ಅಗತ್ಯವಿರುವವರಿಗೆ ಮಾತ್ರ ಕೋವಿಡ್ ಪರೀಕ್ಷೆ ನಡೆಸಿ : ಜಿಲ್ಲಾಧಿಕಾರಿ

ಅಗತ್ಯವಿರುವವರಿಗೆ ಮಾತ್ರ ಕೋವಿಡ್ ಪರೀಕ್ಷೆ ನಡೆಸಿ : ಜಿಲ್ಲಾಧಿಕಾರಿ - Janathavaniದಾವಣಗೆರೆ, ಏ. 29- ಕೋವಿಡ್ ಪರೀಕ್ಷೆ ಮಾಡಲು ಇರುವ 36 ತಂಡಗಳನ್ನು ಸಮರ್ಪಕವಾಗಿ ಬಳಸಿಕೊಂಡು ಎಸ್‍ಎಆರ್‍ಐ (ಸಾರಿ) ಮತ್ತು ಐಎಲ್‍ಐ ಪ್ರಕರಣಗಳು ಹಾಗೂ ಸೋಂಕಿತರ ಮನೆಯವರಿಗೆ ಮಾತ್ರ ಪರೀಕ್ಷೆ ಮಾಡಬೇಕು. ಉಳಿದಂತೆ ಬೇರೆಯವರಿಗೆ ಅನಗತ್ಯ ಪರೀಕ್ಷೆ ಮಾಡಿದ್ದು ಗಮನಕ್ಕೆ ಬಂದರೆ ಅದಕ್ಕೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ನೇರ ಹೊಣೆಯಾಗಲಿದ್ದು, ಅವರಿಂದ ಹಣ ವಸೂಲಿ ಮಾಡಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಸಿದರು. 

ಜಿಲ್ಲೆಗಳಲ್ಲಿ ಕೋವಿಡ್ ಪರಿಸ್ಥಿತಿ ಹಾಗೂ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಜಿಲ್ಲಾಡಳಿತದ ಎಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. 

ಸೋಂಕಿತರ ಮನೆಗಳಲ್ಲಿ ಉತ್ತಮ ವ್ಯವಸ್ಥೆ ಇದ್ದರೆ ಮನೆಗಳಲ್ಲೇ ಕ್ವಾರಂಟೈನ್ ಮಾಡಿ. ಉಳಿದಂತೆ ಹೋಂ ಐಸೋಲೇಶನ್ ಮಾಡಲು ಸೂಕ್ತ ವಾತಾವರಣ
ಇಲ್ಲದ ಪಕ್ಷದಲ್ಲಿ ಅಂತಹವರನ್ನು ಕೋವಿಡ್ ಸೆಂಟರ್‍ಗೆ ಕರೆ ತಂದು ಚಿಕಿತ್ಸೆ ನೀಡಬೇಕಾಗಿರುವುದು ಆರೋಗ್ಯ ಇಲಾಖೆ ಜವಾಬ್ದಾರಿ ಎಂದರು.

ಗ್ರಾಮೀಣ ಭಾಗಗಳಲ್ಲಿ ಹಾಗೂ ನಗರವ್ಯಾಪ್ತಿಯ ಎಲ್ಲಾ ವಾರ್ಡ್‍ಗಳಲ್ಲಿ ಹೊರ ಜಿಲ್ಲೆಗಳಿಂದ ಬಂದವರ ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಿಂದ ಬಂದವರ ಕುರಿತು ಆಯಾ ಗ್ರಾಮದ ಪಿಡಿಒ ಗಳು, ಆಶಾ ಕಾರ್ಯಕರ್ತೆಯರು ಸಂಬಂಧಪಟ್ಟ ಸಿಬ್ಬಂದಿಗಳು  ಅವರ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಸಂಗ್ರಹಿಸಬೇಕು ಮತ್ತು ಅವರ
ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು. 

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್‍ನಾಯಕ್, ಎಡಿಸಿ ಪೂಜಾರ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್, ಜಿ.ಪಂ ಉಪಕಾರ್ಯದರ್ಶಿ ಆನಂದ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಎಸ್‍ಎಲ್‍ಓ ರೇಷ್ಮಾ ಹಾನಗಲ್, ಡಿಹೆಚ್‍ಒ ಡಾ.ನಾಗರಾಜ್, ಆರ್‍ಸಿಹೆಚ್‍ಓ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಡಾ.ಮೀನಾಕ್ಷಿ, ಡಾ.ರೇಣುಕಾರಾಧ್ಯ, ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

error: Content is protected !!