ನೀಟ್ ಪರೀಕ್ಷೆ ತಡೆ ಹಿಡಿಯಬೇಕು, ನೆಟ್‌ ಮರುಪರೀಕ್ಷೆ ದಿನಾಂಕ ಪ್ರಕಟಿಸಿ

ದಾವಣಗೆರೆ, ಜೂ. 20- ಪ್ರಕರಣವು ತಾರ್ಕಿಕ ಅಂತ್ಯ ತಲುಪುವವರೆಗೂ ನೀಟ್ ಕೌನ್ಸೆಲಿಂಗ್ ತಡೆ ಹಿಡಿಯಬೇಕು. ನೆಟ್ ಮರು ಪರೀಕ್ಷೆ ದಿನಾಂಕವನ್ನು ಕೂಡಲೇ ಪ್ರಕಟಿಸಿ, ನೇರವಾಗಿ ಯುಜಿಸಿಯೇ  ಪರೀಕ್ಷೆ ನಡೆಸಬೇಕೆಂದು ಎಐಡಿಎಸ್‌ಓ ರಾಜ್ಯ ಕಾರ್ಯದರ್ಶಿ ಅಜಯ ಕಾಮತ್ ಒತ್ತಾಯಿಸಿದ್ದಾರೆ.

ನೀಟ್ ಯುಜಿಸಿಯಲ್ಲಿನ ಭ್ರಷ್ಟಾಚಾರ ಹೊರ ಬಿದ್ದಿರುವ ಬೆನ್ನಲ್ಲೇ, ಎನ್ ಟಿಎ ಯಿಂದ ಆಯೋಜಿಸಲ್ಪಟ್ಟ ನೆಟ್ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯವು ರದ್ದುಗೊಳಿಸಿದೆ. ಪರೀಕ್ಷೆ ನಡೆದ ಮರುದಿನವೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಮೊನ್ನೆ ನೀಟ್ ಆದರೆ ಇಂದು ನೆಟ್ ಪರೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಕೇಳಿ ಬಂದಿದೆ. ಮಿಲಿಯಾಂತರ ವಿದ್ಯಾರ್ಥಿ ಗಳು ವರ್ಷಗಟ್ಟಲೇ ಈ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ. ನೀಟ್ ಪರೀಕ್ಷೆ ಯಲ್ಲಿ ನಡೆದ ಗಂಭೀರ ಪ್ರಮಾಣದ ಅವ್ಯವಹಾರವನ್ನು ಚಿಕ್ಕದೆಂದು ಬಿಂಬಿಸಲು ಶಿಕ್ಷಣ ಸಚಿವಾಲಯ ಮತ್ತು ಎನ್‌ಟಿಎ ಪ್ರಯತ್ನಿಸುತ್ತಲೇ ಇವೆ. ನೆಟ್ ಪರೀಕ್ಷೆಯಲ್ಲಿ ನಡೆದ ಅವ್ಯವಹಾರಗಳು ಈ ಪ್ರಕರಣದ ತೀವ್ರತೆಯನ್ನು ಪ್ರತಿಬಿಂಬಿಸುತ್ತಿವೆ. 

ಅಷ್ಟೇ ಅಲ್ಲದೆ, ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಪಾವಿತ್ರ್ಯತೆ ಕಾಪಾಡಲು ಪರೀಕ್ಷೆ ನಡೆದ ಮರು ದಿನವೇ ಅದನ್ನು ರದ್ದು ಪಡಿಸಿ ಸಿಬಿಐಗೆ ಒಪ್ಪಿಸಲಾಗಿದೆ. ಈ ನಡೆಯು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. 

ಪರೀಕ್ಷಾ ಕೇಂದ್ರಗಳಿಗೆ ತಲುಪಲು ದೂರದ ಪ್ರಯಾಣ, ವಸತಿ, ಅಧಿಕ ಪ್ರಮಾಣದ ಪರೀಕ್ಷಾ ಶುಲ್ಕ ಸೇರಿದಂತೆ ಮಿಲಿಯಾಂತರ ಅಭ್ಯರ್ಥಿಗಳ ವೆಚ್ಚಕ್ಕೆ ಯಾರು ಹೊಣೆ? ಎಲ್ಲದಕ್ಕೂ ಮಿಗಿಲಾಗಿ ಎನ್.ಟಿ.ಎ ಪ್ರದರ್ಶಿಸುತ್ತಿರುವ ಬೇಜವಾಬ್ದಾರಿ, ಅಸಮರ್ಥತೆ ಮತ್ತು ಪಾರದರ್ಶಕತೆಯ ಕೊರತೆಯು ಮಿಲಿಯಾಂತರ ಅಭ್ಯರ್ಥಿಗಳ ಭವಿಷ್ಯವನ್ನು ಅತಂತ್ರಕ್ಕೆ ದೂಡಿದೆ.

ವ್ಯಾಪಾರೀಕರಣ, ಅನಾರೋಗ್ಯಪೀಡಿತ ಸ್ಪರ್ಧೆ ಮತ್ತು ವ್ಯಾಪಕ ಭ್ರಷ್ಟಾಚಾರ ಜಾರಿಯಲ್ಲಿರುವಾಗ, ಒಂದು ಕೇಂದ್ರೀಕೃತ ಪರೀಕ್ಷೆಯು ಭ್ರಷ್ಟಾಚಾರದ ಏಕಸ್ವಾಮ್ಯಾಧಿಕಾರವನ್ನುಂಟು ಮಾಡಬಲ್ಲದೆ ಹೊರತು, ಈ ಯಾವ ಸಮಸ್ಯೆಯನ್ನೂ ಪರಿಹರಿಸುವುದಿಲ್ಲ ಎಂದು ಅಜಯ ಕಾಮತ್ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ, ನೀಟ್ ಮತ್ತು ನೆಟ್ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮದ ಕುರಿತು ಸಮರೋಪಾದಿಯಲ್ಲಿ ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು. ಶಿಕ್ಷಕರು ಮತ್ತು ಸೌಲಭ್ಯಗಳನ್ನು ಒದಗಿಸಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು ಹಾಗೂ ಪ್ರಬಲ ಕೋಚಿಂಗ್ ಸಂಸ್ಥೆಗಳ ಮೇಲೆ ನಿಬಂಧನೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

error: Content is protected !!