15-18: 17,000 ಡೋಸ್ ಲಸಿಕೆ

ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ರವೀಂದ್ರನಾಥ್

ಚನ್ನಗಿರಿ ತಾಲ್ಲೂಕಿನಲ್ಲಿ  12,712, ದಾವಣಗೆರೆ 46,281, ಹರಿಹರ 1,1779, ಹೊನ್ನಾಳಿ 9977 ಹಾಗೂ ಜಗಳೂರು ತಾಲ್ಲೂಕಿನಲ್ಲಿ 8,097 ಸೇರಿ  ಜಿಲ್ಲೆಯಲ್ಲಿ ಒಟ್ಟು 88,843 ವಿದ್ಯಾರ್ಥಿಗಳಿಗೆ ಲಸಿಕೆ ಗುರಿ.

ದಾವಣಗೆರೆ ಜ.3 – ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಸೋಮವಾರ ಒಂದೇ ದಿನ 17 ಸಾವಿರ ವಿದ್ಯಾರ್ಥಿಗಳು ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ.

ನಗರದ ಮೋತಿ ವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಎಸ್.ವಿ. ರವೀಂದ್ರನಾಥ್, ಎಲ್ಲಾ 15 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಲಸಿಕೆ ಹಾಕಿಸಿಕೊಂಡಲ್ಲಿ ಮಾತ್ರ ಓಮಿಕ್ರಾನ್  ತಡೆಗಟ್ಟಲು ಸಾಧ್ಯ ಎಂದು ಹೇಳಿದರು.

ರಾಜ್ಯದಲ್ಲಿ ಕೋವಿಡ್  ಮತ್ತು ಓಮಿಕ್ರಾನ್ ತಡೆಗಟ್ಟುವ ಉದ್ದೇಶದಿಂದಲೇ ಎಲ್ಲಾ ಕಿರಿಯ ವಯಸ್ಸಿನ ವಿದ್ಯಾರ್ಥಿಗಳಿಗೂ ಲಸಿಕೆ ನೀಡುವ ಅಭಿಯಾನ ರೂಪಿಸಲಾಗಿದೆ. ಕೇರಳ, ಮಹಾರಾಷ್ಟ್ರ, ಗೋವಾದಂತೆ ಓಮಿಕ್ರಾನ್ ವಿಪರೀತವಾಗಿ ಹೆಚ್ಚುತ್ತಿದ್ದು ಎಲ್ಲರೂ ಮುಂಜಾಗ್ರತೆ ವಹಿಸುವಂತೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತಾನಾಡಿ, ಜಿಲ್ಲೆಯಲ್ಲಿ 15 ರಿಂದ 18 ವರ್ಷದ ಒಳಗಿನ 88 ಸಾವಿರ ವಿದ್ಯಾರ್ಥಿಗಳಿದ್ದು, ಸದ್ಯ 65 ಸಾವಿರ ಡೋಸ್ ಲಸಿಕೆ ಲಭ್ಯವಿದೆ. ಎಲ್ಲಾ ತಾಲ್ಲೂಕುಗಳು ಒಳಗೊಂಡಂತೆ 503 ಕೇಂದ್ರಗಳಲ್ಲಿ ಲಸಿಕೆ ನೀಡಲು ಆಯೋಜನೆ ಮಾಡಲಾಗಿದೆ, ಮೊದಲ ಡೋಸ್ ನೀಡಿದ 28 ದಿನಗಳ ನಂತರ ಎರಡನೇ ಡೋಸ್ ನೀಡಲಾಗುವುದು ಎಂದರು. ಲಸಿಕೆ ಪಡೆಯಲು ವಿದ್ಯಾರ್ಥಿಗಳು ಸ್ವ-ಪ್ರೇರಣೆಯಿಂದ ಮುಂದೆ ಬರಬೇಕು, ಯಾವುದೇ ವಿದ್ಯಾರ್ಥಿ ಅಥವಾ ಪೋಷಕರು ಈ ಬಗ್ಗೆ ಆತಂಕಪಡಬೇಕಾಗಿಲ್ಲ, ಲಸಿಕೆ ಬಹಳ ಸುರಕ್ಷಿತವಾಗಿದ್ದು, ಲಸಿಕೆ ಹಾಕಿಸಿಕೊಳ್ಳುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಈಗಾಗಲೇ ಶೇ. 99ರಷ್ಟು ಜನರು ಮೊದಲ ಡೋಸ್  ಹಾಗೂ ಶೇ. 80ರಷ್ಟು ಜನರು ಎರಡನೇ ಡೋಸ್ ಪಡೆದಿದ್ದಾರೆ, ಶೇ. 100ರಷ್ಟು ಲಸಿಕೆ ನೀಡುವುದರ ಮೂಲಕ ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡುವುದರ ಜೊತೆಗೆ ಜನರನ್ನು ರಕ್ಷಿಸಲು ಜಿಲ್ಲಾಡಳಿತ ಕಟಿ ಬದ್ಧವಾಗಿದೆ ಎಂದು ತಿಳಿಸಿದರು.

ಕೋವಿಡ್ ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ ಇಳಿಮುಖವಾಗಿದೆ ಎಂಬ ಕಾರಣಕ್ಕೆ ಜನರು ಮಾಸ್ಕ್ ಮತ್ತು ಸಾಮಾಜಿಕ ಅಂತರದ ಬಗ್ಗೆ ಅಲಕ್ಷ್ಯ ಮಾಡಬಾರದು. ನಾಗರಿಕರು ಸ್ವಯಂ ಪ್ರೇರಿತರಾಗಿ ಮಾಸ್ಕ್ ಧರಿಸಬೇಕು. ದಂಡ ವಿಧಿಸುತ್ತಾರೆಂಬ ಭಯಕ್ಕೆ ಧರಿಸುವ ಬದಲು ಸ್ವ ಇಚ್ಚೆಯಿಂದ ಜಾಗೃತಿ ವಹಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ.ವಿಜಯ ಮಹಾಂತೇಶ್ ದಾನಮ್ಮನವರ್, ಪಾಲಿಕೆ ಮೇಯರ್ ಎಸ್.ಟಿ. ವೀರೇಶ್, ಆಯುಕ್ತ ವಿಶ್ವನಾಥ್ ಮುದಜ್ಜಿ, ಜಿಲ್ಲಾ ವೈದ್ಯಾಧಿಕಾರಿ ಡಾ.ನಾಗರಾಜ್, ಆರ್.ಸಿ.ಹೆಚ್. ಅಧಿಕಾರಿ ಡಾ.ಮೀನಾಕ್ಷಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನೀರ್ದೆಶಕ ಎಂ. ಶಿವರಾಜು, ಮೋತಿ ವೀರಪ್ಪ ಕಾಲೇಜಿನ ಪ್ರಾಚಾರ್ಯ ಪಂಚಾಕ್ಷರಪ್ಪ ಎಸ್. ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

error: Content is protected !!