ದಾವಣಗೆರೆ, ಆ.26- ಅಮೆರಿಕಾದ ಮೇರಿ ಲ್ಯಾಂಡ್ ರಾಜ್ಯದ ಬಾಲ್ತಿಮೇರ್ ನಲ್ಲಿ ಮೃತಪಟ್ಟ ದಾವಣಗೆರೆ ಮೂಲದ ಕುಟುಂಬದ ಮಗು ಸೇರಿ ದಂಪತಿಯ ಮೃತದೇಹಗಳ ಅಂತ್ಯಕ್ರಿಯೆಯನ್ನು ಅಲ್ಲಿಯೇ ನೆರವೇರಿಸಲಾಗುತ್ತಿದ್ದು, ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.
ಕಳೆದ ಆಗಸ್ಟ್ 15ರಂದು ಅಮೆರಿಕಾದ ಮೇರಿ ಲ್ಯಾಂಡ್ ರಾಜ್ಯದ ಬಾಲ್ತಿಮೇರ್ ನಲ್ಲಿ ಜಗಳೂರು ತಾಲ್ಲೂಕಿನ ಹೊನ್ನಾಳ ಗ್ರಾಮದ ಯೋಗೇಶ್ ಅವರು ಪತ್ನಿ ಪ್ರತಿಭಾ ಹೊನ್ನಾಳ ಹಾಗೂ ಪುತ್ರ ಯಶ್ ಹೊನ್ನಾಳನಿಗೆ ಶೂಟ್ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಅಲ್ಲಿನ ಪೊಲೀಸರು ಬಹಿರಂಗಪಡಿಸಿಲ್ಲ.
ಯೋಗೇಶ್ ಹೊನ್ನಾಳ ತಾಯಿ ಶೋಭಾ, ಸಹೋದರ ಹಾಗೂ ಪ್ರತಿಭಾ ಯೋಗೇಶ್ ಹೊನ್ನಾಳ ತಾಯಿ ಹಾಗೂ ಸಹೋದರ ಅಮೆರಿಕಾ ತಲುಪಿದ್ದಾರೆ. ಇವರ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಲಿವೆ.
ಘಟನೆ ನಡೆದು ಎರಡರಿಂದ ಮೂರು ದಿನಗಳ ಬಳಿಕ ಈ ವಿಚಾರ ಗೊತ್ತಾಗಿತ್ತು. ಅಷ್ಟೊತ್ತಿಗೆ ಮೃತದೇಹಗಳು ಕೊಳೆತು ಹೋಗಿದ್ದವು. ಇನ್ನು ಘಟನೆ ನಡೆದ ಬಳಿಕ ಮೃತದೇಹಗಳನ್ನು ಕೋಲ್ಡ್ ಸ್ಟೋರೇಜ್ ನಲ್ಲಿಟ್ಟಿದ್ದರೂ ಮೃತದೇಹಗಳು ಪೂರ್ತಿಯಾಗಿ ಕೊಳೆತು ಹೋಗಿವೆ. ಹಾಗಾಗಿ ಮೃತದೇಹಗಳನ್ನು ಕಳುಹಿಸಿಕೊಡಲು ಕಷ್ಟವಾಗುತ್ತದೆ ಎಂದು ಬಾಲ್ಟಿಮೋರ್ ಕೌಂಟಿ ಪೊಲೀಸರು ಹಾಗೂ ಅಲ್ಲಿನ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.