ಪಿಯು ಪರೀಕ್ಷೆ ರದ್ದು, ಫೇಲ್ ಇಲ್ಲದ ಎಸ್ಸೆಸ್ಸೆಲ್ಸಿ ಪರೀಕ್ಷೆ

ಬೆಂಗಳೂರು, ಜೂ. 4 – ಕೋವಿಡ್ ಮುನ್ನೆಚ್ಚರಿಕಾ ಕ್ರಮ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ ಮೇರೆಗೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವ ಸರ್ಕಾರ, ಎಸ್‍ಎಸ್‍ಎ ಲ್‍ಸಿ ಪರೀಕ್ಷೆ ನಡೆಸಲು ನಿರ್ಧರಿಸಿದ್ದರೂ, ಯಾರನ್ನೂ ಅನುತ್ತೀರ್ಣಗೊಳಿಸದ ತೀರ್ಮಾನಕ್ಕೆ ಸರ್ಕಾರ ಬಂದಿದೆ. 

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್, ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ, ಗ್ರೇಡಿಂಗ್ ನೀಡಲಾಗುವುದು ಎಂದರು. 

ದ್ವಿತೀಯ ಪರೀಕ್ಷೆ ನಡೆಸಲು ಹೋದರೆ ಕನಿಷ್ಟ 12 ದಿನ ಬೇಕಾಗುತ್ತದೆ. ಹೀಗಾಗಿ ವಿದ್ಯಾರ್ಥಿಗಳು, ಪೋಷಕರು ಬೇಸರವಾಗುವುದು ಬೇಡ. ಬದಲಾಗಿ ನೀಟ್ ಮತ್ತು ಸಿಇಟಿ ಪರೀಕ್ಷೆಗಳತ್ತ ಹೆಚ್ಚು ಗಮನ ಹರಿಸಿ. ಇಲಾಖೆಯ ಈ ನಿರ್ಧಾರವನ್ನು ಸ್ವಾಗತಿಸದ ವಿದ್ಯಾರ್ಥಿ ಗಳಿಗೆ, ಕೋವಿಡ್-19 ಸೋಂಕು ಕಡಿಮೆ ಯಾದ ನಂತರ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುವುದು ಎಂದವರು ಹೇಳಿದ್ದಾರೆ.

ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ಕೊಡುವುದನ್ನು ಬಿಟ್ಟರೆ ನಮ್ಮ ಬಳಿ ಬೇರೆ ಆಯ್ಕೆಯೇ ಇಲ್ಲ ಎಂದು ತಿಳಿಸಿದರು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಗಳಿಗೆ ಈ ಬಾರಿ ಎರಡು ಪರೀಕ್ಷೆ ನಡೆಸಲಾಗುವುದು. ವಿಜ್ಞಾನ, ಗಣಿತ ಮತ್ತು ಸಮಾಜವಿಜ್ಞಾನದ ಒಂದು ಪತ್ರಿಕೆ, ಭಾಷೆಗಳಿರುವ ಮತ್ತೊಂದು ಪ್ರಶ್ನೆಪತ್ರಿಕೆ ಇರುತ್ತದೆ. ತಲಾ 120 ಅಂಕಗಳಿದ್ದು ಮೂರು ಗಂಟೆಗಳ ಅವಧಿ ಪರೀಕ್ಷೆ ಇದಾಗಿರುತ್ತದೆ. ಪರೀಕ್ಷೆಗಳನ್ನು ಎರಡು ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದರು. 

ಕಳೆದ ಬಾರಿ 9ನೇ ತರಗತಿಯ ಪರೀಕ್ಷೆಯೂ ನಡೆದಿಲ್ಲ. ಅದರ ಆಧಾರದ ಮೇಲೆ ಅಂಕಗಳನ್ನು ನೀಡಲು ಸಾಧ್ಯವಾಗದ ಕಾರಣ, ಎಸ್ಸೆಸ್ಸೆಲ್ಸಿಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದೂ ಹೇಳಿದರು.ಪರೀಕ್ಷೆಯಲ್ಲಿ ಬಹು ಆಯ್ಕೆಯ ಪ್ರಶ್ನೆಗಳಿ ದ್ದು, ನೇರ ಮತ್ತು ಸರಳವಾಗಿರುತ್ತವೆ. ಪ್ರತಿ ವಿಷಯಕ್ಕೆ 40 ಅಂಕಗಳಿರುತ್ತವೆ. ಅಂದರೆ, ಒಂದು ಪತ್ರಿಕೆ 120 ಅಂಕಗಳಿಗೆ ಇದ್ದು, ಮೂರು ಗಂಟೆ ಸಮಯ ನೀಡಲಾಗುತ್ತದೆ ಎಂದರು.

