ದಾವಣಗೆರೆ, ಮೇ 29 – ರಾಜ್ಯ ಸರ್ಕಾರದ ನೂತನ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜಾರಿಗೆ ಫಲಾನುಭವಿ ಗಳ ಆಯ್ಕೆ ಮಾಡುವುದಕ್ಕೆ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಳ್ಳುವುದಕ್ಕೆ ಸಂಘಟನೆ ವಿರೋಧ ವ್ಯಕ್ತಪಡಿಸುತ್ತದೆ ಎಂದು ಸಂಘಟನೆಯ ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ನ ರಾಜ್ಯ ಸಂಚಾಲಕ ಆವರಗೆರೆ ಚಂದ್ರು ತಿಳಿಸಿದ್ದಾರೆ.
ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಇಲಾಖೆಯ ಕೆಲಸಗಳಲ್ಲದೆ, ಇತರೆ ಇಲಾಖೆಗಳ ಕೆಲಸಗಳನ್ನು ಮಾಡುತ್ತಿರುವುದರಿಂದ ಕೆಲಸದ ಹೊರೆ ಜಾಸ್ತಿಯಾಗಿದೆ. ಆದ್ದರಿಂದ ನೂತನ ಸರ್ಕಾರವು ಜಾರಿಗೆ ತರುತ್ತಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಆಯ್ಕೆಯ ಕೆಲಸವನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ವಹಿಸದೆ ಕಂದಾಯ ಇಲಾಖೆಗೆ ವಹಿಸಬೇಕೆಂದು ಸಂಘಟನೆ ಸರ್ಕಾರಕ್ಕೆ ಆಗ್ರಹಿಸುತ್ತದೆ.