ಜಿಲ್ಲೆಯ 1300 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ವಿತರಣೆ

ಮಲೇ ಬೆನ್ನೂರು, ಜ. 17- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ ವ್ಯಾಪ್ತಿಯ ಬಡ ವಿದ್ಯಾರ್ಥಿಗಳಿಗೆ ನೆರವಾಗಲೆಂದು  ಡಾ. ಡಿ. ವೀರೇಂದ್ರ ಹೆಗ್ಗಡೆಯ ವರು ಇದುವರೆಗೆ 40 ಸಾವಿರ ವಿದ್ಯಾರ್ಥಿಗಳಿಗೆ ಒಟ್ಟು 50 ಕೋಟಿ ರೂ. ಶಿಷ್ಯ ವೇತನ ನೀಡಿದ್ದು, ದಾವಣಗೆರೆ ಜಿಲ್ಲೆಯಲ್ಲಿ 1300 ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡಿದ್ದಾರೆ ಎಂದು ಯೋಜನೆಯ ಜಿಲ್ಲಾ ಹಿರಿಯ ನಿರ್ದೇಶಕ ಜಯಂತ್ ಪೂಜಾರಿ ತಿಳಿಸಿದ್ದಾರೆ.

ಇಲ್ಲಿನ ಯೋಜನಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಸಮುದಾಯ ಅಭಿವೃದ್ಧಿ ವಿಭಾಗದ ಮೂಲಕ ಸುಜ್ಞಾನ ನಿಧಿ ಶಿಷ್ಯವೇತನ ಸದ್ಬಳಕೆ ಮಾಡಿಕೊಳ್ಳಿ ಎಂದರು.

ಸಬ್‌ಇನ್ಸ್ ಪೆಕ್ಟರ್ ರವಿಕುಮಾರ್ ಮಾತನಾಡಿ, ಸುಜ್ಞಾನ ನಿಧಿ ಪಡೆಯುವ ವಿದ್ಯಾರ್ಥಿಗಳು ಸನ್ಮಾರ್ಗದಲ್ಲಿ ನಡೆದು, ಓದಿನ ಕಡೆಗೆ ಹೆಚ್ಚಿನ ಗಮನ ನೀಡಿ, ಆದರ್ಶ ವಿದ್ಯಾರ್ಥಿಯಾಗಿ ಸಮಾಜದ ಶಕ್ತಿಯಾಗಿ ಹೊರಹೊಮ್ಮಬೇಕು ಎಂದು ತಿಳಿಸಿದರು.

ಪುರಸಭೆಯ ಮುಖ್ಯಾಧಿಕಾರಿ ಡೊಂಬರ್ ಮಾತನಾಡಿ, ಸುಜ್ಞಾನ ನಿಧಿ ಶಿಷ್ಯ ವೇತನವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಿ ಎಂದರು.  ಯೋಜನಾಧಿಕಾರಿ ವಸಂತ್ ಎಸ್. ದೇವಾಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು.  ಮಲೇಬೆನ್ನೂರು ವಲಯದ ಮೇಲ್ವಿಚಾರಕ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು. ಕಚೇರಿ ಪ್ರಬಂಧಕರಾದ ಆಶಾ, ರಾಕೇಶ್ ಹಾಗೂ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.

error: Content is protected !!