ಜಗಳೂರಿನಲ್ಲಿ ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ಎಐಟಿಯುಸಿ ಮನವಿ

ಜಗಳೂರು, ಜ.13- ವೇತನ ಹೆಚ್ಚಿಸಲು ಒತ್ತಾಯಿಸಿ ಎಐಟಿಯುಸಿ ಸಂಯೋಜಿತ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಕಾರ್ಯಕರ್ತರು ತಹಶೀಲ್ದಾರ್ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಂಘಟನೆ ತಾಲ್ಲೂಕು ಅಧ್ಯಕ್ಷ ಮಹಮ್ಮದ್ ಭಾಷಾ ಮಾತನಾಡಿ, ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಳೆದ 19 ವರ್ಷಗಳಿಂದ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಿಸಿಯೂಟ ತಯಾರಕರು ಕೆಲಸ ನಿರ್ವಹಿಸುತ್ತಿದ್ದು, ಜೀವನ ಭದ್ರತೆಯಿಲ್ಲದೆ ನಲುಗುತ್ತಿದ್ದಾರೆ. ಅವರಿಗೆ ಯಾವುದೇ ಭದ್ರತೆ ಇಲ್ಲ ಎಂದು ದೂರಿದರು.

ಪ್ರಧಾನ ಕಾರ್ಯದರ್ಶಿ ಮಾದಿಹಳ್ಳಿ ಮಂಜುನಾಥ್ ಮಾತನಾಡಿ, 60 ವರ್ಷ ವಯೋಮಾನ ಮೀರಿ ನಿವೃತ್ತಿಯಾದವರಿಗೆ ರೂ. 2 ಲಕ್ಷ ಇಡಿಗಂಟು ನೀಡಬೇಕು. ಮಾಸಿಕ ಪಿಂಚಣಿ ರೂ.3 ಸಾವಿರ ಜಾರಿಗೊಳಿಸಬೇಕು. ಖಾಸಗಿ ಸಂಸ್ಥೆಯವರಿಗೆ ವಹಿಸುವ ನಿರ್ಧಾರ ಕೈಬಿಡಬೇಕು  ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆ ಪದಾಧಿಕಾರಿಗಳಾದ ಚನ್ನಮ್ಮ, ಮೀನಾಕ್ಷಿ, ವೀರಣ್ಣ, ತಿಪ್ಪೇಸ್ವಾಮಿ, ವೀಣಾ, ಉಮಾದೇವಿ, ರತ್ನಮ್ಮ, ಸರೋಜ, ಸುಮ, ಮತ್ತಿತರರು ಭಾಗವಹಿಸಿದ್ದರು.

error: Content is protected !!