್ಲಿ ಚರ್ಚಿಸಿ ವರದಿಯನ್ನು ಅನುಷ್ಠಾನಕ್ಕೆ ತರಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಹೆಚ್ಚಿನ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸುವುದರಿಂದ ಗುಣ ಮಟ್ಟದ ಶಿಕ್ಷಣ ನೀಡಲು ಸಾಧ್ಯವಿಲ್ಲ. ಬದಲಾಗಿ ಗುಣಮಟ್ಟ ಆಧರಿಸಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಬೇಕಿದೆ. ಕೃತಕ ಬುದ್ದಿಮತ್ತೆ ಹಾಗೂ ಮಷಿನ್ ಲರ್ನಿಂಗ್, ಡಾಟಾ ಸೈನ್ಸ್ ಬಳಕೆ ಮಾಡಿಕೊಂಡು ಸ್ಪರ್ಧಾತ್ಮಕತೆಯನ್ನು ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕಾಗಿದೆ ಎಂದು ಅಭಿಪ್ರಾಯಿಸಿದರು.
ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯ ಗಳಲ್ಲಿ ಮಂಜೂರಾದ 2500 ಹುದ್ದೆಗಳು ಹಾಗೂ ಹೊಸ ಹುದ್ದೆಗಳು ಸೇರಿದಂತೆ ಸುಮಾರು 3500 ರಷ್ಟು ಹುದ್ದೆಗಳು ಖಾಲಿ ಇವೆ. ಸಂಪುಟ ಉಪ ಸಮಿತಿ ವರದಿ ನೀಡಿದ ನಂತರ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಕುಲಪತಿ ಪ್ರೊ.ಬಿ.ಡಿ.ಕುಂಬಾರ ಸ್ವಾಗತ ಭಾಷಣ ಮಾಡುತ್ತಾ, ದಾವಣಗೆರೆ ವಿಶ್ವವಿದ್ಯಾನಿಲಯವು ಶಿಕ್ಷಣದ ಜೊತೆಗೆ ಸಂಶೋಧನೆ, ಸಮುದಾಯ ಅಭಿವೃದ್ಧಿ, ಸಾಮಾಜಿಕ ಜವಾಬ್ದಾರಿಯ ಮೌಲ್ಯಿಕ ಶಿಕ್ಷಣದ ಮೂಲಕ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಗೌರವ ಪಡೆಯಲು ಸಾಧ್ಯವಾಗಿದೆ ಎಂದು ಹೇಳಿದರು.
ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ್, ಕುಲಸಚಿವ ಪ್ರೊ.ಆರ್.ಶಶಿಧರ್, ವಿವಿಯ ಸಿಂಡಿಕೇಟ್ ಸದಸ್ಯರು, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.