ಸರ್ಕಾರಿ ಶಾಲೆಗಳಿಗೂ ಸ್ಮಾರ್ಟ್ ಕ್ಲಾಸ್

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ 

ದಾವಣಗೆರೆ, ನ. 6 – ಶಾಲಾ ಕೊಠಡಿಗಳ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಡಿಜಿಟಲ್ ಸ್ಮಾರ್ಟ್ ಕ್ಲಾಸ್‌ಗೆ ಕ್ರಮ ತೆಗೆದುಕೊಳ್ಳ ಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯ ದರ್ಶಿ ಗುಂಜನ್ ಕೃಷ್ಣ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣ ದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

186 ಶಾಲೆಗಳಿಗೆ 225 ಕೊಠಡಿ ಗಳನ್ನು 31.70 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಆದಷ್ಟು ಬೇಗ ನಿರ್ಮಾಣ ಪೂರ್ಣಗೊಳಿಸಿ. ಉಳಿತಾಯವಾದ ಅನು ದಾನದಲ್ಲಿ, ಹೆಚ್ಚುವರಿ ಕೊಠ ಡಿ ನಿರ್ಮಿಸಿ ಎಂದವರು ಹೇಳಿದರು.

ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈಗಾಗಲೇ 19.46 ಕೋಟಿ ಅನುದಾನ ಬಿಡುಗಡೆ ಯಾಗಿದೆ. ಕಲಿಕೆ ಉತ್ತಮಗೊಳಿಸಲು ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರು ಕ್ರಮ ತೆಗೆದುಕೊಳ್ಳಬೇಕು. ಶಾಲೆಗಳಿಗೆ ಕಂಪ್ಯೂಟರ್ ಒದಗಿಸಿ ಬ್ರಾಡ್‍ಬ್ಯಾಂಡ್ ಸಂಪರ್ಕ ಕಲ್ಪಿಸಿ, ಶಿಕ್ಷಕರು ಆನ್‍ಲೈನ್‍ನಲ್ಲಿಯೇ ಎಲ್ಲಾ ತರಬೇತಿ ಪಡೆದುಕೊಂಡು ಸ್ಮಾರ್ಟ್ ಕ್ಲಾಸ್ ನಡೆಸಲು ಅವಕಾಶ ಇದೆ ಎಂದು ಗುಂಜನ್ ಕೃಷ್ಣ ಹೇಳಿದರು.

ಗ್ರಾಮೀಣ ಪ್ರದೇಶದಲ್ಲಿನ ಶುದ್ದ ಕುಡಿಯುವ ನೀರಿನ ನಿರ್ವಹಣೆಯನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ನಿರ್ವಹಿಸಲು ಅವ ಕಾಶ ಇದೆ. ಸಾರ್ವಜನಿಕ ಸಹಭಾಗಿತ್ವದ ಕಾರಣದಿಂದ ದಾವಣಗೆರೆ ಪಾಲಿಕೆಗೆ ಶುದ್ಧ ನೀರಿನ ಘಟಕಗಳ ಹೊರೆ ಇಲ್ಲ.  ಇದೇ ಮಾದರಿ ಗ್ರಾಮೀಣ ಘಟಕಗಳಿಗೂ ಅಳವಡಿಸಿ ಎಂದವರು ಇದೇ ಸಂದರ್ಭದಲ್ಲಿ ತಿಳಿಸಿದರು. ಜಿಲ್ಲೆಯಲ್ಲಿ 981 ಎಕರೆ ರೇಷ್ಮೆ ವಿಸ್ತರಣಾ ಪ್ರದೇಶವಿದ್ದು ಕಳೆದ ಎರಡು ವರ್ಷಗಳಲ್ಲಿ 115 ಎಕರೆಯನ್ನು ಹೊಸದಾಗಿ ವಿಸ್ತರಣೆ ಮಾಡಲಾಗಿದೆ ಎಂದು ಇಲಾಖೆ ಅಧಿಕಾರಿಗಳು ಸಭೆಗೆ ತಿಳಿಸಿದರು. 

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯಡಿ ಈ ವರ್ಷ 35 ಲಕ್ಷ ವಾರ್ಷಿಕ  ಮಾನವ ದಿನಗಳ ಗುರಿಯಲ್ಲಿ 195.40 ಕೋಟಿ ಕಾರ್ಮಿಕ ಆಯವ್ಯಯ ಗುರಿಯನ್ನು ಹೊಂದಲಾಗಿದೆ. ಅಕ್ಟೋಬರ್ ಅಂತ್ಯದವರೆಗೆ 24.05 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ. ಒಟ್ಟು ಜಿಲ್ಲೆಯಲ್ಲಿ 2,30,568 ಜಾಬ್ ಕಾರ್ಡ್‍ಗಳನ್ನು ವಿತರಿಸಲಾಗಿದೆ ಎಂದು ಉಪಕಾರ್ಯದರ್ಶಿ ಕೃಷ್ಣನಾಯ್ಕ್ ತಿಳಿಸಿದರು. 

ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ವಿ. ವೆಂಕಟೇಶ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!