ಎಸ್ಸಿ ಸಚಿವರ ಪರಿಚಯಕ್ಕೆ ಕಾಂಗ್ರೆಸ್ ಅಡ್ಡಿ

ಜನಾಶೀರ್ವಾದ ಯಾತ್ರೆಯಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ದಾವಣಗೆರೆ, ಆ. 18 – ಹಿಂದುಳಿದ ವರ್ಗದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪರಿಶಿಷ್ಟ ಜಾತಿ ಹಾಗೂ ಪಂಗಡದ 20 ಜನರನ್ನು ಸಚಿವರನ್ನಾಗಿ ಮಾಡಿದರೆ, ಅವರನ್ನು ಸಂಸತ್ತಿಗೆ ಪರಿಚಯಿಸಲು ಕಾಂಗ್ರೆಸ್ ಅಡ್ಡಿಪಡಿಸಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ. ನಾರಾಯಣಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.

ನಗರದ ಶಾಮನೂರು ಶಿವಶಂಕರಪ್ಬ ಕಲ್ಯಾಣ ಮಂಟಪದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಜನಾಶೀರ್ವಾದ ಯಾತ್ರೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು,  ಬಿಜೆಪಿಯನ್ನು ಬ್ರಾಹ್ಮಣರ ಪಕ್ಷ ಹಾಗೂ ಗರ್ಭಗುಡಿ ರಾಜಕೀಯ ಮಾಡುವ ಪಕ್ಷ ಎಂದು ಕಾಂಗ್ರೆಸ್ ಲೇವಡಿ ಮಾಡುತ್ತಿತ್ತು. ಆದರೆ, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ 20 ಜನರನ್ನು ಬಿಜೆಪಿ ಕೇಂದ್ರ ಸಚಿವರನ್ನಾಗಿ ಮಾಡಿದೆ ಎಂದು ಹೇಳಿದರು.

ಚುನಾವಣೆಗೆ ಮುಂಚೆಯೇ ಹಿಂದುಳಿದ ವರ್ಗಕ್ಕೆ ಸೇರಿದ ಮೋದಿ ಅವರನ್ನು ಪ್ರಧಾನ ಮಂತ್ರಿ ಸ್ಥಾನದ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು. ಬಿಜೆಪಿ ಮೂರನೇ ಎರಡರಷ್ಟು ಬಹುಮತದಿಂದ ಗೆಲುವು ಸಾಧಿಸಿದೆ. ಈ ಬಾರಿ ಸಂಪುಟದಲ್ಲಿ 23 ಇತರೆ ಹಿಂದುಳಿದ ವರ್ಗಕ್ಕೆ ಸೇರಿದ ಸಚಿವರಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೇ ಹಿಂದುಳಿದ ವರ್ಗಕ್ಕೆ ಸೇರಿದವರು ಎಂದರು.

ಪರಿಶಿಷ್ಟ ಜಾತಿ – ಪಂಗಡ ಹಾಗೂ ಹಿಂದುಳಿದ ವರ್ಗಗಳವರ ಸಚಿವರನ್ನು ಸಂಸತ್ತಿಗೆ ಪರಿಚಯಿಸಲು ಕಾಂಗ್ರೆಸ್ ಅವಕಾಶ ಕೊಡಲಿಲ್ಲ. ಹೀಗಾಗಿ ಸಚಿವರು ನೇರವಾಗಿ ಜನರ ಬಳಿ ಹೋಗಿ ಜನಾಶೀರ್ವಾದ ಪಡೆಯಬೇಕೆಂದು ಪಕ್ಷ ನಿರ್ಧರಿಸಿದೆ ಎಂದವರು ಹೇಳಿದರು.

