ಕಾಯ್ದೆಗಳ ತಿದ್ದುಪಡಿ : ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ದಾವಣಗೆರೆ, ಸೆ.23- ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ, ವಿದ್ಯುತ್ ಖಾಸಗೀಕರಣ ವಿರೋಧಿಸಿ  ನಾಡಿದ್ದು ದಿನಾಂಕ 25ರ ಶುಕ್ರವಾರ ಜಿಲ್ಲೆಯ ಎಲ್ಲಾ ರೈತ ಹಾಗೂ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ ನಡೆಸಲು ತೀರ್ಮಾನಿಸಿವೆ.

ಈ ಸಂಬಂಧ ಇಂದು ನಗರದ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಗರದ ವಿವಿಧ ಸಂಘಟನೆಗಳು ಸೇರಿ ಭಾರತ ಬಂದ್ ವಿಚಾರವಾಗಿ ಪೂರ್ವಭಾವಿ ಸಭೆ ನಡೆಸಿ, ಭಾರತ್ ಬಂದ್ ಮಾಡದೇ ರಾಷ್ಟ್ರೀಯ ಹೆದ್ದಾರಿ ತಡೆ ಚಳುವಳಿ ಮುಖೇನ ಸರ್ಕಾರಗಳ ಗಮನ ಸೆಳೆಯಲು ನಿರ್ಧರಿಸಲಾಯಿತು.

ಕಾರ್ಮಿಕ ಮುಖಂಡ ಎಚ್.ಕೆ. ರಾಮಚಂದ್ರಪ್ಪ ಮಾತನಾಡಿ, ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ, ವಿದ್ಯುತ್ ಖಾಸಗೀಕರಣ ವಿರೋಧಿಸಿ ನಾಡಿದ್ದು ದಿನಾಂಕ 25ರಂದು ದೇಶ ಮತ್ತು ರಾಜ್ಯದಲ್ಲಿ ಸರ್ಕಾರಗಳ ಕ್ರಮ ಖಂಡಿಸಿ ರೈತ ಹಾಗೂ ಕಾರ್ಮಿಕರಿಂದ ಚಳುವಳಿ ನಡೆಯಲಿದ್ದು, ದಾವಣಗೆರೆಯಲ್ಲೂ ಸಹ ಚಳು ವಳಿ ಬೆಂಬಲಿಸಿ ಒಟ್ಟು 10 ರೈತ ಹಾಗೂ ಕಾರ್ಮಿಕ ಸಂಘಟನೆಗಳು ಒಗ್ಗೂಡಿ ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಬಾಡ್ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ ಮುಖಾಂತರ ಬಿಜೆಪಿ ಸರ್ಕಾರಗಳ ಗಮನ ಸೆಳೆದು ರೈತ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೈ ಬಿಡುವಂತೆ ಎಚ್ಚರಿಕೆ ನೀಡಲಾಗುವುದು ಎಂದು ತಿಳಿಸಿದರು.

ಸಂಸತ್ತು ಮತ್ತು ಶಾಸನ ಸಭೆಯಲ್ಲಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಕೇವಲ ಸುಗ್ರೀವಾಜೆ ಜಾರಿ ಮುಖೇನ ಕಾಯ್ದೆಗಳ ತಿದ್ದುಪಡಿಗೆ ಹೊರಟಿರುವುದು ಸರಿಯಲ್ಲ. ಇದು ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಹಾಕುವ ಕಾನೂನಾಗಿದೆ. ರೈತರ ಸಮಸ್ಯೆ ನೀಗಿಸಲು ಹಾಗೂ ಕಾರ್ಮಿಕರಿಗಾಗುತ್ತಿರುವ ಅನ್ಯಾಯ ತಡೆಗಟ್ಟುವ ಸಲುವಾಗಿ ಈ ಹೋರಾಟ ಎಂದು ಹೇಳಿದರು.

ರೈತ ಮುಖಂಡ ಹುಚ್ಚವ್ವನಹಳ್ಳಿ ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಶಿವಗಂಗಾ ಬಸವರಾಜ್ ಮಾತನಾಡಿದರು.

ಸಭೆಯಲ್ಲಿ ಪಾಲಿಕೆ ಮಾಜಿ ಸದಸ್ಯರಾದ ಕೆ.ಸಿ. ಲಿಂಗರಾಜ್, ಆವರಗೆರೆ ಉಮೇಶ್, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಗೋವಿಂದ್ ಹಾಲೇಕಲ್ ಸೇರಿದಂತೆ ರೈತ ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಇದ್ದರು.

error: Content is protected !!