ಕೃಷಿ ಸಮ್ಮಾನ್ ಯೋಜನೆಯಡಿ ಉತ್ತಮ ಸಾಧನೆ

ಕೃಷಿ ಸಮ್ಮಾನ್ ಯೋಜನೆಯಡಿ ಉತ್ತಮ ಸಾಧನೆ - Janathavaniಜಿಲ್ಲಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಉಸ್ತುವಾರಿ ಸಚಿವ ಭೈರತಿ ಬಸವರಾಜ್

ದಾವಣಗೆರೆ, ಏ.21-  ಜಿಲ್ಲೆಯಲ್ಲಿ ಕೃಷಿ ಸಮ್ಮಾನ್ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ 219.47 ಕೋಟಿ ರೂ. ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು, ಉತ್ತಮ ಪ್ರಗತಿ ಸಾಧಿಸಲಾಗಿದೆ ಎಂದು  ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಹೇಳಿದರು.

ಬುಧವಾರ ಜಿಲ್ಲಾಡಳಿತ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕೃಷಿ ಸಮ್ಮಾನ್ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಲಾಗಿದೆ. ಜೊತೆಗೆ ಕೋವಿಡ್‍ನಿಂದ ಕಳೆದ ಬಾರಿ ಆದ ಲಾಕ್‍ಡೌನ್‍ನಿಂದ ಹೂ-ಹಣ್ಣು ಬೆಳೆ ಹಾನಿ ಅನುಭವಿಸಿದ ರೈತರಿಗೆ 5.10 ಕೋಟಿ  ರೂ. ಪರಿಹಾರ ವಿತರಿಸಿ ಅನುಕೂಲ ಮಾಡಿಕೊಡಲಾ ಗಿದ್ದು, ಈ ಯೋಜನೆಗಳ ಉಪಯೋಗ ಪಡೆದ ಕೆಲವು ರೈತರೊಂದಿಗೆ ದೂರವಾಣಿ ಮುಖಾಂತರ ತಾವು ಖುದ್ದಾಗಿ ಮಾತನಾಡಿ, ವಿಚಾರಿಸುತ್ತೇನೆ ಎಂದು ಸಭೆಯಲ್ಲಿ ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ಮಾತನಾಡಿ, ಜಿಲ್ಲೆಯಲ್ಲಿ ವಾಡಿಕೆಗಿಂತ  ಹೆಚ್ಚು ಮಳೆಯಾಗಿದೆ. ಬೇಸಿಗೆ ಹಂಗಾಮಿನಲ್ಲಿ  ಶೇ.99 ಬಿತ್ತನೆಯಾಗಿದೆ. ಮುಂಗಾರು ಹಂ ಗಾಮಿನಲ್ಲಿ ವಿವಿಧ ಬೆಳೆಗಳ ಹಾಗೂ ವಿವಿಧ ತಳಿಗಳ 40463 ಕ್ವಿಂಟಾಲ್ ಬಿತ್ತನೆ ಬೀಜಗಳ ಬೇಡಿಕೆ ಇದ್ದು, 20 ರೈತ ಸಂಪರ್ಕ ಕೇಂದ್ರಗಳು ಹಾ ಗೂ 36 ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳ ಮುಖಾಂತರ ರಿಯಾಯಿತಿ ದರದಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

 ಪ್ರಧಾನ್ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರದ ರೂ.164.76 ಕೋಟಿ ಹಾಗೂ ರಾಜ್ಯದ ರೂ. 54.71 ಕೋಟಿ ಸೇರಿ ಒಟ್ಟು 219.47 ಕೋಟಿ ರೂಗಳನ್ನು 1,56,000  ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ ಎಂದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಲಕ್ಷ್ಮೀಕಾಂತ ಬೊಮ್ಮನ್ನಾರ್ ಮಾತನಾಡಿ, ಕಳೆದ ಸಾಲಿನಲ್ಲಿ ಲಾಕ್‍ಡೌನ್ ವೇಳೆ ನಷ್ಟಕ್ಕೊಳಗಾದ ಹೂವು ಮತ್ತು ಹಣ್ಣು ಬೆಳೆಗಾರರಿಗೆ ಒಟ್ಟು ರೂ.5.10 ಕೋಟಿ ಪರಿಹಾರ ವಿತರಿಸಲಾಗಿದೆ. 

ನರೇಗಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಬಾಳೆ, ನುಗ್ಗೆ, ಗುಲಾಬಿ, ತೆಂಗು, ಡ್ರ್ಯಾಗನ್ ಫ್ರೂಟ್, ಪಪ್ಪಾಯ, ಎಲೆಬಳ್ಳಿ  ಬೆಳೆಯಲು ಅನುಕೂಲವಾಗುವಂತೆ ಜಿಲ್ಲೆಗೆ ಒಟ್ಟು 12.40 ಲಕ್ಷ ಮಾನವ ದಿನಗಳನ್ನು ನೀಡಲಾಗಿದ್ದು, ರೈತರಿಗೆ ಒಟ್ಟು ರೂ.32 ಪಾವತಿಸಲಾಗಿದೆ. ಇದರಲ್ಲಿ ಅಡಿಕೆ ಬೆಳೆಯುವ ತಾಲ್ಲೂಕುಗಳಾದ ಚನ್ನಗಿರಿ ಮತ್ತು ಹೊನ್ನಾಳಿಯಲ್ಲಿ 8.90 ಲಕ್ಷ ಮಾನವ ದಿನಗಳನ್ನು ನೀಡಲಾಗಿ ರೂ.24 ಕೋಟಿಯನ್ನು ರೈತರಿಗೆ ಪಾವತಿಸಲಾಗಿದ್ದು, ರಾಜ್ಯದಲ್ಲೇ ನಂ. 1 ಸ್ಥಾನ ನಮ್ಮ ಜಿಲ್ಲೆ ಪಡೆದುಕೊಂಡಿದೆ ಎಂದರು. ಪಶುಪಾಲನಾ ಇಲಾಖೆಯ ಉಪನಿರ್ದೇಶಕರು, ಬೇಸಿಗೆಗೆ ಮೇವಿನ ಕೊರತೆ ಇಲ್ಲ. ಇನ್ನೂ 35 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು ರೈತರಲ್ಲಿದೆ. ಔಷಧಿ, ಲಸಿಕೆ ಕೊರತೆಯೂ ಇಲ್ಲ ಎಂದರು.

ಜಿ.ಪಂ ಉಪಕಾರ್ಯದರ್ಶಿ ಆನಂದ್, ನರೇಗಾ ಯೋಜನೆಯಡಿ ಜಿಲ್ಲೆಗೆ ಕಳೆದ ಸಾಲಿನಲ್ಲಿ 40 ಲಕ್ಷ ಮಾನವ ದಿನಗಳ ಗುರಿ ನೀಡಲಾಗಿದ್ದು, 34.10 ಲಕ್ಷ ಮಾನವ ದಿನಗಳನ್ನು ಪೂರೈಸಿ ಶೇ.85 ಪ್ರಗತಿ ಸಾಧಿಸಲಾಗಿದೆ ಎಂದರು.

ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಅಭಿಯಂತರ ನಾಗಪ್ಪ,  ಜಿಲ್ಲೆಯಲ್ಲಿ ಪ್ರಸ್ತುತ ಎಲ್ಲೂ ಕುಡಿಯುವ ನೀರಿನ ಕೊರತೆ ಇಲ್ಲ. ಆದರೂ ಸಮಸ್ಯೆ ಬರಬಹುದಾದ 43 ಗ್ರಾಮಗಳನ್ನು ಗುರುತಿಸಿ 47 ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಸುವ ಬಗ್ಗೆ ಪ್ಲಾನ್ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಸಭೆಯಲ್ಲಿ ಶಾಸಕರುಗಳಾದ ಎಸ್.ಎ. ರವೀಂದ್ರನಾಥ್, ಎಸ್.ವಿ. ರಾಮಚಂದ್ರಪ್ಪ, ಜಿ.ಪಂ. ಅಧ್ಯಕ್ಷೆ ಶಾಂತಕುಮಾರಿ,  ಪಾಲಿಕೆ ಮೇಯರ್ ಎಸ್.ಟಿ. ವೀರೇಶ್, ಎಸ್ಪಿ  ಹನುಮಂತರಾಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ  ಡಾ. ಮೀನಾಕ್ಷಿ, ಜಿಲ್ಲಾಸ್ಪತ್ರೆ ಜಿಲ್ಲಾ ಸರ್ಜನ್ ಡಾ. ಜಯಪ್ರಕಾಶ್, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್,  ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು,  ತಹಶೀಲ್ದಾರರು ಭಾಗವಹಿಸಿದ್ದರು.

error: Content is protected !!