ಸಂಸದೀಯ ಪ್ರಜಾಪ್ರಭುತ್ವದ ನಡಾವಳಿಗಳನ್ನು ಉಲ್ಲಂಘಿಸಿದ ಪ್ರತಿಪಕ್ಷಗಳ ಸದಸ್ಯರು, ಸಭಾಧ್ಯಕ್ಷರ ಮುಖಕ್ಕೆ ಪುಸ್ತಕಗಳನ್ನು ಎಸೆದಿದ್ದಾರೆ. ಅಧಿಕಾರಿಗಳ ಟೇಬಲ್ ಮೇಲೆ ಹತ್ತಿ ಕುಣಿದಿದ್ದಾರೆ ಎಂದವರು ತರಾಟೆಗೆ ತೆಗದೆುಕೊಡಂರು. ಕೊರೊನಾ ಲಸಿಕೆಗೆ ಮೊದಲಿನಿಂದಲೂ ಕಾಂಗ್ರೆಸ್ ಹಾದಿ ಬೀದಿಯಲ್ಲಿ ಅಪ ಪ್ರಚಾರ ಮಾಡುತ್ತಿದೆ. ಆದರೆ, ನಾವು ಅದಕ್ಕೆ ಕಿವಿಗೊಡದೆ ಕೆಲಸ ಮಾಡಿದ್ದೇವೆ. ಆಸ್ಪತ್ರೆಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದ್ದೇವೆ. ಕಾಂಗ್ರೆಸ್ – ಜೆಡಿಎಸ್‌ಗಳಿಗೆ ಕೆಲಸ ಇಲ್ಲದೇ ಟೀಕಿಸುತ್ತಿವೆ ಎಂದವರು ಲೇವಡಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌, 2023ರ ವಿಧಾನಸಭಾ ಚುನಾವಣೆಗೆ ಪಕ್ಷ ಇಂದಿನಿಂದಲೇ ಸಿದ್ಧತೆ ಆರಂಭಿಸಬೇಕು. ಬೂತ್‌ನಿಂದ ಹಿಡಿದು ತಾಲ್ಲೂಕಿನವರೆಗೆ ಸಂಘಟನೆ ಆಗಬೇಕು ಎಂದು ಹೇಳಿದರು.

ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಮುಂದಿನ ತಾಲ್ಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಯಾರಿಗೇ ಟಿಕೆಟ್ ಕೊಟ್ಟರೂ ಪಕ್ಷಕ್ಕಾಗಿ ದುಡಿಯಬೇಕು. ಪಕ್ಷ ಗೆದ್ದರೆ ಅಭಿವೃದ್ಧಿ ಕೆಲಸಗಳಾಗುತ್ತವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಂ.ಎಲ್.ಸಿ. ವೈ.ಎ. ನಾರಾಯಣ ಸ್ವಾಮಿ, ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಪ್ರೊ. ಲಿಂಗಣ್ಣ, ಎಂ.ಪಿ. ರೇಣುಕಾಚಾರ್ಯ, ಎಸ್.ಎ. ರವೀಂದ್ರನಾಥ್, ಮೇಯರ್ ಎಸ್.ಟಿ. ವೀರೇಶ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ. ನಂದೀಶ್, ರಾಜ್ಯ ಕಾರ್ಯದರ್ಶಿ ಕೆ.ಎಸ್. ನವೀನ್, ಮಾಜಿ ಶಾಸಕ ಬಸವರಾಜ ನಾಯ್ಕ, ರಾಜ್ಯ ಕಾರ್ಯದರ್ಶಿ ಸುಧಾ ಜಯರುದ್ರೇಶ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್. ಶಿವಯೋಗಿಸ್ವಾಮಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಬಯಲು ಸೀಮೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಣಬೇರು ಜೀವನಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಸಹನ ಮಂಜುನಾಥ್ ಪ್ರಾರ್ಥಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಹನಗವಾಡಿ ವೀರೇಶ್ ಸ್ವಾಗತಿಸಿದರು. ಬಿ.ಎಸ್. ಜಗದೀಶ್ ನಿರೂಪಿಸಿದರು.

error: Content is protected !!