ದಾವಣಗೆರೆ, ಏ.21- ಜಿಲ್ಲೆಗೆ ಹೊರ ಜಿಲ್ಲೆಗಳಿಂದ ವಾಹನಗಳು ಬರುವ ಮಾರ್ಗಗಳಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸಲು ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬಿ.ಎ. ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಬುಧವಾರ ಕೋವಿಡ್ ಪರಿಸ್ಥಿತಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್ ತಡೆಗೆ ಪರಿಣಾಮಕಾರಿ ಕ್ರಮ ತೆಗೆದುಕೊಳ್ಳಬೇಕಿದ್ದು, ಈ ದಿಸೆಯಲ್ಲಿ ಜಿಲ್ಲೆಯ ಗಡಿ ಪ್ರವೇಶಿಸುವ ಮಾರ್ಗಗಳಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಹಾಗೂ ಹೈವೇ ರಸ್ತೆಯಿಂದ ನಗರಕ್ಕೆ ಪ್ರವೇಶಿಸುವ ವಾಹನಗಳ ಮೇಲೂ ನಿಗಾ ಇಡುವಂತೆ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಗೆ ಸೂಚಿಸಿದರು.
ಜಾತ್ರೆ, ರಥೋತ್ಸವಗಳನ್ನು ರದ್ದುಗೊಳಿಸಿ, ದೇವಸ್ಥಾನ, ಮಸೀದಿ, ಚರ್ಚುಗಳಲ್ಲಿ ಜನಸಂದಣಿಯನ್ನು ತಡೆಗಟ್ಟಲು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಕೋವಿಡ್ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಬೆಡ್ಗಳು ಮೀಸಲಿರಬೇಕು. ಯಾವುದೇ ಪ್ರಭಾವಕ್ಕೆ ಒಳಗಾಗಿ ಆಸ್ಪತ್ರೆಗಳಿಗೆ ವಿನಾಯಿತಿ ನೀಡಬಾರದು. ಒಂದು ವೇಳೆ ಆಸ್ಪತ್ರೆಗಳು ಸಹಕರಿಸದಿದ್ದರೆ ಮಾನ್ಯತೆ ರದ್ದುಪಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ 9 ಸರ್ಕಾರಿ ಆಸ್ಪತ್ರೆಗಳಲ್ಲಿ 1450 ಬೆಡ್ ಹಾಗೂ 11 ಖಾಸಗಿ ಆಸ್ಪತ್ರೆಗಳಲ್ಲಿ 2273 ಬೆಡ್ ಸೇರಿದಂತೆ ಒಟ್ಟು 3723 ಬೆಡ್ಗಳು ಜಿಲ್ಲೆಯಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆಗೆ ಮೀಸಲಿದ್ದು, ಈ ಪೈಕಿ ಸದ್ಯ 293 ಬೆಡ್ಗಳಲ್ಲಿ ಕೋವಿಡ್ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ 6000 ಲೀ. ಸಾಮರ್ಥ್ಯದ ಆಕ್ಸಿಜನ್ ಘಟಕ ಲಭ್ಯವಿದ್ದು, ಇದರ ಜೊತೆಗೆ ಖಾಸಗಿಯಲ್ಲಿಯೂ ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಆಕ್ಸಿಜನ್ನ ಯಾವುದೇ ತೊಂದರೆ ಇಲ್ಲ ಎಂದರು.
ಜಿಲ್ಲೆಯಲ್ಲಿ ತಾವೇ ಖುದ್ದಾಗಿ ಜನನಿಬಿಡ ಸ್ಥಳಗಳಿಗೆ ಭೇಟಿ ನೀಡಿ, ಮಾಸ್ಕ್ ಅಭಿಯಾನ ನಡೆಸುತ್ತಿದ್ದು, ಜನರು ಏನೂ ಆಗಿಯೇ ಇಲ್ಲವೆಂಬಂತೆ ನಿರ್ಭೀತಿಯಿಂದ ಮಾಸ್ಕ್ ಇಲ್ಲದೇ ಸಾಮಾಜಿಕ ಅಂತರ ಮರೆತು ವರ್ತಿಸುತ್ತಿರುವುದು ಕಂಡುಬಂದಿದೆ. ನಿಯಮ ಉಲ್ಲಂಘಿಸುವ ಅಂಗಡಿಗಳಿಗೆ ಹಾಗೂ ಕಲ್ಯಾಣ ಮಂಟಪಗಳಿಗೆ ದಂಡ ವಿಧಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಗುರಿ ತಲುಪದ ಲಸಿಕೆ : ತರಾಟೆ
ಕೋವಿಡ್ ಲಸಿಕೆ ವಿತರಣೆ ಗುರಿ ಏಕೆ ತಲುಪಿಲ್ಲ? ಜಿಲ್ಲಾಧಿಕಾರಿಗಳೇ ಏನ್ ಮಾಡ್ತಿದ್ದೀರಿ? ನನಗೆ ಕುಂಟು ನೆಪ ಹೇಳಬೇಡಿ. ಎಲ್ಲಾ ತಾಲ್ಲೂಕುಗಳಲ್ಲೂ ಟಾರ್ಗೆಟ್ ರೀಚ್ ಮಾಡುವುದು ನಿಮ್ಮ ಜವಾಬ್ದಾರಿ. ನಾಳೆ ಏನಾದರೂ ಅನಾಹುತವಾದರೆ ಜನ ನಮ್ಮನ್ನು ಕೇಳ್ತಾರೆಯೇ ಹೊರತು, ನಿಮ್ಮನ್ನಲ್ಲ.
