ನಗರದಲ್ಲಿ ಇಂದು ಉತ್ತಮ ಮಹಿಳಾ ಉದ್ಯಮಿ ಪ್ರಶಸ್ತಿ ಪ್ರದಾನ

ದಾವಣಗೆರೆ, ಡಿ. 20- ವನಿತಾ ಸಮಾಜದ ಅಂಗ ಸಂಸ್ಥೆಯಾದ `ಪ್ರೇರಣಾ’ ಜಿಲ್ಲಾ ಮಹಿಳಾ ಉದ್ಯಮಿಗಳ ಸಂಸ್ಥೆ ವತಿಯಿಂದ ನಾಳೆ ದಿನಾಂಕ 21 ರ ಗುರುವಾರ ಸಂಜೆ 4.30 ಕ್ಕೆ ನಗರದ ವನಿತಾ ಸಮಾಜದ ಆವರಣದಲ್ಲಿ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆ, ಮಹಿಳೆಯರು ಉತ್ಪಾದಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ, ಉತ್ತಮ ಮಹಿಳಾ ಉದ್ಯಮಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರೇರಣಾ ಸಂಸ್ಥೆಯ ಅಧ್ಯಕ್ಷೆ ಉಮಾ ನಾಗರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಾಳೆ ದಿನಾಂಕ 21 ರ ಗುರುವಾರ ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ಮಹಿಳೆಯರು ಉತ್ಪಾದಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.

ಸುಮಾರು 25 ಮಳಿಗೆಗಳಲ್ಲಿ ಮಹಿಳೆಯರು ತಯಾರಿಸಿದ ವಸ್ತುಗಳ ಪ್ರದರ್ಶನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಎಸ್.ಎಸ್.ಕೇರ್ ಟ್ರಸ್ಟ್ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾರ್ಜುನ್, ಸಿ. ನಾಸೀರ್ ಅಹಮದ್, ಹಿರಿಯ ವೈದ್ಯ ಡಾ. ಬಿ.ಎಸ್. ನಾಗಪ್ರಕಾಶ್, ನಳಿನಿ ಅಚ್ಯುತ್  ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

ನಾಗಮ್ಮ ಕೇಶವಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಬಾರಿ ಸಿರಿಧಾನ್ಯ ಬೆಳೆದು ಯಶಸ್ವೀ ಉದ್ಯಮಿಗಳಾಗಿರುವ ಹರಿಹರದ ತಾಲ್ಲೂಕು ನಿಟ್ಟೂರಿನ  ಸರೋಜ ಪಾಟೀಲ್ ಅವರಿಗೆ ಉತ್ತಮ ಮಹಿಳಾ ಉದ್ಯಮಿ ಪ್ರಶಸ್ತಿ ನೀಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಾಗರತ್ನ ಜಗದೀಶ್, ಆಶಾ ಪಾಟೀಲ್, ನಂದಿನಿ, ಸುಚಿತ್ರ ಉಪಸ್ಥಿತರಿದ್ದರು. 

error: Content is protected !!