ದಾವಣಗೆರೆ, ಜ. 24- ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್, ಹಟ್ಟಿ ಚಿನ್ನದ ಗಣಿ ಕಂ.ನಿ., ಹಾಗೂ ಮಾನವ ಬಂಧುತ್ವ ವೇದಿಕೆ ಸಹಯೋಗದಲ್ಲಿ ಹರಿಹರದ ಮೈತ್ರಿ ವವನದಲ್ಲಿ ನಾಡಿದ್ದು ದಿನಾಂಕ 26 ರಿಂದ 3 ದಿನಗಳ ಕಾಲ ಕೌಶಲ್ಯ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಡಾ.ಎ.ಬಿ. ರಾಮಚಂದ್ರಪ್ಪ, ಮೌಢ್ಯವೇ ಪ್ರಧಾನವಾಗುತ್ತಿರುವ ಈ ಸಂದರ್ಭ ದಲ್ಲಿ ವೈಜ್ಞಾನಿಕತೆ, ವೈಚಾರಿಕತೆಗೆ ಪೂರಕವಾಗಿ ಈ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.
ದಿನಾಂಕ 26ರಂದು ಸಂಜೆ 6 ಗಂಟೆಗೆ ತಾವು ಉದ್ಘಾಟಿಸಲಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಸಾಣೇಹಳ್ಳಿ ಡಾ. ಪಂಡಿತಾರಾಧ್ಯ ಸ್ವಾಮೀಜಿ ವಹಿಸಲಿದ್ದಾರೆ. ಡಾ.ಹುಲಿಕಲ್ ನಟರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ದಿನಾಂಕ 27ರಂದು ಸಂವಾದ, ಚರ್ಚೆಗಳಾಗಲಿವೆ. 28ರಂದು ಮಧ್ಯಾಹ್ನ 2.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಸಾನ್ನಿಧ್ಯವನ್ನು ಪಾಂಡೋಮಟ್ಟಿಯ ಶ್ರೀ ಗುರುಬಸವ ಸ್ವಾಮೀಜಿ ವಹಿಸಲಿದ್ದಾರೆ. ಇದೇ ವೇಳೆ `ವಿಜ್ಞಾನ ಸಿರಿ’ ಸಂಚಿಕೆಯನ್ನು ಹಟ್ಟಿ ಚಿನ್ನದ ಗಣಿ ವ್ಯವಸ್ಥಾಪಕ ಸಂಜಯ್ ಬಿ.ಶೆಟ್ಟಣ್ಣನವರ ಬಿಡುಗಡೆ ಮಾಡಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಶಿವಕುಮಾರ್ ಮಾಡಾಳು, ಜಗದೀಶ್, ಅಣ್ಣಪ್ಪ ಉಪಸ್ಥಿತರಿದ್ದರು.