ದಾವಣಗೆರೆ, ಜ. 28- ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನವಾಗಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆಯೋ, ಅಷ್ಟೇ ಸಂಭ್ರಮದಿಂದ ದೇಶದಲ್ಲಿ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.
ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕೇಂದ್ರ ವ್ಯಾಪ್ತಿಯ ಮಾಯಕೊಂಡ ಗ್ರಾಮದ ಕರ್ನಾಟಕ ಪಬ್ಲಿಕ್ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಆಗಸ್ಟ್ 15, 1947 ಬ್ರಿಟಿಷರಿಂದ ತಾತ್ವಿಕವಾಗಿ ಸ್ವಾತಂತ್ರ್ಯವನ್ನು ಪಡೆದುಕೊಂಡ ದಿನವಾದರೆ, ಜನವರಿ 26, 1950 ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಿದ ದಿನವಾಗಿದೆ. ರಾಜ ಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ತಿತ್ವವನ್ನು ಸ್ಥಾಪಿಸಿದ ದಿನವಾಗಿದೆ. ಈ ಕಾರಣಕ್ಕಾಗಿ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಉಪತಹಸೀಲ್ದಾರ್ ಹಾಲೇಶಪ್ಪ, ಕಂದಾಯ ಅಧಿಕಾರಿ ಶ್ರೀನಿವಾಸ್, ಪಿಡಿಒ ಶ್ರೀನಿವಾಸ್, ಸಿಪಿಐ ನಾಗರಾಜ್, ಹಿರೇಗೌಡ್ರು ಸೇರಿದಂತೆ
ಇನ್ನಿತರರಿದ್ದರು.