ಮುಂದೇನಾದರೂ ಸೋಂಕು ಹೆಚ್ಚಾಗಿ ಅನಾಹುತವಾದರೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರನ್ನು ಗುರಿ ಮಾಡಬೇಕಾಗುತ್ತದೆ. ಜಿಲ್ಲೆಯ ಜನತೆಯ ರಕ್ಷಣೆ ನಮ್ಮ ಜವಾಬ್ದಾರಿ. ಕೋವಿಡ್ ಕೇಸುಗಳ ಸಂಖ್ಯೆ ಸೊನ್ನೆಯಾಗಬೇಕು. ಅಗತ್ಯವಾದರೆ ನಾನು ಜಿಲ್ಲೆಯಲ್ಲಿಯೇ ವಾಸ್ತವ್ಯ ಹೂಡಲು ಸಿದ್ಧನಿದ್ದೇನೆ.
ಇಂದಿನ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪರಿ ಇದು.
ಜಿಲ್ಲೆಯಲ್ಲಿ ನಿಗದಿತ ಗುರಿಯಂತೆ ಕೋವಿಡ್ ಲಸಿಕೆ ವಿತರಣೆಯಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿ ಸೇರಿದಂತೆ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ 4.17 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿಯ ಬದಲಿಗೆ 1.30 ಲಕ್ಷ ಜನರಿಗೆ ಮಾತ್ರ ಲಸಿಕೆ ನೀಡಲಾಗಿದ್ದು, ಕೇವಲ ಶೇ. 31 ರಷ್ಟು ಮಾತ್ರ ಸಾಧನೆಯಾಗಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಕಳೆದ ಮಾರ್ಚ್ 1 ರಿಂದ ಈವರೆಗೆ ಜಿಲ್ಲೆಯಲ್ಲಿ 15639 ಆರೋಗ್ಯ ಕಾರ್ಯಕರ್ತರು, 5384 ಜನ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಿದ್ದು, ಶೇ. 92 ರಷ್ಟು ಸಾಧನೆಯಾಗಿದೆ. 45 ವರ್ಷ ಮೇಲ್ಪಟ್ಟ 4,17,428 ಜನರಿಗೆ ಲಸಿಕೆ ನೀಡುವ ಗುರಿಗೆ ಈವರೆಗೆ 1,30,793 ಜನರಿಗೆ ಲಸಿಕೆ ನೀಡಿದ್ದು ಶೇ. 31 ರಷ್ಟು ಸಾಧನೆಯಾಗಿದೆ ಎಂದು ಹೇಳಿದರು.
ಆರಂಭದ ದಿನಗಳಲ್ಲಿ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದರು. ಆದರೆ ಇದೀಗ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಉನ್ನತ ಅಧಿಕಾರಿಗಳು ಲಸಿಕೆ ಪಡೆದು ಜನರಲ್ಲಿದ್ದ ತಪ್ಪು ಕಲ್ಪನೆಗಳನ್ನು ತೊಡೆದುಹಾಕಿದ್ದಾರೆ. ಹೀಗಾಗಿ ಜನರು ಇದೀಗ ಸ್ವಯಂ ಪ್ರೇರಣೆಯಿಂದ ಲಸಿಕೆ ಪಡೆಯಲು ಮುಂದೆ ಬರುತ್ತಿದ್ದಾರೆ. ಬರುವ ದಿನಗಳಲ್ಲಿ ಲಸಿಕೆ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಲಾಗುವುದು ಎಂದರು.
