ಬೇಸಿಗೆಯೊಳಗಾಗಿ ಬಾಕಿ ಸ್ಮಾರ್ಟ್ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು : ಉಸ್ತುವಾರಿ ಸಚಿವರ ಸೂಚನೆ

ದಾವಣಗೆರೆ, ಜ. 11- ಸ್ಮಾರ್ಟ್ ಸಿಟಿ ಯೋಜನೆಯಡಿ 975.93 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ 90 ಕಾಮಗಾರಿಗಳ ಪೈಕಿ 24 ಕಾಮಗಾರಿಗಳು ಮಾತ್ರ ಪೂರ್ಣ ಗೊಂಡಿದ್ದು, 54 ಕಾಮಗಾರಿಗಳು ಮಂದಗತಿ ಯಲ್ಲಿ ಸಾಗಿವೆ, ಉಳಿದ 11 ಕಾಮಗಾರಿಗಳು ಇನ್ನೂ ಟೆಂಡರ್ ಹಂತದಲ್ಲಿವೆ.  ಎಲ್ಲ ಕಾಮ ಗಾರಿಗಳನ್ನು ಬರುವ ಬೇಸಿಗೆ ಕಾಲದ ಒಳಗಾಗಿ ಪೂರ್ಣಗೊಳಿಸುವಂತೆ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್  ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾ ಗಿದ್ದ ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದ ಪ್ರಮುಖ ಅಭಿವೃದ್ಧಿ ಕಾಮಗಾರಿಗಳೂ ಕೂಡ ತ್ವರಿತವಾಗಿ ನಡೆಯುತ್ತಿಲ್ಲ, ಗುಣಮಟ್ಟದಲ್ಲಿ ಕೊರತೆ ಇದೆ ಎಂಬ ದೂರು ವ್ಯಾಪಕವಾಗಿ ಕೇಳಿ ಬರುತ್ತಿದೆ.  ನಿಗದಿತ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸದಿದ್ದರೆ, ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆಗೆ ನೀಡಿರುವ ಅನುದಾನ ವಾಪಸ್ ಹೋಗುವ ಸಾಧ್ಯತೆಗಳಿರುತ್ತವೆ.  ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನುದಾನ ವಾಪಸ್ ಹೋದರೆ, ಖಂಡಿತಾ ನಿಮ್ಮೆಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸದ್ಯ ಚಳಿಗಾಲವಿದ್ದು, ಮಳೆ ಬರುವ ಸಾಧ್ಯತೆಗಳು ಕಡಿಮೆ ಇರುತ್ತದೆ.  ಮುಂದಿನ ಮಳೆಗಾಲ ಪ್ರಾರಂಭವಾಗುವುದರ ಒಳಗಾಗಿ, ಅಂದರೆ ಬೇಸಿಗೆ ಕಾಲದ ಒಳಗಾಗಿ ಬಾಕಿ ಇರುವ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು.  ಅಧಿಕಾರಿಗಳು ಮತ್ತೆ ಕುಂಟು ನೆಪ ಹೇಳಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ ಸಚಿವರು, ತ್ವರಿತ ಕಾಮಗಾರಿ ಕೈಗೊಳ್ಳಲು ವಿಫಲರಾಗುವ ಗುತ್ತಿಗೆದಾರರ ಮೇಲೆ ನಿಯಮಾನುಸಾರ ದಂಡ ವಿಧಿಸಲು ಅವಕಾಶವಿದ್ದು, ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರ ಮೇಲೆ ಈ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಅವರು ಯೋಜನೆ ಕಾಮಗಾರಿಗಳ ಕುರಿತು ವಿವರ ನೀಡುತ್ತಾ, ಮಾರ್ಚ್ ಒಳಗಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. 4.64 ಕೋಟಿ ರೂ. ನಲ್ಲಿ ಸ್ಮಾರ್ಟ್ ಸ್ಕೂಲ್ ಹಾಗೂ 4.92 ಕೋಟಿ ರೂ. ವೆಚ್ಚದಡಿ ಸ್ಮಾರ್ಟ್ ಕಾಲೇಜು ನಿರ್ಮಾಣಕ್ಕೆ ಟೆಂಡರ್ ಆಗಿದೆ. 120 ಕೋಟಿ ರೂ. ವೆಚ್ಚದಲ್ಲಿ ಕೆಎಸ್‍ಆರ್‍ಟಿಸಿ ಹೊಸ ನಿಲ್ದಾಣ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದು, ಮಿನಿ ಥಿಯೇಟರ್, ಶಾಪಿಂಗ್ ಮಾಲ್ ಒಳಗೊಂಡು, ಆಕರ್ಷಕ ಹಾಗೂ ಆಧುನಿಕ ವ್ಯವಸ್ಥೆಯನ್ನು ಒಳಗೊಳ್ಳಲಿದ್ದು, ಕಾಮಗಾರಿಗೆ ಚಾಲನೆ ನೀಡಬೇಕಿದೆ ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ,   ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಮಂದಗತಿಯಿಂದಾಗಿ ಸಾರ್ವಜನಿಕರು ತೊಂದರೆ ಎದುರಿಸುತ್ತಿದ್ದು, ಸರ್ಕಾರವನ್ನು ದೂಷಿಸುತ್ತಿದ್ದಾರೆ.  ಅಧಿಕಾರಿಗಳ ಕಾರ್ಯ ವೈಖರಿಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.  ಇಂದಿನ ಸಚಿವರ ಪ್ರಗತಿ ಪರಿಶೀಲನಾ ಸಭೆಯ ಬಗ್ಗೆ ಸಂಸದರಿಗೆ ಅಧಿಕಾರಿಗಳು ಮಾಹಿತಿ ನೀಡಿಲ್ಲ.  ಈ ರೀತಿ ಅಧಿಕಾರಿಗಳು ಸಮನ್ವಯತೆ ಸಾಧಿಸದಿದ್ದರೆ, ಅಭಿವೃದ್ಧಿ ಕಾರ್ಯಗಳು ತ್ವರಿತವಾಗಿ ಹೇಗೆ ನಡೆಯಲು ಸಾಧ್ಯ.  ಮುಂದೆ ಈ ರೀತಿ ಆದರೆ ಸಹಿಸುವುದಿಲ್ಲ ಎಂದು ಸ್ಮಾರ್ಟ್ ಸಿಟಿ ಯೋಜನೆ ಅಧಿಕಾರಿಗಳಿಗೆ ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.  

ಸಭೆಯಲ್ಲಿ ಶಾಸಕ ಎಸ್.ಎ. ರವೀಂದ್ರ ನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೆ.ವಿ. ಶಾಂತಕುಮಾರಿ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮಹಾನಗರಪಾಲಿಕೆ ಮಹಾಪೌರ ಅಜಯ್‍ಕುಮಾರ್, ಆಯುಕ್ತ ವಿಶ್ವನಾಥ ಮುದಜ್ಜಿ, ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಪ್ರಸನ್ನಕುಮಾರ್, ವೀರೇಶ್, ದೂಡಾ ಅಧ್ಯಕ್ಷ ಎನ್.ಹೆಚ್. ಶಿವಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.

error: Content is protected !!