ಪರಿಸರವನ್ನು ಉಳಿಸಿ, ಬೆಳೆಸುವ ಹೊಣೆಗಾರಿಕೆ ವಿದ್ಯಾರ್ಥಿಗಳ ಮೇಲಿದೆ : ಶಾಸಕ ಎಸ್ಸೆಸ್‌

ಪರಿಸರವನ್ನು ಉಳಿಸಿ, ಬೆಳೆಸುವ ಹೊಣೆಗಾರಿಕೆ ವಿದ್ಯಾರ್ಥಿಗಳ ಮೇಲಿದೆ : ಶಾಸಕ ಎಸ್ಸೆಸ್‌

ದಾವಣಗೆರೆ, ಜ.28- ದೇವರು ನೀಡಿರುವ ಪರಿಸರವನ್ನು ಉಳಿಸಿ, ಬೆಳೆಸಬೇಕಾದ ಹೊಣೆಗಾರಿಕೆ ಇಂದಿನ ವಿದ್ಯಾರ್ಥಿ ಸಮೂಹದ ಮೇಲಿದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.

ದಾವಣಗೆರೆ ತೋಟಗಾರಿಕೆ ಇಲಾಖೆ ವತಿಯಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ನಗರದ ದುರ್ಗಾಂಬಿಕಾ ಪ್ರೌಢಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ “ವಿದ್ಯಾರ್ಥಿಗಳಿಗೆ ತೋಟಗಾರಿಕೆ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

  ಉತ್ತಮ ಪರಿಸರವನ್ನು ಹೊಂದುವುದು ಎಲ್ಲರ ಕರ್ತವ್ಯ, ತರಕಾರಿ ತೋಟ ನಿರ್ಮಾಣ ಕುರಿತು ಇಲಾಖೆ  ಈ ರೀತಿಯ ಕಾರ್ಯಕ್ರಮ ಹಮ್ಮಿಕೊಂಡಿರುವುದು ಒಳ್ಳೆಯ ನಿರ್ಧಾರ. ಪರಿಸರ ರಕ್ಷಣೆಯಲ್ಲಿ ವಿದ್ಯಾರ್ಥಿ ಪಾತ್ರ ಬಹು ಮುಖ್ಯವಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿ ಡಾ. ಬಸವನಗೌಡ ಮಾತನಾಡಿ, ಶಾಲಾ ಆವರಣಗಳಲ್ಲಿ ತರಕಾರಿ ಕೈ ತೋಟಗಳನ್ನು ನಿರ್ಮಾಣ ಮಾಡುವ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ, ಅಲ್ಲಿ ಬೆಳೆಯುವ ಸಾವಯವ ತರಕಾರಿಗಳನ್ನು ಮಧ್ಯಾಹ್ನದ ಬಿಸಿಯೂಟಕ್ಕೆ ಬಳಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

 ತಾಲ್ಲೂಕು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ರೇಷ್ಮಾ ಪರ್ವಿನ್ ಮಾತನಾಡಿ, ಆಹಾರ ತಜ್ಞರ ಪ್ರಕಾರ ಪ್ರತಿಯೊಬ್ಬರೂ ತಮ್ಮ ವಯಸ್ಸಿಗೆ ಅನುಗುಣವಾಗಿ ಹಣ್ಣು ಮತ್ತು ತರಕಾರಿಗಳನ್ನು ಸೇವಿಸುವುದು ಅಗತ್ಯ, ವಿಷಮುಕ್ತ ಆಹಾರ ಸೇವನೆ ದೃಷ್ಟಿಯಿಂದ ರಾಜ್ಯ ಸರ್ಕಾರ ಈ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯ ಚಮನ್ ಸಾಬ್, ಮಾಜಿ ಸದಸ್ಯರಾದ ದಿನೇಶ್ ಕೆ. ಶೆಟ್ಟಿ, ಚಂದ್ರಶೇಖರ್, ಗೌಡ್ರ ಚನ್ನಬಸಪ್ಪ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

error: Content is protected !!