ವಿದ್ಯಾರ್ಥಿಗಳು ಪಿಯುಸಿಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗ ಸೇರಿದಂತೆ ಯಾವುದೇ ಕೋರ್ಸ್ ತೆಗೆದುಕೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಪರೀಕ್ಷೆ ನಡೆಸಲಾಗುತ್ತಿದೆ. ಯಾರನ್ನೇ ಆಗಲಿ ಅನುತ್ತೀರ್ಣಗೊಳಿಸುವ ಉದ್ದೇಶವಿಲ್ಲ. ಎ, ಎ+ ಗ್ರೇಡ್ ನೀಡಲಾಗುತ್ತದೆ ಎಂದರು. 

ಕೋವಿಡ್ ಕಾರಣದಿಂದ ಗೈರಾಗಿದ್ದರೆ ಅಂತಹ ಮಕ್ಕಳಿಗೆ ಮಾತ್ರ ಪೂರಕ ಪರೀಕ್ಷೆ ನಡೆಸಲಾಗುತ್ತದೆ ಎಂದೂ ತಿಳಿಸಿದರು.

ಜುಲೈ 3ನೇ ವಾರದಲ್ಲಿ ಎಸ್‍ಎಸ್‍ಎ ಲ್‍ಸಿ ಪರೀಕ್ಷೆ ನಡೆಸಲು ತೀರ್ಮಾನಿಸ ಲಾಗಿದೆ. 20 ದಿನ ಮುಂಚಿತವಾಗಿ ಪರೀಕ್ಷೆ ದಿನಾಂಕ ಘೋಷಣೆ ಮಾಡಲಾಗುವುದು.  6 ಸಾವಿರ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು. ಈ ಬಾರಿ ದುಪ್ಪಟ್ಟು ಕೇಂದ್ರಗಳಲ್ಲಿ ಪರೀಕ್ಷೆ ಮಾಡುತ್ತೇವೆ. ಒಂದು ಕೊಠಡಿಯಲ್ಲಿ 10-12 ವಿದ್ಯಾರ್ಥಿಗಳನ್ನು ಕೂರಿಸಿ ಪರೀಕ್ಷೆ ನಡೆಸುತ್ತೇವೆ. 

ಪರೀಕ್ಷೆಯಲ್ಲಿ ಯಾರನ್ನೂ ಅನುತ್ತೀರ್ಣ ಮಾಡುವುದಿಲ್ಲ. ಮೊದಲೇ ಮಾದರಿ ಪ್ರಶ್ನೆ ಪತ್ರಿಕೆಯನ್ನು ನೀಡುತ್ತೇವೆ. ಅದನ್ನು ನೋಡಿಕೊಂಡು ಸಿದ್ಧತೆ ಮಾಡಿಕೊಳ್ಳಿ. ಒತ್ತಡವಾಗಲಿ, ಆತಂಕವಾಗಲೀ ಬೇಡ. ಅತ್ಯಂತ ಸರಳ ಹಾಗೂ ನೇರ ಪ್ರಶ್ನೆಗಳನ್ನಷ್ಟೇ ಕೇಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಒಂದು ಡೆಸ್ಕ್‍ಗೆ ಒಬ್ಬ ವಿದ್ಯಾರ್ಥಿಯನ್ನು ಕೂರಿಸುತ್ತೇವೆ. ಪರೀಕ್ಷೆ ಬರೆಯುವ ಎಲ್ಲರಿಗೂ ಎನ್95 ಮಾಸ್ಕ್ ನೀಡುತ್ತೇವೆ. ಮಾದರಿ ಪ್ರಶ್ನೆಪತ್ರಿಕೆ ಶಾಲೆಗಳಿಗೆ ಕಳಿಸಲು ವ್ಯವಸ್ಥೆ ಆಗಿದೆ. ವೆಬ್‍ಸೈಟ್‍ನಲ್ಲೂ ಮಾದರಿ ಪ್ರಶ್ನೆಪತ್ರಿಕೆ ಹಾಕಲಾಗುವುದು. ಪರೀಕ್ಷೆಯಲ್ಲಿ ಯಾರನ್ನೂ ಫೇಲ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುರಕ್ಷತಾ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಿಗೆ ಬರುವ ಮೇಲ್ವಿಚಾರಕರು ಎರಡು ಡೋಸ್ ಲಸಿಕೆ ಪಡೆದಿರುವುದನ್ನು ಕಡ್ಡಾಯ ಮಾಡಲಾಗಿದೆ. ಇದಕ್ಕಾಗಿ ನಿಯಮ ರೂಪಿಸಿದ್ದೇವೆಂದು ಹೇಳಿದರು.

error: Content is protected !!