ರಾಜಕೀಯ ದ್ವೇಷದಿಂದ ಸಿಬಿಐ ದುರ್ಬಳಕೆ

ಜಗಳೂರಿನಲ್ಲಿ ಕಿಡಿ ಕಾರಿದ ಮಾಜಿ ಶಾಸಕ ಹೆಚ್.ಪಿ.ರಾಜೇಶ್ 

ಜಗಳೂರು, ಅ. 6- ಉಪ ಚುನಾವಣೆ ವೇಳೆ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದುರ್ಬಳಕೆ ಮಾಡಿಕೊಂಡು ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಶಾಸಕ ಹೆಚ್.ಪಿ. ರಾಜೇಶ್ ಆರೋಪಿಸಿದರು.

ಪಟ್ಟಣದ ಮಹಾತ್ಮ ಗಾಂಧಿ ವೃತ್ತದ ಬಳಿ ಇಂದು ನಡೆದ ಕಾಂಗ್ರೆಸ್ ನೇತೃತ್ವದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿ ಪಕ್ಷ ಕೊರೊನಾ ನಿಯಂತ್ರಣದ ಹೆಸರಿನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿರುವುದು ಸಿಬಿಐ ಕಣ್ಣಿಗೆ ಗೋಚರವಾಗುವುದಿಲ್ಲವೇ? ತನ್ನ ವೈಫಲ್ಯ ಮುಚ್ಚಿಕೊಳ್ಳಲು ಸಿಬಿಐ ಅನ್ನು ಬಳಸಿಕೊಂಡು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮಣಿಸುವ ಹುನ್ನಾರ ನಡೆಯುತ್ತಿದೆ ಎಂದರು.

ದೇಶದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ದಲಿತ ಹಿಂದುಳಿದ ವರ್ಗಗಳ ಹಾಗೂ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ, ಅತ್ಯಾಚಾರಗಳು ನಡೆಯುತ್ತಿದ್ದು, ಸೂಕ್ತ ಕಾನೂನು ಭದ್ರತೆಯಿಲ್ಲದೆ ಕೋಮುವಾದ ತಾಂಡವವಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಕಲ್ಲೇಶ್ ರಾಜ್ ಪಟೇಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹ್ಮದ್, ಮುಖಂಡರಾದ ಶಂಭುಲಿಂಗಪ್ಪ ಶೇಖರಪ್ಪ, ತಿಪ್ಪೇಸ್ವಾಮಿ ಗೌಡ, ಪ.ಪಂ. ಸದಸ್ಯ ಶಕೀಲ್ ಅಹ್ಮದ್, ಯುವ ಕಾಂಗ್ರೆಸ್ ಅಧ್ಯಕ್ಷ ಅಜಾಮುಲ್ಲಾ, ಶೇಖರಪ್ಪ, ಅಹ್ಮದ್ ಅಲಿ, ರಮೇಶ್ ಯಾದವ್, ವೆಂಕಟೇಶ್, ಮಹಿಳಾ ಕಾಂಗ್ರೆಸ್‌ನ ನಾಗರತ್ನಮ್ಮ ಕೆಂಚಪ್ಪ ಮತ್ತಿತರರು ಭಾಗವಹಿಸಿದ್ದರು.

error: Content is protected !!