ಸಂಸದ ಜಿ.ಎಂ. ಸಿದ್ದೇಶ್ವರ, ಮಲೆಬೆನ್ನೂರಿನಲ್ಲಿ ಕೇವಲ 30 ಜನರಿಗೆ ಲಸಿಕೆ ಹಾಕಲಾಗುತ್ತಿದೆ. ಹೀಗಾದರೆ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿ, ಲಸಿಕೆ ಕೊರತೆಯಾದರೆ ಉಸ್ತುವಾರಿ ಸಚಿವರ ಗಮನಕ್ಕೆ ತನ್ನಿ ಎಂದರು. ಡಿಹೆಚ್ಒ ಡಾ. ನಾಗರಾಜ್ ಉತ್ತರಿಸಿ, ಲಸಿಕೆ ಪೂರೈಕೆಗೆ ಅನುಗುಣವಾಗಿ ವಿವಿಧ ಕೇಂದ್ರಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಕೊರತೆಯಾಗದಂತೆ ಸೂಕ್ತ ಕ್ರಮ ವಹಿಸಲಾಗುವುದು ಎಂದರು.
1.44 ಲಕ್ಷ ರೂ. ದಂಡ: ಎಸ್ಪಿ
ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ 798 ಪ್ರಕರಣ ಗಳನ್ನು ದಾಖಲಿಸಿ 1,44,350 ರೂ. ದಂಡ ವಿಧಿಸ ಲಾಗಿದೆ ಎಂದು ಎಸ್ಪಿ ಹನುಮಂತರಾಯ ಹೇಳಿದರು.
ಕೋವಿಡ್ ಕೇರ್ ಸೆಂಟರ್ ಆರಂಭ
ಜಿಲ್ಲಾಸ್ಪತ್ರೆ ಹಿಂಭಾಗದ ತರಬೇತಿ ಕೇಂದ್ರವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದೆ. ಅಗತ್ಯಬಿದ್ದರೆ ಜೆ.ಹೆಚ್. ಪಟೇಲ್ ಬಡಾವಣೆಯಲ್ಲಿರುವ ಹಾಸ್ಟೆಲ್ ಅನ್ನೂ ಕೋವಿಡ್ ಕೇರ್ ಸೆಂಟರ್ಗೆ ಪರಿವರ್ತಿಸಲಾಗುವುದು. ನಂತರ ಪ್ರತಿ ತಾಲ್ಲೂಕಿನಲ್ಲೂ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು.
ಈ ಹಿಂದೆ ಕೊರೊನಾ ನಿಭಾಯಿಸಿದ ಅನುಭವದ ಆಧಾರದ ಮೇಲೆ ಮುಂದೆಯೂ ನಿಯಂತ್ರಣಕ್ಕೆ ಶ್ರಮಿಸುವುದಾಗಿ ಜಿಲ್ಲಾಧಿಕಾರಿ ಹೇಳಿದರು.
ಮದುವೆಗಳನ್ನು ಮುಂದೂಡಲು ಮನವಿ: ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಧ್ಯವಾದಷ್ಟೂ ಮದುವೆಗಳನ್ನು ಮುಂದೂಡುವಂತೆ ಸಚಿವ ಭೈರತಿ ಸಾರ್ವಜನಿಕರಿಗೆ ಮನವಿ ಮಾಡಿದರು. ಮದುವೆಗೆ ಜನರನ್ನು ಕರೆಯುತ್ತೀರಿ, ಜನರೂ ಬರುತ್ತಾರೆ. ಅಲ್ಲಿ ಸೋಂಕು ಹರಡಿದರೆ ನಿಮಗೇ ಇರಿಸು-ಮುರಿಸು ಉಂಟಾಗುತ್ತದೆ ಎಂದರು. ಮನೆಯಿಂದ ಹೊರ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳು ದಂಡ ವಿಧಿಸುತ್ತಾರೆ. ಆದಷ್ಟೂ ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಕೋರಿದರು.
ಬೆಂಗಳೂರಿನಲ್ಲಿ ಆಟೋಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು, ದಾವಣಗೆರೆಯಲ್ಲಿಯೂ ಅದೇ ರೀತಿ ಕ್ರಮ ವಹಿಸುವಂತೆ ಸಚಿವರು ಸೂಚಿಸಿದರು.
ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರುಗಳಾದ ಎಸ್.ಎ. ರವೀಂದ್ರನಾಥ್, ಎಸ್.ವಿ. ರಾಮಚಂದ್ರ, ಜಿ.ಪಂ. ಅಧ್ಯಕ್ಷೆ ಶಾಂತಕುಮಾರಿ, ಪಾಲಿಕೆ ಮೇಯರ್ ಎಸ್.ಟಿ. ವೀರೇಶ್, ಎಸ್ಪಿ ಹನುಮಂತರಾಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ, ಜಿಲ್ಲಾ ಸರ್ಜನ್ ಡಾ. ಜಯಪ್ರಕಾಶ್, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸೇರಿದಂತೆ, ವಿವಿಧ ಇಲಾಖೆಗಳ ಅಧಿಕಾರಿಗಳು, ತಹಸೀಲ್ದಾರರು ಭಾಗವಹಿಸಿದ್ದರು.