ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್‌ ನಿಲ್ದಾಣ ಉದ್ಘಾಟನೆಗೆ ಒತ್ತಾಯ

ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್‌ ನಿಲ್ದಾಣ ಉದ್ಘಾಟನೆಗೆ ಒತ್ತಾಯ

ದಾವಣಗೆರೆ, ನ. 17- ನೂತನವಾಗಿ ನಿರ್ಮಾಣಗೊಂಡಿರುವ ನಗರದ ಡಾ. ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್ ನಿಲ್ದಾಣದ ಉದ್ಘಾಟನೆಯನ್ನು ಕೂಡಲೇ ನೆರವೇರಿಸುವಂತೆ ಜಿಲ್ಲಾ ಜೆಡಿಎಸ್ ಮುಖಂಡ ಎಂ.ಎನ್. ನಾಗರಾಜ್ ಜಿಲ್ಲಾ ಉಸ್ತುವಾರಿ ಸಚಿವರನ್ನು ಒತ್ತಾಯಿಸಿದ್ದಾರೆ.

ಈ ನಿಲ್ದಾಣದ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧಗೊಂಡಿದ್ದರೂ ಯಾವ ಕಾರಣಕ್ಕೆ ವಿಳಂಬ ನೀತಿ ಅನುಸರಿಸುತ್ತಿದೆ? ಎಂದು ಅವರು ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರನ್ನು ಪ್ರಶ್ನಿಸಿದ್ದಾರೆ.

ತಾತ್ಕಾಲಿಕವಾಗಿರುವ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಸಮರ್ಪಕ ಮೂಲಭೂತ ಸೌಕರ್ಯಗಳಿಲ್ಲದ ಕಾರಣ ಗ್ರಾಮಾಂತರ ಪ್ರದೇಶದ ಪ್ರಯಾಣಿಕರು ಪರದಾಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೇ ಯುವಜನರು ಆಟದ ಮೈದಾನವಿಲ್ಲದೆ ಪರದಾಡುತ್ತಿದ್ದು, ತಾತ್ಕಾಲಿಕ ಖಾಸಗಿ ಬಸ್ ನಿಲ್ದಾಣವನ್ನು ಸ್ಥಳಾಂತರಗೊಳಿಸುವುದರೊಂದಿಗೆ ಕ್ರೀಡಾ ಪಟುಗಳಿಗೆ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನವನ್ನು ಬಿಟ್ಟುಕೊಡುವಂತೆ ಅವರು ಆಗ್ರಹಿಸಿದ್ದಾರೆ.

ವಾಯುವಿಹಾರಕ್ಕೂ ಕೂಡ ಜನರು ಪರದಾಡುತ್ತಿದ್ದು, ಅವರಿಗೂ ಸಹ ಈ ಮೈದಾನವನ್ನು ಬಿಟ್ಟು ಕೊಡುವಂತೆ ನಾಗರಾಜ್ ಒತ್ತಾಯಿಸಿದ್ದಾರೆ.

ಬಸ್ ನಿಲ್ದಾಣದ ಕಾಮಗಾರಿ ಪೂರ್ಣಗೊಳ್ಳಲಿ : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಉಳಿದಿರುವ ಅಲ್ಪ ಸ್ವಲ್ಪ ಕಾಮಗಾರಿಯನ್ನೂ ಚುರುಕುಗೊಳಿಸಿ, ತತ್‌ಕ್ಷಣವೇ ಪೂರ್ಣಗೊಳಿಸುವ ಮೂಲಕ ಉದ್ಘಾಟನೆಯನ್ನು ನೆರವೇರಿಸಬೇಕು. ಈ ಮೂಲಕ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿರುವ ತಾತ್ಕಾಲಿಕ ಬಸ್ ನಿಲ್ದಾಣವನ್ನು ಸ್ಥಳಾಂತರಗೊಳಿಸುವುದರ ಮೂಲಕ ಕ್ರೀಡಾಪಟುಗಳಿಗೆ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನವನ್ನು ಬಿಟ್ಟುಕೊಡುವಂತೆ ನಾಗರಾಜ್ ಒತ್ತಾಯಿಸಿದ್ದಾರೆ.

error: Content is protected !!